ಮಾಣಿಯಲ್ಲಿ ಸಾವಿತ್ರಿಬಾಯಿ ಫುಲೆ ಮಹಿಳಾ ಕೌಶಲ್ಯ ಅಭಿವೃದ್ಧಿ ಕೇಂದ್ರ ಉದ್ಘಾಟನೆ
“ಮಾಣಿ ಮಾತ್ರವಲ್ಲದೆ ಸುತ್ತಮುತ್ತಲಿನ ಗ್ರಾಮೀಣ ಮಹಿಳೆಯರ ಸ್ವಾವಲಂಬಿ ಬದುಕಿಗೆ ನೆರವಾಗಬೇಕು” – ಸುದೀಪ್ ಕುಮಾರ್ ಶೆಟ್ಟಿ

ದೀನ್ ದಯಾಳ್ ಅಂತ್ಯೋದಯ ಯೋಜನೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಸಂಜೀವಿನಿ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಬಂಟ್ವಾಳ ತಾಲೂಕು ಪಂಚಾಯತ್ ಮತ್ತು ಮಾಣಿ ಗ್ರಾಮ ಪಂಚಾಯತ್ಗಳ ಆಶ್ರಯದಲ್ಲಿ, ರಾಜ್ಯದ ಪ್ರಪ್ರಥಮ ಸಾವಿತ್ರಿಬಾಯಿ ಫುಲೆ ಮಹಿಳಾ ಕೌಶಲ್ಯಾಭಿವೃದ್ಧಿ ಕೇಂದ್ರವನ್ನು ಸೆಪ್ಟೆಂಬರ್ 19ರಂದು ಶುಕ್ರವಾರ ಮಾಣಿಯಲ್ಲಿ ಉದ್ಘಾಟಿಸಲಾಯಿತು.

ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಜಯರಾಮ್ ಕೆ.ಇ. ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅವರು ಮಾತನಾಡಿ, “ಪುರುಷ ಪ್ರಧಾನ ವ್ಯವಸ್ಥೆಯ ನಡುವೆ ಮಹಿಳೆಯರ ಕೌಶಲ್ಯವನ್ನು ಗುರುತಿಸಿ ಸಮಾನತೆಗೆ ಉತ್ತೇಜನ ನೀಡುವುದು ಸಂಜೀವಿನಿ ಅಭಿಯಾನದ ಮುಖ್ಯ ಉದ್ದೇಶ. ಮಹಿಳಾ ಸಬಲೀಕರಣಕ್ಕೆ ಇದು ದಾರಿಯಾಗಿದೆ” ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಾಣಿ ಗ್ರಾಮಪಂಚಾಯತ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಮಾತನಾಡಿ, “ಮಾಣಿ ಮಾತ್ರವಲ್ಲದೆ ಸುತ್ತಮುತ್ತಲಿನ ಗ್ರಾಮೀಣ ಮಹಿಳೆಯರ ಸ್ವಾವಲಂಬಿ ಬದುಕಿಗೆ ಈ ಕೇಂದ್ರ ನೆರವಾಗಬೇಕು” ಎಂದು ಅಭಿಪ್ರಾಯಪಟ್ಟರು.

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜ್ಯೋತಿ ರಾಜ್ ಮಾತನಾಡಿ, ಸಂಸ್ಥೆಯು ಗ್ರಾಮೀಣ ಜನರ ಕೌಶಲ್ಯಗಳನ್ನು ಗುರುತಿಸಿ, ಸ್ವ ಉದ್ಯೋಗಕ್ಕೆ ಪೂರಕವಾದ ತರಬೇತಿಗಳನ್ನು ನೀಡುತ್ತಿದೆ ಎಂದು ಹೇಳಿದರು.
ಇದೇ ವೇಳೆ, ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು, ಬ್ಯಾಂಕ್ ಆಫ್ ಬರೋಡ ಮಾಣಿ ಶಾಖೆ, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಹಾಗೂ ಮಾಣಿಕ್ಯ ಸಂಜೀವಿನಿ ಗ್ರಾಮ ಪಂಚಾಯತ್ ಒಕ್ಕೂಟದ ಆಶ್ರಯದಲ್ಲಿ ನಡೆದ 15 ದಿನಗಳ ಎಂಬ್ರಾಯ್ಡರಿ ಕೌಶಲ್ಯ ತರಬೇತಿ ಶಿಬಿರದ ಸಮಾರೋಪ ನಡೆಯಿತು. ಕಲಿಕಾರ್ಥಿಗಳಿಗೆ ಪ್ರಮಾಣಪತ್ರವನ್ನು ವಿತರಿಸಲಾಯಿತು.


ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಸಚಿನ್ ಕುಮಾರ್, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲದ ಕಾರ್ಯಕ್ರಮ ವ್ಯವಸ್ಥಾಪಕ ಜೀವನ್ ಕೊಲ್ಯ, ಮಾಣಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಸುಜಾತ, ಒಕ್ಕೂಟದ ಅಧ್ಯಕ್ಷೆ ವಿಜಯ, ಮಾಣಿ ಬ್ಯಾಂಕ್ ಆಫ್ ಬರೋಡ ಪ್ರಬಂಧಕ ಅಭಿಲಾಷ್, ಮಾಣಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಿರಿಜ, ತರಬೇತುದಾರರಾದ ಮೀನಾಕ್ಷಿ, ದೀಕ್ಷಾ, ಅಕ್ಷಿತಾ, ಸ್ವಾತಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಮಾಣಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಪ್ರಸ್ತುತ ಸದಸ್ಯ ಬಾಲಕೃಷ್ಣ ಆಳ್ವ ನಿರೂಪಿಸಿದರು. ತಾಲೂಕು ಪಂಚಾಯತ್ ವ್ಯವಸ್ಥಾಪಕಿ ಸುಧಾ ಪ್ರಾಸ್ತಾವಿಕವಾಗಿ ಮಾತನಾಡಿದರು. ಲೈಲಾ ಸ್ವಾಗತಿಸಿ, ಧನ್ಯವಾದರು ಸಲ್ಲಿಸಿದರು.




