ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೋರಾಟ ಸಮಿತಿಯ ನಿಯೋಗದ ಮನವಿ – ಸ್ಪಂದಿಸಿದ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು
ಕರಾವಳಿ ಭಾಗದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಹಾಗೂ ಮಂಗಳೂರಿನಲ್ಲಿ ಸಂಚಾರಿ ಹೈಕೋರ್ಟ್ ಪೀಠ ಆರಂಭಿಸುವ ಕುರಿತು ಹೈಕೋರ್ಟ್ ಪೀಠ ಹೋರಾಟ ಸಮಿತಿಯ ನಿಯೋಗವು ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾದ ಗೌರವಾನ್ವಿತ ವಿಭು ಬಖ್ರು ಅವರನ್ನು ಉಡುಪಿ ಸರ್ಕ್ಯೂಟ್ ಹೌಸ್ನಲ್ಲಿ ನಿನ್ನೆ ಡಿಸೆಂಬರ್ 6ರಂದು ಶನಿವಾರ ಭೇಟಿಯಾಗಿ ಮನವಿ ಸಲ್ಲಿಸಿತು.




ಹೋರಾಟ ಸಮಿತಿಯ ಸಂಚಾಲಕರಾದ MLC ಐವನ್ ಡಿಸೋಜ ಅವರು ಮನವಿಯನ್ನು ಸಲ್ಲಿಸಿ ಮಾತನಾಡುತ್ತಾ, “ಕರಾವಳಿ ಜನತೆಗೆ ದೂರದ ಬೆಂಗಳೂರಿಗೆ ತೆರಳಿ ಹೈಕೋರ್ಟ್ ಕೆಲಸಗಳನ್ನು ನೆರವೇರಿಸ ಬೇಕಾಗಿರುವುದು ಅತ್ಯಂತ ಕಷ್ಟಕರ. ಮಳೆಗಾಲದಲ್ಲಿ ಸಂಪರ್ಕ ಕಡಿತಗೊಂಡು ಪ್ರಯಾಣ ಮತ್ತಷ್ಟು ಕಷ್ಟವಾಗುತ್ತದೆ. ಇದರಿಂದ ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಂಗಳೂರು ಹಾಗೂ ಕೊಡಗು ಜಿಲ್ಲೆಗಳ ದಾವೆಗಳ ವಿಲೇವಾರಿಯಲ್ಲಿ ವಿಳಂಬ ಉಂಟಾಗಿ ಜನತೆ ಸಂಕಷ್ಟ ಅನುಭವಿಸುತ್ತಿದ್ದಾರೆ,” ಎಂದು ತಿಳಿಸಿದರು.




ಇದೇ ಸಂದರ್ಭದಲ್ಲಿ, ರಾಜ್ಯ ಸರ್ಕಾರದ ಮಾನ್ಯ ಮುಖ್ಯಮಂತ್ರಿಗಳು ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಒಲವು ತೋರಿಸಿರುವುದರಿಂದ, ಮೊದಲು ಸಂಚಾರಿ ಹೈಕೋರ್ಟ್ ಪೀಠವನ್ನು ಮಂಗಳೂರಿನಲ್ಲಿ ಆರಂಭಿಸಲು ಅನುಮತಿ ನೀಡಬೇಕೆಂದು ವಿನಂತಿಸಲಾಯಿತು. ಮನವಿಗೆ ಪೂರಕವಾಗಿ ಸ್ಪಂದಿಸಿದ ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿಗಳು, ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸಮಿತಿಗೆ ಭರವಸೆ ನೀಡಿದರು.


ನಿಯೋಗದಲ್ಲಿ ಮಂಗಳೂರು ವಕೀಲ ಸಂಘದ ಅಧ್ಯಕ್ಷ ರಾಘವೇಂದ್ರ ಹೆಚ್.ವಿ., ಪ್ರಧಾನ ಜಿಲ್ಲಾ ಸರಕಾರಿ ವಕೀಲ ಎಂ.ಪಿ. ನೊರೊನ್ಹಾ, ಪ್ರಧಾನ ಕಾರ್ಯದರ್ಶಿ ಶ್ರೀಧರ್ ಎಚ್., ಉಡುಪಿ ವಕೀಲರ ಸಂಘದ ಅಧ್ಯಕ್ಷ ರೊನಾಲ್ಡ್ ಪ್ರವೀಣ್ ಕುಮಾರ್, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ಶೆಟ್ಟಿ, ಉಪಾಧ್ಯಕ್ಷ ದೇವದಾಸ್ ವಿ. ಶೆಟ್ಟಿಗಾರ್, ಬ್ರಹ್ಮಾವರ ವಕೀಲರ ಸಂಘದ ಅಧ್ಯಕ್ಷ ಕಾಡೂರು ಪ್ರವೀಣ್ ಶೆಟ್ಟಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.




