August 26, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ನಾಳೆ ಅಕ್ಟೋಬರ್ 24ರಂದು ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ 

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ ನಾಳೆ ಅಕ್ಟೋಬರ್ 24ರಂದು ಶುಕ್ರವಾರ ಧರ್ಮಸ್ಥಳದಲ್ಲಿ ನೌಕರವೃಂದದವರು, ಊರಿನ ನಾಗರಿಕರು, ಭಕ್ತರು ಹಾಗೂ ಅಭಿಮಾನಿಗಳ ಉಪಸ್ಥಿತಿಯಲ್ಲಿ ನೆರವೇರಲಿದೆ.

ಭಗವಾನ್‌ ಚಂದ್ರನಾಥಸ್ವಾಮಿ ಬಸದಿ ಹಾಗೂ ಶ್ರೀ ಮಂಜುನಾಥಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆಗಳು ನಡೆಯಲಿವೆ. ಊರಿನ ನಾಗರಿಕರು, ಭಕ್ತರು ಹಾಗೂ ಅಭಿಮಾನಿಗಳು ಪೂಜ್ಯ ಹೆಗ್ಗಡೆಯವರಿಗೆ ಶ್ರದ್ಧಾ-ಭಕ್ತಿಯಿಂದ ಗೌರವಾರ್ಪಣೆ ಮಾಡುವರು.

ಸಭಾ ಕಾರ್ಯಕ್ರಮ: ಸಂಜೆ 4:00 ಗಂಟೆಯಿಂದ ನಡೆಯುವ ಸಮಾರಂಭದಲ್ಲಿ ತುಮಕೂರಿನ ಸಿದ್ಧಗಂಗ ಮಠದ ಶ್ರೀ ಸಿದ್ಧಲಿಂಗ ಮಹಾಸ್ವಾಮೀಜಿಯವರು ಆಶೀರ್ವಚನ ನೀಡಲಿದ್ದಾರೆ. ಶಾಸಕರುಗಳಾದ ಹರೀಶ್‌ ಪೂಂಜ, ಕೆ. ಪ್ರತಾಪಸಿಂಹ ನಾಯಕ್‌ ಮತ್ತು ಮೆಸ್ಕಾಂ ಅಧ್ಯಕ್ಷರಾದ ಕೆ. ಹರೀಶ್‌ ಕುಮಾರ್‌ ಶುಭಾಶಂಸನೆ ಮಾಡುವರು. ಹಿರಿಯ ನೌಕರರ ಸನ್ಮಾನ ಹಾಗೂ ಹೆಗ್ಗಡೆಯವರು ಹೊಸ ಯೋಜನೆಗಳನ್ನು ಪ್ರಕಟಿಸುವರು.

ಹಬ್ಬದ ವಾತಾವರಣ: ದೀಪಾವಳಿ ಹಬ್ಬದ ಜೊತೆಗೆ ಧರ್ಮಸ್ಥಳದಲ್ಲಿ ಪಟ್ಟಾಭಿಷೇಕದ ವರ್ಧಂತ್ಯುತ್ಸವದ ಅಂಗವಾಗಿ ಎಲ್ಲೆಲ್ಲೂ ಸಂಭ್ರಮ, ಸಡಗರದ ವಾತಾವರಣವಿದೆ.
ಬಸದಿ, ದೇವಸ್ಥಾನ, ಹೆಗ್ಗಡೆಯವರ ನಿವಾಸ, ಅನ್ನಪೂರ್ಣ ಹಾಗೂ ವಸತಿ ಛತ್ರಗಳನ್ನು ಆಕರ್ಷಕ ವಿನ್ಯಾಸದ ವಿದ್ಯುದ್ದೀಪಗಳು ಮತ್ತು ಪ್ರಾಕೃತಿಕ ಪರಿಕರಗಳಿಂದ ಅಲಂಕರಿಸಿದ್ದು, ಎಲ್ಲರ ಗಮನ ಸೆಳೆಯುತ್ತಿವೆ.

1968ರ ಅಕ್ಟೋಬರ್‌ 24ರಂದು ಧರ್ಮಸ್ಥಳದ 29ನೇ ಧರ್ಮಾಧಿಕಾರಿಯಾಗಿ ನೆಲ್ಯಾಡಿ ಬೀಡಿನಲ್ಲಿ ಪಟ್ಟಾಭಿಷಿಕ್ತರಾದ ಹೆಗ್ಗಡೆಯವರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ರುಡ್‌ಸೆಟ್‌ ಸಂಸ್ಥೆಗಳು, ಕೆರೆಗಳಿಗೆ ಕಾಯಕಲ್ಪ, ಉಚಿತ ಸಾಮೂಹಿಕ ವಿವಾಹ ಸಮಾರಂಭ, ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಹಾಗೂ ಆಯುರ್ವೇದಕ್ಕೆ ಪ್ರೋತ್ಸಾಹ, ಶ್ರದ್ಧಾಕೇಂದ್ರಗಳ ಸ್ವಚ್ಛತಾ ಅಭಿಯಾನ, ರುದ್ರಭೂಮಿ ಮೊದಲಾದ ವಿನೂತನ ಕಾರ್ಯಕ್ರಮಗಳ ಯಶಸ್ವಿ ಅನುಷ್ಠಾನದ ಮೂಲಕ ಉನ್ನತ ಸೇವೆ-ಸಾಧನೆ ಮಾಡಿ ಎಲ್ಲರ ಪ್ರೀತಿ-ವಿಶ್ವಾಸ ಮತ್ತು ಗೌರವಕ್ಕೆ ಪಾತ್ರರಾಗಿದ್ದಾರೆ.

You may also like

News

ಮಡಂತ್ಯಾರಿನ ಶಾನ್ವಿ ಮತ್ತು ಶ್ರೇಯಸ್‌ ಅವರಿಗೆ ‘ರಾಷ್ಟ್ರೀಯ ಪ್ರತಿಭಾ ರತ್ನ’ ಗೌರವ

ಕಾವ್ಯಶ್ರೀ ಚಾರಿಟಬಲ್ ಟ್ರಸ್ಟ್‌ (ರಿ.), ಕರ್ನಾಟಕ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಿದ್ದ ‘ಸ್ವಾತಂತ್ರ್ಯೋತ್ಸವ–2026’ ಕಾರ್ಯಕ್ರಮದಲ್ಲಿ ಮಡಂತ್ಯಾರಿನ ಪ್ರತಿಭೆಗಳಾದ ಶಾನ್ವಿ ಪೂಜಾರಿ ಹಾಗೂ ಶ್ರೇಯಸ್ ಪೂಜಾರಿ ಅವರಿಗೆ
News

ಮಡಂತ್ಯಾರಿನಲ್ಲಿ ಸಂಭ್ರಮದ ಕೊಂಕಣಿ ಮಾನ್ಯತಾ ದಿವಸ್

ಕೊಂಕಣಿ ಭಾಷೆ, ಸಂಸ್ಕೃತಿ ಹಾಗೂ ಪರಂಪರೆಯನ್ನು ಸಂರಕ್ಷಿಸಿ, ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಐಸಿವೈಎಂ ಮಡಂತ್ಯಾರು ಘಟಕ, ಸಾಮಾಜಿಕ ಸಂವಹನ ಆಯೋಗ, ಕಥೊಲಿಕ್ ಸಭಾ ಮಡಂತ್ಯಾರು ಹಾಗೂ

You cannot copy content of this page