July 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಜೂನ್ ಮೊದಲನೇ ವಾರದಿಂದ ಕಲ್ಲಡ್ಕ ಫ್ಲೈ ಓವರ್ ಸಂಚಾರಕ್ಕೆ ಮುಕ್ತ – ಕ್ಯಾಪ್ಟನ್ ಬ್ರಿಜೇಶ್ ಚೌಟ

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಖಡಕ್ ಸೂಚನೆ

ನಿರೀಕ್ಷೆಗೂ ಮೊದಲೇ ಮಳೆಗಾಲ ಪ್ರಾರಂಭವಾಗಿದ್ದು, ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬಿ.ಸಿ. ರೋಡ್‌-ಅಡ್ಡಹೊಳೆ ಚತುಷ್ಪಥ ಕಾಮಗಾರಿ ಅಂತಿಮ ಹಂತದ ಪ್ರಗತಿಯಲ್ಲಿರುವ ಕಾರಣ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕಲ್ಲಡ್ಕ ಫ್ಲೈಓವರ್‌ ಸೇರಿದಂತೆ ಕೆಲವೆಡೆ ವಾಹನಗಳ ಸುಗಮ ಸಂಚಾರಕ್ಕೆ ರಸ್ತೆಯನ್ನು ತೆರವುಗೊಳಿಸಿ ಅನುಕೂಲ ಮಾಡಿಕೊಡುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸೂಚನೆ ನೀಡಿರುವುದಾಗಿ ಸಂಸದ ಕ್ಯಾಪ್ಟನ್ ಬ್ರಿಜೇಶ್‌ ಚೌಟ ಹೇಳಿದ್ದಾರೆ. ಮುಂಗಾರು ಚುರುಕುಗೊಂಡಿರುವ ಕಾರಣ ಮಂಗಳೂರು-ಬೆಂಗಳೂರು ಹೆದ್ದಾರಿಯಲ್ಲಿ ಬಿ.ಸಿ. ರೋಡ್‌-ಅಡ್ಡಹೊಳೆ ಚತುಷ್ಪಥ ರಸ್ತೆ ಕಾಮಗಾರಿಯಿಂದಾಗಿ ವಾಹನಗಳ ಸಂಚಾರಕ್ಕೆ ಅಡ್ಡಿ-ಆತಂಕ ಎದುರಾಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದಿವೆ. ಈ ಹಿನ್ನಲೆಯಲ್ಲಿ ಎಲ್ಲೆಲ್ಲಿ ಕಾಮಗಾರಿಯಿಂದ ವಾಹನಗಳ ಸಂಚಾರಕ್ಕೆ ತೊಂದರೆ ಎದುರಾಗಿದೆಯೋ ಅಲ್ಲೆಲ್ಲ ಸಮಸ್ಯೆಗಳಿಗೆ ತುರ್ತಾಗಿ ಸ್ಪಂದಿಸಿ ಜನರ ಓಡಾಟಕ್ಕೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕೆಂದು ಕ್ಯಾಪ್ಟನ್ ಚೌಟರವರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಸದ್ಯ ಸರ್ವಪಕ್ಷದ ನಿಯೋಗದಲ್ಲಿ ವಿದೇಶದಲ್ಲಿರುವ ಕ್ಯಾಪ್ಟನ್ ಚೌಟರವರು ಮಳೆಗಾಲ ಪ್ರಾರಂಭವಾಗಿರುವ ಕಾರಣ ಬಿ.ಸಿ. ರೋಡ್‌-ಅಡ್ಡಹೊಳೆ ಹೆದ್ದಾರಿಯಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಯಾವುದೇ ತೊಂದರೆಯಾಗದಂತೆ ಹೆಚ್ಚಿನ ಮುತುವರ್ಜಿ ವಹಿಸಿ ಅಗತ್ಯ ಕ್ರಮ ಕೈಗೊಳ್ಳುವ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ನಿರಂತರ ಮಾತನಾಡಿ ಮಾಹಿತಿ ಪಡೆದುಕೊಂಡಿದ್ದಾರೆ. ಅಲ್ಲದೆ ಭಾರೀ ಮಳೆಯಿಂದಾಗಿ ಜಿಲ್ಲೆಯಲ್ಲಿ ಹೆದ್ದಾರಿ ಕಾಮಗಾರಿಗಳಿಂದ ಎಲ್ಲೆಲ್ಲಿ ತೊಂದರೆಯಾಗುತ್ತಿದೆ ಎಂಬ ಬಗ್ಗೆಯೂ ಅಧಿಕಾರಿಗಳಿಂದ ಮಾಹಿತಿ ಪಡೆದು ಅವುಗಳಿಗೆ ಆದ್ಯತೆ ಮೇರೆಗೆ ತುರ್ತಾಗಿ ಸ್ಪಂದಿಸುವುದಕ್ಕೆ ಸೂಚನೆ ಕೊಟ್ಟಿದ್ದಾರೆ.

ವಾಹನಗಳ ಸಂಚಾರಕ್ಕೆ ಮುಕ್ತ : ಹೆದ್ದಾರಿ ಪ್ರಾಧಿಕಾರವು ಮಾಣಿ ಬಳಿಯ ವೆಹಿಕಲ್ ಅಂಡರ್ ಪಾಸ್ ಹಾಗೂ ಉಪ್ಪಿನಂಗಡಿ ಬಳಿಯ ವೆಹಿಕಲ್ ಅಂಡರ್ ಪಾಸ್ ದ್ವಿಪಥವನ್ನು ಸಂಚಾರಕ್ಕೆ ಮುಕ್ತಗೊಳಿಸಿದೆ. ಅಲ್ಲದೆ, ಜೂ. 2ರಿಂದ ಕಲ್ಲಡ್ಕ ಪೇಟೆಯಲ್ಲಿರುವ ಮೇಲುರಸ್ತೆ (ಫ್ಲೈಓವರ್‌) ಯಲ್ಲಿ ಎಡಭಾಗವನ್ನು ವಾಹನಗಳ ಸಂಚಾರಕ್ಕೆ ತೆರವುಗೊಳಿಸಲಾಗುತ್ತದೆ. ಇನ್ನು ತುಂಬೆಯಲ್ಲಿ ನೀರು ನಿಲ್ಲುವ ಸಮಸ್ಯೆ ಪರಿಹರಿಸುವಂತೆಯೂ ಹೆದ್ದಾರಿ ಪ್ರಾಧಿಕಾರಕ್ಕೆ ಸೂಚಿಸಲಾಗಿತ್ತು. ಇದಕ್ಕೆ ಪರಿಹಾರವಾಗಿ ಎನ್.ಹೆಚ್.ಎ.ಐ. ಪೈಪ್ ಕಲ್ವರ್ಟ್ ಅಳವಡಿಸಿದ್ದು, ಕಾಮಗಾರಿ ಪೂರ್ಣಗೊಂಡರೆ ಇಲ್ಲಿಯೂ ಮಳೆಗಾಲದಲ್ಲಿ ವಾಹನಗಳ ಸಂಚಾರಕ್ಕೆ ಯಾವುದೇ ತೊಂದರೆಯಾಗುವುದಿಲ್ಲ. ಆ ಮೂಲಕ, ಕಾಮಗಾರಿ ಪ್ರಗತಿಯಲ್ಲಿರುವ ಜಿಲ್ಲೆಯ ಎಲ್ಲ ಹೆದ್ದಾರಿಗಳಲ್ಲಿಯೂ ಮಳೆಗಾಲದ ಸಮಸ್ಯೆಯಿಂದ ವಾಹನ ಸಂಚಾರಕ್ಕೆ ಯಾವುದೇ ತೊಂದರೆಯಾಗದಂತೆ ಸೂಕ್ತ ಕ್ರಮದ ಜತೆಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವುದಕ್ಕೆ ಸೂಚಿಸಿರುವುದಾಗಿ ಕ್ಯಾಪ್ಟನ್ ಚೌಟ ಹೇಳಿದ್ದಾರೆ. ಅಡ್ಡಹೊಳೆಯಿಂದ ಪೆರಿಯಶಾಂತಿವರೆಗಿನ 15.130 ಕಿ.ಮೀ.ಗಳ ಪೈಕಿ 14.4 ಕಿ.ಮೀ.ಗಳ ಚತುಷ್ಪಥದ ಕಾಮಗಾರಿ ಪೂರ್ಣಗೊಂಡಿದೆ. ಹಾಗೆಯೇ, ಪೆರಿಯಶಾಂತಿಯಿಂದ ಬಂಟ್ವಾಳದವರೆಗಿನ 48.485 ಕಿ.ಮೀ.ಗಳ ಪೈಕಿ 41.52 ಕಿ.ಮೀ.ಗಳ ಚತುಷ್ಪಥ ಕಾಮಗಾರಿ ಈಗಾಗಲೇ ಪೂರ್ಣಗೊಂಡಿದೆ.

You may also like

News

Father Muller Principal Wins Prestigious Global Young Investigator Award at MASCC/ISOO Congress in Australia

In a moment of immense pride for the nation and the physiotherapy fraternity, Prof. Cherishma Dsilva, Principal of Father Muller
News

ಮಂಗಳೂರಿನ ಸಂದೇಶ ಫೌಂಡೇಶನ್‌ನಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿಯ ಹೊಸ ಅಧ್ಯಾಯ

‘Mangalore IAS – A School for Civil Services’ಗೆ ಚಾಲನೆ ನೀಡಿದ ಬಳ್ಳಾರಿ ಧರ್ಮಕ್ಷೇತ್ರದ ಬಿಷಪ್ ಹೆನ್ರಿ ಡಿಸೋಜ ನಾಗರಿಕ ಸೇವೆಗಳ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ

You cannot copy content of this page