ಧರ್ಮಸ್ಥಳ ನಿಗೂಢ ಪ್ರಕರಣಗಳ ತನಿಖೆಗೆ ಹಿರಿಯ ಐಪಿಎಸ್ ಅಧಿಕಾರಿ ಡಾ. ಪ್ರಣವ್ ಮೊಹಾಂತಿ ನೇತ್ರತ್ವದಲ್ಲಿ ನಾಲ್ಕು ಜನರ ಎಸ್ಐಟಿ ತಂಡ
ದೇಶಾದ್ಯಂತ ತೀವ್ರ ಕುತೂಹಲ ಮತ್ತು ಚರ್ಚೆಗೆ ಗ್ರಾಸವಾಗಿದ್ದ ಧರ್ಮಸ್ಥಳ ಪೊಲೀಸ್ ಠಾಣೆಯ ಅಪರಾಧ ಪ್ರಕರಣ ಸಂಖ್ಯೆ 39/2025 ರ ತನಿಖೆಯನ್ನು ಕರ್ನಾಟಕ ಸರ್ಕಾರವು ವಿಶೇಷ ತನಿಖಾ ತಂಡಕ್ಕೆ (SIT) ವರ್ಗಾಯಿಸಿ ಮಹತ್ವದ ಆದೇಶ ಹೊರಡಿಸಿದೆ. ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರು ನೀಡಿದ ವರದಿಯನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ಸರ್ಕಾರ ಈ ಮಹತ್ವದ ನಿರ್ಧಾರ ಕೈಗೊಂಡಿದೆ. ಧರ್ಮಸ್ಥಳದ ಬಳಿ ನೂರಾರು ಶವಗಳನ್ನು ಹೂಳಲಾಗಿದೆ ಎಂಬ ವ್ಯಕ್ತಿಯೊಬ್ಬರ ನ್ಯಾಯಾಲಯದಲ್ಲಿನ ಹೇಳಿಕೆ, ಮಾನವ ತಲೆಬುರುಡೆ ಪತ್ತೆಯಾದ ಬಗ್ಗೆ ಮಾಧ್ಯಮ ವರದಿಗಳು ಹಾಗೂ ನಾಪತ್ತೆಯಾದ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರ ಕುಟುಂಬದ ಹೇಳಿಕೆಯನ್ನು ಆಯೋಗವು ತನ್ನ ಪತ್ರದಲ್ಲಿ ಉಲ್ಲೇಖಿಸಿತ್ತು.

ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಕಳೆದ ಎರಡು ದಶಕಗಳಲ್ಲಿ ನಡೆದಿದೆ ಎನ್ನಲಾದ ಮಹಿಳೆಯರ ಮತ್ತು ವಿದ್ಯಾರ್ಥಿನಿಯರ ಮೇಲಿನ ದೌರ್ಜನ್ಯ, ನಿಗೂಢ ಸಾವು ಮತ್ತು ನಾಪತ್ತೆ ಪ್ರಕರಣಗಳ ಸಮಗ್ರ ತನಿಖೆಗಾಗಿ ರಾಜ್ಯ ಸರ್ಕಾರವು ಹಿರಿಯ ಐಪಿಎಸ್ ಅಧಿಕಾರಿ ಡಾ. ಪ್ರಣವ್ ಮೊಹಾಂತಿ ಅವರ ನೇತೃತ್ವದಲ್ಲಿ ನಾಲ್ವರು ಸದಸ್ಯರ ವಿಶೇಷ ತನಿಖಾ ತಂಡವನ್ನು (SIT) ರಚಿಸಿ ಜುಲಾಯ್ 19ರಂದು ಶನಿವಾರ ಆದೇಶ ಹೊರಡಿಸಿದೆ. ಈ ಪ್ರಕರಣದ ಸಮಗ್ರ ತನಿಖೆಯನ್ನು ಕೈಗೊಳ್ಳಲು ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಎಸ್. ಅವಿಷ್ಕಾ, ಸರ್ಕಾರದ ಅಧೀನ ಕಾರ್ಯದರ್ಶಿ, ಒಳಾಡಳಿತ ಇಲಾಖೆ(ಅಪರಾಧಗಳು) ಇವರು ಆದೇಶ ಹೊರಡಿಸಿದ್ದಾರೆ.

ಈ ಕೆಳಕಂಡ ಅಧಿಕಾರಿಗಳನ್ನೊಳಗೊಂಡ ವಿಶೇಷ ತನಿಖಾ ತಂಡ (Special Investigation Team) ವನ್ನು ರಚಿಸಿ ಸರ್ಕಾರವು ಆದೇಶಿಸಿದೆ. ಡಾ|| ಪ್ರಣವ ಮೊಹಾಂತಿ, ಐ.ಪಿ.ಎಸ್., ಪೊಲೀಸ್ ಮಹಾ ನಿರ್ದೇಶಕರು, ಆಂತರಿಕ ಭದ್ರತಾ ವಿಭಾಗ, ಬೆಂಗಳೂರು. – ಮುಖ್ಯಸ್ಥರು, ಇತರ ಸದಸ್ಯರಾಗಿ (1) ಎಂ.ಎನ್ ಅನುಚೇತ್, ಐ.ಪಿ.ಎಸ್. ಉಪ ಪೊಲೀಸ್ ಮಹಾ ನಿರೀಕ್ಷಕರು, ನೇಮಕಾತಿ, ಬೆಂಗಳೂರು, (2) ಸೌಮ್ಯಲತ, ಐ.ಪಿ.ಎಸ್., ಉಪ ಪೊಲೀಸ್ ಆಯುಕ್ತರು, ಸಿ.ಎ.ಆರ್.ಕೇಂದ್ರಸ್ಥಾನ, ಬೆಂಗಳೂರು ನಗರ ಹಾಗೂ (3) ಜಿತೇಂದ್ರ ಕುಮಾರ್ ದಯಾಮ, ಐ.ಪಿ.ಎಸ್., ಪೊಲೀಸ್ ಅಧೀಕ್ಷಕರು, ಆಂತರಿಕ ಭದ್ರತಾ ವಿಭಾಗ, ಬೆಂಗಳೂರು. ಎಸ್ಐಟಿ ಅಧಿಕಾರ ವ್ಯಾಪ್ತಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಇತ್ತೀಚೆಗೆ ದಾಖಲಾದ ಪ್ರಕರಣ (ಮೊ.ಸಂ. 39/2025) ಸೇರಿದಂತೆ, ಈ ಸಂಬಂಧ ರಾಜ್ಯದ ಯಾವುದೇ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಅಥವಾ ಇನ್ನು ಮುಂದೆ ದಾಖಲಾಗಬಹುದಾದ ಎಲ್ಲಾ ಪ್ರಕರಣಗಳ ತನಿಖೆಯನ್ನು ಎಸ್ಐಟಿಗೆ ವಹಿಸಲಾಗಿದೆ.

ತನಿಖೆಗೆ ಬೇಕಾದ ಹೆಚ್ಚುವರಿ ಸಿಬ್ಬಂದಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಕಚೇರಿಯ ಸಂಪನ್ಮೂಲಗಳನ್ನು ಬಳಸಿಕೊಳ್ಳಲು ತಂಡಕ್ಕೆ ಅಧಿಕಾರ ನೀಡಲಾಗಿದೆ. ತಂಡವು ತನ್ನ ತನಿಖಾ ಪ್ರಗತಿಯನ್ನು ನಿಯಮಿತವಾಗಿ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ (ಡಿಜಿ-ಐಜಿಪಿ) ವರದಿ ಮಾಡಲಿದ್ದು, ಅಂತಿಮ ವರದಿಯನ್ನು ಶೀಘ್ರವಾಗಿ ಸರ್ಕಾರಕ್ಕೆ ಸಲ್ಲಿಸಲಿದೆ ಎಂದು ಸರ್ಕಾರದ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.




