May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ರೈತರ ಜೊತೆಗೂಡಿ ಶಾಲಾ ವಿದ್ಯಾರ್ಥಿನಿಯರ ಭತ್ತದ ನಾಟಿ – ‘ಪ್ರತಿಫಲ’ ದೊರಕಿದ  ಹೆಡ್‌ ಮಾಸ್ಟರ್‌ ಕೃಷಿ ಪಾಠ

ಗಂಗಾವತಿ: ಕೃಷಿ ಎಂದರೆ ಮೂಗು ಮುರಿಯುವ ಈ ದಿನಮಾನಗಳಲ್ಲಿ ಮಕ್ಕಳಲ್ಲಿ ಅದರಲ್ಲೂ ವಿದ್ಯಾರ್ಥಿಗಳಲ್ಲಿ ವಿಶೇಷ ಆಸಕ್ತಿ, ಒಲವು ಮೂಡಿಸಬೇಕು ಎಂಬ ಇಲ್ಲಿನ ಶಾಲೆಯೊಂದರ ಮುಖ್ಯ ಶಿಕ್ಷಕರ ನಿರಂತರ ಶ್ರಮ ಫಲ ನೀಡಿದೆ. ಕಾರಟಗಿ ತಾಲೂಕಿನ ಸಿದ್ದಾಪುರ ಗ್ರಾಮದ ಕಸ್ತೂರಬಾ ಗಾಂಧಿ ಬಾಲಿಕಾ ವಿದ್ಯಾಲಯದ ವಿದ್ಯಾರ್ಥಿನಿಯರು, ಕಳೆದ ನಾಲ್ಕು ತಿಂಗಳಿಂದ ಪಾಠ-ಪ್ರವಚನದೊಂದಿಗೆ, ಕೃಷಿಯಲ್ಲೂ ಖುಷಿ ಕಂಡಿದ್ದಾರೆ. ನಿರಂತರ ಪರಿಶ್ರಮದ ಫಲವಾಗಿ ಮಂಗಳವಾರ ಕೈ ಸೇರಿದ 60 ಚೀಲ ಭತ್ತದ ಫಸಲು ಕಂಡು ವಿದ್ಯಾರ್ಥಿನಿಯರು ಸಂಭ್ರಮಿಸಿದರು.

ಸಿದ್ದಾಪುರ ಗ್ರಾಮದ ವಸತಿ ನಿಲಯದ ಸಮೀಪದ ರೈತರ ಜಮೀನಿನಲ್ಲಿ ಒಂದು ಎಕರೆ ಭೂಮಿಯನ್ನು ಮಕ್ಕಳ ಚಟುವಟಿಕೆಗೆಂದು ಮೀಸಲಿಡಲಾಗಿತ್ತು. ಇದರಲ್ಲಿ ಕಳೆದ ಆಗಸ್ಟ್​​ನಲ್ಲಿ ರೈತರ ನೆರವಿನಿಂದ ಮಕ್ಕಳು ಭತ್ತ ಬಿತ್ತನೆ ಮಾಡಿದ್ದರು. ಇದೀಗ ಕೊಯ್ಲು ಮಾಡಿದ್ದು 60 ಚೀಲ ಭತ್ತದ ಫಸಲು ಬಂದಿದೆ. ಮಕ್ಕಳಿಗೆ ಪಠ್ಯದೊಂದಿಗೆ ಕೃಷಿಯ ಬಗ್ಗೆ ಆಸಕ್ತಿ ಬೆಳೆಸಬೇಕು ಎಂಬ ಉದ್ದೇಶದಿಂದ ವಸತಿ ಶಾಲೆಯ ಮುಖ್ಯ ಶಿಕ್ಷಕ ಚಂದ್ರಶೇಖರ್ ಗಣವಾರಿ ಅವರು ವಸತಿ ನಿಲಯದ ಸಮೀಪದ ರಾಜಾಸಾಬ ಮತ್ತು ಅಮ್ಮಾಸಾಬ ಎಂಬ ಇಬ್ಬರಿಗೆ ಸೇರಿದ ಹೊಲಕ್ಕೆ ಕಳೆದ ಆಗಸ್ಟ್ ತಿಂಗಳಲ್ಲಿ ಮಕ್ಕಳನ್ನು ಕರೆದೊಯ್ದಿದ್ದರು.

ಈ ಸಂದರ್ಭದಲ್ಲಿ ಮಕ್ಕಳು ತಾವೇ ಕೆಸರು ಗದ್ದೆಗಿಳಿದು ರೈತ ಮಹಿಳೆಯರೊಂದಿಗೆ ಭತ್ತ ನಾಟಿ ಮಾಡುವ ವಿಧಾನ, ಸಸಿ ಮಡಿ ಹಾಕುವ ರೀತಿ, ಭೂಮಿ ಹದ ಮಾಡುವ ಕುರಿತಾಗಿ ಮಾಹಿತಿ ಪಡೆದಿದ್ದರು. ನಾಟಿಯ ಬಳಿಕ ಯಾವ ಸಮಯದಲ್ಲಿ ಗೊಬ್ಬರ ಹಾಕಬೇಕು, ಉತ್ತಮ ಬೆಳೆ ತೆಗೆಯಲು ಏನೆಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು ಎಂಬಿತ್ಯಾದಿ ಪೂರಕ ಮಾಹಿತಿ ಪಡೆದಿದ್ದರು. ಸ್ವತಂತ್ರವಾಗಿ ನಾಟಿ ಮಾಡುವ ಬಗ್ಗೆ ಮಕ್ಕಳು ಆಸಕ್ತಿ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಮುಖ್ಯ ಶಿಕ್ಷಕರು ವೇದಿಕೆ ಕಲ್ಪಿಸಿಕೊಟ್ಟಿದ್ದಾರೆ. ರೈತರ ಮೊನವೊಲಿಸಿ ಇಬ್ಬರು ರೈತರಿಗೆ ಸೇರಿದ ಜಮೀನಿನಲ್ಲಿ ಎಂಟು ಮಡಿ ಅಂದರೆ ಒಂದೂವರೆ ಎಕರೆ ಜಮೀನು ಮಕ್ಕಳಿಗೆ ಮೀಸಲಿಡುವಂತೆ ಕೋರಿದ್ದರು.

ರೈತರ ಮಾರ್ಗದರ್ಶನದಲ್ಲಿ ನಾಟಿ ಮಾಡಿದ್ದ ಮಕ್ಕಳು, ಆಗಸ್ಟ್​​ನಿಂದ ಇಲ್ಲಿಯವರೆಗೂ ಪ್ರತಿ ಹದಿನೈದು ದಿನಕ್ಕೊಮ್ಮೆ ಶಾಲೆಗೆ ಬಿಡುವಾದಾಗ, ಭಾನುವಾರ ರಜೆಯಂತಗ ದಿನಗಳಲ್ಲೂ ಹೊಲಕ್ಕೆ ಹೋಗಿ ಗೊಬ್ಬರ ಹಾಕುವುದು, ಕಳೆ ನಿವಾರಿಸುವ ಕೆಲಸ ಮಾಡಿದ್ದಾರೆ. ಇದೀಗ ಮಕ್ಕಳು ನಾಟಿ ಮಾಡಿದ ಭತ್ತದ ಗದ್ದೆ ಕೊಯ್ಲಿಗೆ ಬಂದಿದ್ದು, ಅರವತ್ತು ಚೀಲ ಭತ್ತ ಬೆಳೆಯಲಾಗಿದೆ. ವಿದ್ಯಾರ್ಥಿನಿಯರಾದ ಅದೀಬಾ, ಜಾಹೇದಾ, ಫಾತಿಮಾ, ರೇಷ್ಮಾ, ರೋಷನಿ, ರಾಬಿಯಾ, ಆಲಿಯಾ ಸೇರಿದಂತೆ ಹಲವು ಮಕ್ಕಳು ಕೃಷಿ ಚಟುವಟಿಕೆಯಲ್ಲಿ ಪಾಲ್ಗೊಂಡಿದ್ದರು.

“ಮಕ್ಕಳಿಗೆ ಕೃಷಿಯ ಬಗ್ಗೆ ಆಸಕ್ತಿ ಮೂಡಿಸುವುದು ನಮ್ಮ ಮೂಲ ಉದ್ದೇಶ. ಇದರ ಜೊತೆಗೆ ರೈತನ ಮೇಲೆ ಅಭಿಮಾನ ಮೂಡಬೇಕು. ನಾವು ತಿನ್ನುವ ಆಹಾರದ ಪ್ರತೀ ತುತ್ತಿನ ಮಹತ್ವ ಗೊತ್ತಾಗಬೇಕು ಎಂಬ ಕಾರಣಕ್ಕೆ ಕೃಷಿ ಪಾಠ ಮಾಡಲಾಗಿದೆ” ಎಂದು ಸಿದ್ದಾಪುರದ ಕಸ್ತೂರಬಾ ಗಾಂಧಿ ಬಾಲಿಕಾ ವಿದ್ಯಾಲಯದ ಮುಖ್ಯ ಶಿಕ್ಷಕ ಚಂದ್ರಶೇಖರ್ ಗಣವಾರಿ ಹೇಳಿದರು. “ಕೃಷಿ ದೇಶದ ಆರ್ಥಿಕ ಪ್ರಗತಿಯ ಬೆನ್ನೆಲುಬು. ಹೀಗಾಗಿ ಮಕ್ಕಳಿಗೆ ಪ್ರಾಥಮಿಕ ಹಂತದಿಂದಲೇ ರೈತರ ಬಗ್ಗೆ ಅಭಿಮಾನವಿರಬೇಕು. ರೈತ ಬೆಳೆಯುವ ಪ್ರತಿಯೊಂದು ತುತ್ತಿನ ಆಹಾರ ಎಷ್ಟು ಕಷ್ಟದಿಂದ ಬರುತ್ತದೆ ಎಂಬುದು ಮನವರಿಕೆಯಾಗಬೇಕು ಎಂಬ ಉದ್ದೇಶ ಪ್ರಾಯೋಗಿಕ ಕೃಷಿ ಪಾಠದ ಹಿಂದಿದೆ” ಎಂದು ಚಂದ್ರಶೇಖರ್ ವಿವರಿಸಿದರು.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page