April 30, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಧರ್ಮಸ್ಥಳದಲ್ಲಿ ಧರ್ಮಜಾಗೃತಿ ಸಮಾವೇಶ – ಸಹಕಾರಿ ಬಂಧುಗಳಿಂದ ಧರ್ಮಸ್ಥಳಕ್ಕೆ ಧರ್ಮಜಾಗೃತಿ ಯಾತ್ರೆ

ಸತ್ಯದ ಜೊತೆಗೆ ನಾವಿದ್ದೇವೆ – ಡಾ. ಮೋಹನ್ ಆಳ್ವ


ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಆಗುತ್ತಿರುವ ಅಪಪ್ರಚಾರ ಹಾಗೂ ಸುಳ್ಳು ವದಂತಿಯನ್ನು ಖಂಡಿಸಿ, ಜಾತಿ-ಮತ, ಪಕ್ಷ ಬೇಧ ಮರೆತು ಸರ್ವಸಹಕಾರಿಗಳೂ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಸಂಪೂರ್ಣ ಬೆಂಬಲಕ್ಕೆ ಹಾಗೂ ಧರ್ಮಸ್ಥಳದ ಪಾವಿತ್ರ್ಯೆಯ ರಕ್ಷಣೆಗೆ ಸದಾ ಸಿದ್ಧರೂ, ಬದ್ಧರೂ ಆಗಿದ್ದು, ಧರ್ಮಸ್ಥಳದ ಜೊತೆ ಸದಾ ಇರುತ್ತೇವೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ಭರವಸೆ ನೀಡಿದರು.


ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸಮಸ್ತ ಸಹಕಾರಿಗಳು ಸೆಪ್ಟೆಂಬರ್ 14ರಂದು ಭಾನುವಾರ ಧರ್ಮಸ್ಥಳಕ್ಕೆ ಧರ್ಮಜಾಗೃತಿ ಯಾತ್ರೆಯಲ್ಲಿ ಮೂರು ಸಾವಿರಕ್ಕೂ ಮಿಕ್ಕಿ ವಾಹನಗಳ ಜಾಥಾದಲ್ಲಿ ಬಂದು ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ ಧರ್ಮಜಾಗೃತಿ ಸಮಾವೇಶದಲ್ಲಿ ಅವರು ಮಾತನಾಡಿದರು. ಎಲ್ಲರೂ ಸದಾ ಪೂಜ್ಯ ಹೆಗ್ಗಡೆಯವರ ಜೊತೆಗಿದ್ದು, ಯಾರಿಗೂ ಅನ್ಯಾಯವಾಗದ ರೀತಿಯಲ್ಲಿ ಧರ್ಮಸ್ಥಳ ಕ್ಷೇತ್ರದ ರಕ್ಷಣೆ ಎಲ್ಲಾ ಭಕ್ತರು ಹಾಗೂ ಅಭಿಮಾನಿಗಳ ಕರ್ತವ್ಯವೂ, ಹೊಣೆಗಾರಿಕೆಯೂ ಆಗಿದ್ದು, ಇಂತಹ ಪವಿತ್ರ ಸೇವೆಯಿಂದ ಭಕ್ತರ ಮನಸ್ಸಿಗೂ ಶಾಂತಿ, ನೆಮ್ಮದಿ ದೊರಕುತ್ತದೆ ಎಂದು ಹೇಳಿದರು.


ಸತ್ಯದ ಜೊತೆಗೆ ನಾವಿದ್ದೇವೆ: ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಮಾತನಾಡಿ, ಸತ್ಯ, ಧರ್ಮ, ನ್ಯಾಯ, ನೀತಿ ಸದಾ ನೆಲೆ ನಿಂತಿರುವ ಧರ್ಮಸ್ಥಳದ ರಕ್ಷಣೆಗೆ ಎಲ್ಲರೂ ಕಟಿಬದ್ಧರಾಗಿದ್ದೇವೆ. “ಸತ್ಯಮೇವ ಜಯತೇ” ಎಂಬಂತೆ ಸತ್ಯಕ್ಕೆ ಸದಾ ಜಯವಿದೆ. ಸತ್ಯದ ಜೊತೆಗೆ ನಾವಿದ್ದೇವೆ ಎಂದು ಡಾ. ಮೋಹನ ಆಳ್ವ ಭರವಸೆ ನೀಡಿದರು. ಹೆಗ್ಗಡೆಯವರ ನೇತೃತ್ವದಲ್ಲಿ ಹಲವು ಸಮಾಜಮುಖಿ ಸೇವಾಕಾರ್ಯಗಳ ಮೂಲಕ ಧರ್ಮಸ್ಥಳ ಇಂದು ಇಡೀ ದೇಶಕ್ಕೆ ಮಾದರಿ ಸಂಸ್ಥೆಯಾಗಿದೆ ಎಂದು ಅವರು ಶ್ಲಾಘಿಸಿದರು.
ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ ಭಕ್ತರು ಹಾಗೂ ಅಭಿಮಾನಿಗಳ ಪ್ರೀತಿ-ವಿಶ್ವಾಸ, ಗೌರವ ಮತ್ತು ಅಭಿಮಾನ ತಮಗೆ ಹೆಚ್ಚಿನ ಉತ್ಸಾಹ ಮತ್ತು ಭರವಸೆ ಮೂಡಿಸಿದೆ. ಸಹಕಾರಿ ಕ್ಷೇತ್ರವನ್ನು ತಮ್ಮ ಮಾರ್ಗದರ್ಶಿತ್ವ ಮತ್ತು ನಾಯಕತ್ವದೊಂದಿಗೆ ಜನಪ್ರಿಯಗೊಳಿಸಿದ ರಾಜೇಂದ್ರ ಕುಮಾರ್ ಅವರ ಸೇವೆ, ಸಾಧನೆಯನ್ನು ಶ್ಲಾಘಿಸಿ ಸಮಾಜಕ್ಕೆ ಇಂದು ಎಲ್ಲಾ ಕ್ಷೇತ್ರಗಳಲ್ಲಿ ಇಂತಹ ದಕ್ಷ, ಪ್ರಾಮಾಣಿಕ ಹಾಗೂ ನಿಷ್ವಾರ್ಥ ನಾಯಕರ ಅಗತ್ಯವಿದೆ. ಸಹಕಾರಿರಂಗವನ್ನು ರಾಜ್ಯಮಟ್ಟದ ಖ್ಯಾತಿಗೆ ಬೆಳೆಸಿರುವುದಕ್ಕೆ ಹೆಗ್ಗಡೆಯವರು ಮೆಚ್ಚುಗೆ ವ್ಯಕ್ತಪಡಿಸಿದರು. ತಮ್ಮ ಸಂಸದರ ನಿಧಿಯಿಂದ ಬೀದರ್ ಜಿಲ್ಲೆಯಲ್ಲಿ ಹೈನುಗಾರಿಕೆ ಅಭಿವೃದ್ಧಿಗೆ 5 ಕೋಟಿ ರೂಪಾಯಿ ಅನುದಾನ ನೀಡಲಾಗಿದೆ. ಅಲ್ಲದೆ ಧರ್ಮಸ್ಥಳದಿಂದ ಎಲ್ಲಾ ಸಹಕಾರಿ ಸಂಘಗಳಿಗೂ ಸಕಾಲಿಕ ನೆರವು, ಪ್ರೋತ್ಸಾಹ ನೀಡಲಾಗುತ್ತದೆ ಎಂದರು.

ಮಾಧ್ಯಮಗಳಲ್ಲಿ ಅಪಪ್ರಚಾರ ಹಾಗೂ ಸುಳ್ಳು ವದಂತಿ ಪ್ರಸಾರದಿಂದ ತಮಗೆ ಆಘಾತಕರವಾದ ನೋವು ಉಂಟಾಗಿದೆ. ಆದರೆ ಧಮಸ್ಥಳದ ಮಂಜುನಾಥ ಸ್ವಾಮಿ ಹಾಗೂ ಭಗವಾನ್ ಚಂದ್ರನಾಥ ಸ್ವಾಮಿ ಇಬ್ಬರೂ ಶಾಂತ ಸ್ವಭಾವದವರಾಗಿದ್ದು, ದೇವರ ಅನುಗ್ರಹ, ಧರ್ಮದೇವತೆಗಳು ಮತ್ತು ಅಣ್ಣಪ್ಪ ಸ್ವಾಮಿಯ ಅಭಯದಿಂದ ನೋವು ಮರೆಯಲು ಸಾಧ್ಯವಾಗಿದೆ. ಅಪವಾದ, ಅಪಪ್ರಚಾರ ಮಾಡಿದವರಿಗೂ ಅಭಿನಂದನೆ ಹೇಳಿದ ಹೆಗ್ಗಡೆಯವರು ಅವರಿಂದಾಗಿ ಪ್ರತಿದಿನ ಸಾವಿರಾರು ಮಂದಿ ಧರ್ಮಸ್ಥಳಕ್ಕೆ ಬಂದು ತಮ್ಮ ಪ್ರೀತಿ-ವಿಶ್ವಾಸ, ಗೌರವ ಅಭಿಮಾನ ವ್ಯಕ್ತಪಡಿಸುತ್ತಿದ್ದಾರೆ ಎಂದು ಹೇಳಿದರು. ಮಾಣಿಲದ ಮೋಹನದಾಸ ಸ್ವಾಮೀಜಿ, ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ, ದಕ್ಷಿಣ ಕನ್ನಡ ಹಾಲು ಒಕ್ಕೂಟದ ಅಧ್ಯಕ್ಷ ರವಿರಾಜ ಹೆಗ್ಡೆ, ಬೆಳಪು ದೇವಿಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು. ಸುಮಾರು ಹತ್ತು ಸಾವಿರ ಮಂದಿ ಜಾಥಾದಲ್ಲಿ ಬಂದಿದ್ದರು. ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಸ್ವಾಗತಿಸಿದರು. ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಧನ್ಯವಾದವಿತ್ತರು.

You may also like

News

ಬಂಟ್ವಾಳದ ತೌಹೀದ್ ಶಾಲೆಗೆ ಕೀರ್ತಿ ತಂದ ಆಭಿದುನ್ನೀಸ – SSLC ಪರೀಕ್ಷೆಯಲ್ಲಿ ಭರ್ಜರಿ ಸಾಧನೆ

ಇತ್ತೀಚೆಗೆ ಪ್ರಕಟಗೊಂಡ ರಾಜ್ಯ ಮಟ್ಟದ SSLC ಪರೀಕ್ಷಾ ಫಲಿತಾಂಶದಲ್ಲಿ ಬಂಟ್ವಾಳದ ತೌಹೀದ್ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಆಭಿದುನ್ನೀಸ ಎಂ. ಅವರು ಅತ್ಯುತ್ತಮ ಅಂಕಗಳನ್ನು ಗಳಿಸುವ ಮೂಲಕ
News

ಪಾಲ್ದನೆ ಚರ್ಚ್‌ನಲ್ಲಿ ವಿದ್ಯಾರ್ಥಿಗಳಿಗೆ ಭವಿಷ್ಯದ ದಾರಿ – ವೃತ್ತಿ ಮಾರ್ಗದರ್ಶನ ಶಿಬಿರ ಯಶಸ್ವಿ

ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ನಂತರ ಸರಿಯಾದ ವೃತ್ತಿಜೀವನವನ್ನು ಆರಿಸಿಕೊಳ್ಳಲು ನೆರವಾಗುವ ನಿಟ್ಟಿನಲ್ಲಿ, ಮಂಗಳೂರು ಧರ್ಮಕ್ಷೇತ್ರಕ್ಕೆ ಒಳಪಟ್ಟ ಪಾಲ್ದನೆಯ ಸಂತ ತೆರೆಸಾ ಚರ್ಚ್‌ನ ಶೈಕ್ಷಣಿಕ ಆಯೋಗದ ವತಿಯಿಂದ ಇತ್ತೀಚೆಗೆ

You cannot copy content of this page