ಸುಳ್ಯ-ಪುತ್ತೂರು KSRTC ಬಸ್ನಲ್ಲಿ ಯುವತಿಗೆ ಕಿರುಕುಳ – ಆರೋಪಿಗೆ ಶಿಕ್ಷೆ
KSRTC ಬಸ್ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಆರೋಪಿ ನಾಲ್ಕು ತಿಂಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದಾನೆ. 2022ರ ಏಪ್ರಿಲ್ 25ರಂದು ಸುಳ್ಯದಿಂದ ಪುತ್ತೂರಿಗೆ ತೆರಳುತ್ತಿದ್ದ ಬಸ್ನಲ್ಲಿ ಯುವತಿ ಕುಳಿತಿದ್ದ ಸೀಟಿನ ಪಕ್ಕ ಕುಳಿತಿದ್ದ ಮಾಡ್ನೂರು ಗ್ರಾಮದ ನಿವಾಸಿ ಮೊಹಮ್ಮದ್ ಸತ್ತಾರ್ ಕಿರುಕುಳ ನೀಡಿದ ಪ್ರಕರಣ ಪುತ್ತೂರು ನಗರ ಠಾಣೆಯಲ್ಲಿ ದಾಖಲಾಗಿತ್ತು.

ಈ ಪ್ರಕರಣವನ್ನು ತನಿಖೆ ನಡೆಸಿದ ಪುತ್ತೂರು ನಗರ ಪೊಲೀಸ್ ಉಪನಿರೀಕ್ಷಕ ರಾಜೇಶ್ ಕೆ.ವಿ. ರವರು ದೋಷಾರೋಪಣ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಮಾನ್ಯ ಪ್ರಧಾನ ಹಿರಿಯ ಸಿವಿಲ್ ಮತ್ತು ಎಸಿಜೆಎಂ ನ್ಯಾಯಾಲಯದ ನ್ಯಾಯಾಧೀಶೆ ಪ್ರಕೃತಿ ಕಲ್ಯಾಣಪುರ್ ಅವರು ಆರೋಪಿಗೆ ನಾಲ್ಕು ತಿಂಗಳ ಕಾರಾಗೃಹ ಶಿಕ್ಷೆ ಹಾಗೂ ₹10,000 ದಂಡ ವಿಧಿಸಿದ್ದಾರೆ. ದಂಡ ಪಾವತಿಸದಿದ್ದಲ್ಲಿ ಇನ್ನೂ ಒಂದು ತಿಂಗಳ ಹೆಚ್ಚುವರಿ ಜೈಲು ಶಿಕ್ಷೆ ಅನುಭವಿಸಬೇಕಾಗಿದೆ. ಈ ಪ್ರಕರಣದಲ್ಲಿ ಸರ್ಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕಿ ಕವಿತಾ ಕೆ. ವಾದ ಮಂಡಿಸಿದ್ದರು.




