ಸಾರಿಗೆ ಇಲಾಖೆ ಮಕ್ಕಳ ಸ್ನೇಹಿ ಸಾರಿಗೆ ಇಲಾಖೆಯಾಗಬೇಕು – ಡಾ. ತಿಪ್ಪೇಸ್ವಾಮಿ ಕೆ.ಟಿ.

ಮಂಗಳೂರು ಫೆಬ್ರವರಿ 20 :- ಶಾಲಾ ಮಕ್ಕಳ ಶಿಕ್ಷಣದಲ್ಲಿ ಸಾರಿಗೆ ಇಲಾಖೆಯು ಮಹತ್ತರವಾದ ಜವಾಬ್ದಾರಿಯನ್ನು ಹೊಂದಿದ್ದು, ಸಾರಿಗೆ ಇಲಾಖೆಯನ್ನು ಮಕ್ಕಳ ಸ್ನೇಹಿಯಾಗಿ ರೂಪುಗೊಳಿಸಿ ಸಾರಿಗೆ ಇಲಾಖೆಯಲ್ಲಿನ ಮಕ್ಕಳ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ. ತಿಪ್ಪೇಸ್ವಾಮಿ ಕೆ.ಟಿ ಹೇಳಿದರು.
ಅವರು ಫೆಬ್ರವರಿ 19ರಂದು ಬುಧವಾರ ಮಂಗಳೂರಿನ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣ ಅಧಿಕಾರಿಗಳ ಕಚೇರಿಯಲ್ಲಿ ನಡೆದ ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ನೀತಿ 2016 ಮತ್ತು ಮಕ್ಕಳ ಸ್ನೇಹಿ ಸಾರಿಗೆ ವ್ಯವಸ್ಥೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಸಾರಿಗೆ ಬಸ್ ಗಳಲ್ಲಿ ಕಡ್ಡಾಯವಾಗಿ ಮಕ್ಕಳ ಸಹಾಯವಾಣಿ 1098 ಮತ್ತು ಪೋಲಿಸ್ ಸಹಾಯವಾಣಿ 112ಗಳ ಬಗ್ಗೆ ಮಾಹಿತಿ ಪ್ರದರ್ಶಿಸಬೇಕು. ಬಸ್ ಚಾಲಕರಿಗೆ ಮತ್ತು ನಿರ್ವಾಹಕರಿಗೆ ಮಕ್ಕಳ ರಕ್ಷಣಾ ಕಾಯ್ದೆ ಮತ್ತು ಮಕ್ಕಳ ಕಾನೂನುಗಳ ಬಗ್ಗೆ ತರಬೇತಿ ನೀಡಬೇಕು ಹಾಗೂ ಸಾರಿಗೆ ವ್ಯವಸ್ಥೆಯಲ್ಲಿ ಮಕ್ಕಳಿಗಾಗುವ ಸಮಸ್ಯೆಗಳ ಕುರಿತು ಇಲಾಖೆ ಕೈಗೊಂಡಿರುವ ಕ್ರಮಗಳ ಬಗ್ಗೆ ಪರಿಶೀಲಿಸಿ ಇಲಾಖೆಯನ್ನು ಮಕ್ಕಳ ಸ್ನೇಹಿ ಸಾರಿಗೆಯನ್ನಾಗಿ ಮಾಡಲು ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಸಲಹೆಗಳನ್ನು ನೀಡಿದರು.
ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕುಮಾರ್, ಜಿಲ್ಲೆಯ KSRTC ಅಧಿಕಾರಿಗಳು, ಮಕ್ಕಳ ರಕ್ಷಣಾಧಿಕಾರಿ ಅಸಾಂಸ್ಥಿಕ ವಜೀರ್ ಅಹಮ್ಮದ್, ಮಕ್ಕಳ ಸಹಾಯವಾಣಿ ಸಂಯೋಜಕ ಗಣೇಶ್ ಉಪಸ್ಥಿತರಿದ್ದರು.