August 30, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ರಾಜ್ಯದಲ್ಲಿ ಆಸ್ತಿ ಖರೀದಿ ನೋಂದಣಿ ಶುಲ್ಕ ದುಪ್ಪಟ್ಟು – ಇಂದಿನಿಂದಲೇ ಜಾರಿ

ಬಸ್ಸು, ವಿದ್ಯುತ್, ನೀರು, ಹಾಲು ಮೆಟ್ರೋ ದರ ಸೇರಿದಂತೆ ವಿವಿಧ ದರ ಹೆಚ್ಚಳ ಮಾಡಿದ ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತೆ ಬಿಗ್ ಶಾಕ್ ನೀಡಿದ್ದು ಇಂದಿನಿಂದಲೇ ಆಸ್ತಿ ಖರೀದಿ ನೋಂದಣಿ ಶುಲ್ಕ ದುಪ್ಪಟ್ಟಾಗಿದೆ. ಆಸ್ತಿ ಖರೀದಿ ನೋಂದಣಿ ಶುಲ್ಕವನ್ನು ಹಿಂದಿನ ದರಕ್ಕಿಂತ ದುಪ್ಪಟ್ಟು ದರಕ್ಕೆ ಏರಿಕೆ ಮಾಡಿ ನೋಂದಣಿ ಮತ್ತು ಮುದ್ರಾಂಕ ಇಲಾಖೆ ಆದೇಶ ಹೊರಡಿಸಿದೆ. ನೋಂದಣಿ ಶುಲ್ಕ ಶೇಕಡಾ 1 ರಿಂದ 2 ರಷ್ಟು ಏರಿಕೆ ಮಾಡಲಾಗಿದೆ. ಮಾರ್ಗಸೂಚಿ ದರದ ಪ್ರಮಾಣಕ್ಕೆ ಅನುಗುಣವಾಗಿ ನೋಂದಣಿ ಶುಲ್ಕ ನಿಗದಿ ಮಾಡಲಾಗಿದೆ ಎಂದು ನೋಂದಣಿ ಮತ್ತು ಮುದ್ರಾಂಕ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಈವರೆಗೂ ನಿವೇಶನ, ಭೂಮಿ, ಫ್ಲ್ಯಾಟ್, ಮನೆ ಸೇರಿದಂತೆ ಸ್ಥಿರಾಸ್ತಿ ಖರೀದಿ ವೇಳೆ ಶೇಕಡಾ 1ರಷ್ಟು ನೋಂದಣಿ ಶುಲ್ಕ ಹಾಗೂ ಶೇಕಡಾ 5.6ರಷ್ಟು ಮುದ್ರಾಂಕ ಶುಲ್ಕ ಸೇರಿ ಶೇಕಡಾ 6.6ರಷ್ಟು ಶುಲ್ಕ ಇತ್ತು. ಆದರೆ ಈಗ ಏರಿಕೆಯಿಂದ ಒಟ್ಟು ಶೇಕಡಾ 7.6ರಷ್ಟು ಶುಲ್ಕ ಪಾವತಿಸಬೇಕಾಗುತ್ತದೆ. ಕರ್ನಾಟಕ ರಾಜ್ಯ ಸರ್ಕಾರವು ಜಾರಿಗೊಳಿಸುತ್ತಿರುವ ಸ್ಥಿರಾಸ್ತಿ ಮೇಲಿನ ವ್ಯವಹಾರಗಳ ದಸ್ತಾವೇಜುಗಳಿಗೆ ವಿಧಿಸುತ್ತಿರುವ ನೋಂದಣಿ ಮತ್ತು ಮುದ್ರಾಂಕ ಶುಲ್ಕವು ನೆರೆಹೊರೆಯ ರಾಜ್ಯಗಳಲ್ಲಿರುವ ದರಗಳಿಗಿಂತ ಪ್ರಸ್ತುತ ಕಡಿಮೆ ಶುಲ್ಕ ಇದೆ. ಸದ್ಯ ಅದನ್ನು ಇತರೆ ರಾಜ್ಯಗಳ ಶುಲ್ಕಗಳೊಂದಿಗೆ ಸಮೀಕರಣ ಮಾಡಿ ಪರಿಷ್ಕರಿಸಲಾಗುತ್ತಿದೆ ಎಂದು ನೋಂದಣಿ ಮತ್ತು ಮುದ್ರಾಂಕ ಶುಲ್ಕ ಆಯುಕ್ತ ಮುಲೈ ಮುಗಿಲನ್ ಹೇಳಿದ್ದಾರೆ.

ಈ ಕುರಿತು ಪ್ರಕಟಣೆ ಹೊರಡಿಸಿದ ಅವರು ಮುದ್ರಾಂಕ, ನೋಂದಣಿ ಹಾಗೂ ಇತರೆ ಸೆಸ್ ಸೇರಿ ಕರ್ನಾಟಕ ರಾಜ್ಯವು ಶೇಕಡಾ 6.6ರಷ್ಟು ವಿಧಿಸುತ್ತಿತ್ತು. ಇದೇ ಅವಧಿಯಲ್ಲಿ ಈ ಶುಲ್ಕವು ತಮಿಳುನಾಡು ರಾಜ್ಯದಲ್ಲಿ ಶೇಕಡಾ 9, ಕೇರಳ ಶೇಕಡಾ 10, ಆಂಧ್ರಪ್ರದೇಶ ಶೇಕಡಾ 7.5, ತೆಲಂಗಾಣ ರಾಜ್ಯಗಳು ಶೇಕಡಾ 7.5ರಷ್ಟು ಶುಲ್ಕ ಅನುಸರಿಸುತ್ತಿವೆ. ದಸ್ತಾವೇಜುಗಳ ಮೇಲಿನ ಮುದ್ರಾಂಕ ಶುಲ್ಕ ಮತ್ತು ನೋಂದಣಿ ಶುಲ್ಕಗಳನ್ನು ಇತರೆ ರಾಜ್ಯಗಳೊಂದಿಗೆ ಸಮೀಕರಿಸಿಕೊಳ್ಳಲು ಆಡಳಿತಾತ್ಮಕ ಪ್ರಕ್ರಿಯೆಗಳನ್ನು ಬಲಪಡಿಸಲು ಮತ್ತು ನಾಗರಿಕರಿಗೆ ಉತ್ತಮ ಹಾಗೂ ಪರಿಣಾಮಕಾರಿ ಸೇವೆಯನ್ನು ನೀಡಲು ರಾಜ್ಯ ಸರ್ಕಾರವು 2025ರ ಆಗಸ್ಟ್ 31ರಿಂದ ಜಾರಿಗೆ ಬರುವಂತೆ ನೋಂದಣಿ ಶುಲ್ಕವನ್ನು ಶೇಕಡಾ 1 ರಿಂದ 2ರಷ್ಟು ಪರಿಷ್ಕರಿಸಿದೆ ಎಂದು ತಿಳಿಸಿದ್ದಾರೆ.

You may also like

News

ಸೆಪ್ಟೆಂಬರ್ 8ರಂದು ಮಾತೆ ಮರಿಯಳ ಜನ್ಮದಿನದ ಹಬ್ಬಕ್ಕೆ ಸಾರ್ವತ್ರಿಕ ರಜೆ ನೀಡಲು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರಿಗೆ ಮನವಿ

ಬೈಂದೂರು: ಸೆಪ್ಟೆಂಬರ್ 8ರಂದು ಆಚರಿಸಲಾಗುವ ಕ್ರೈಸ್ತ ಸಮುದಾಯದ ಪ್ರಮುಖ ಹಬ್ಬವಾದ ತೆನೆ ಹಬ್ಬ ಹಾಗೂ ಮಾತೆ ಮರಿಯಳ ಜನ್ಮದಿನದ ಹಬ್ಬದ ಅಂಗವಾಗಿ ಸಾರ್ವತ್ರಿಕ ರಜೆ ಘೋಷಿಸಬೇಕು ಎಂದು
News

ಪುತ್ತೂರು ಚಲೋಗೆ ಪೊಲೀಸ್ ಸರ್ಪಗಾವಲು – ಹಿರಿಯ ಅಧಿಕಾರಿಗಳು ಸೇರಿ ಭಾರೀ ಬಂದೋಬಸ್ತ್

ನಗರದಲ್ಲಿ ಇಂದು ಪೊಲೀಸ್ ಪಥಸಂಚಲನ ಪುತ್ತೂರು: ಆಗಸ್ಟ್ 31ರಂದು ಸೋಮವಾರ ನಡೆಯಲಿರುವ ಪುತ್ತೂರು ಚಲೋ ಕಾರ್ಯಕ್ರಮಕ್ಕೆ ಷರತ್ತುಬದ್ಧ ಅನುಮತಿಯನ್ನು ಪೊಲೀಸ್ ಇಲಾಖೆಯಿಂದ ನೀಡಲಾಗಿದೆ. ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕಾನೂನು

You cannot copy content of this page