ಬೆತ್ತಲೆ ಫೋಟೋ ವೈರಲ್ ಬೆದರಿಕೆ: ಎಂಬಿಎ ವಿದ್ಯಾರ್ಥಿ ಆತ್ಮಹತ್ಯೆ
ಬೆತ್ತಲೆ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವುದಾಗಿ ಬೆದರಿಕೆ ಒಡ್ಡಿದ್ದರಿಂದ ಮನೋಭೀತನಾದ ಎಂಬಿಎ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾದ ದುರ್ಘಟನೆ ಬೆಂಗಳೂರು ಹೊರವಲಯದ ಹೆಸರುಘಟ್ಟ ರಸ್ತೆಯ ಶಾಂತಿನಗರದಲ್ಲಿ ನಡೆದಿದೆ.

ಕೇರಳ ಮೂಲದ 25 ವರ್ಷ ಪ್ರಾಯದ ಜಗನ್ ಮೋಹನ್ ಮೃತ ವಿದ್ಯಾರ್ಥಿಯಾಗಿದ್ದು, ನಗರದ ಖಾಸಗಿ ಕಾಲೇಜೊಂದರಲ್ಲಿ ಎಂಬಿಎ ದ್ವಿತೀಯ ವರ್ಷದ ವ್ಯಾಸಂಗ ಮಾಡುತ್ತಿದ್ದ. ಕಾಲೇಜು ಸಮೀಪದ ಶಾಂತಿನಗರದಲ್ಲಿ ಬಾಡಿಗೆ ರೂಮಿನಲ್ಲಿ ವಾಸವಾಗಿದ್ದ ಆತ, ಡೆತ್ ನೋಟ್ ಬರೆದಿಟ್ಟು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.


ಬೆತ್ತಲೆ ಫೋಟೋಗಳನ್ನು ಬಹಿರಂಗಪಡಿಸುವುದಾಗಿ ನಿರಂತರವಾಗಿ ಬೆದರಿಕೆ ಹಾಕಲಾಗುತ್ತಿತ್ತು ಎಂಬ ಉಲ್ಲೇಖ ಡೆತ್ ನೋಟ್ನಲ್ಲಿ ಕಂಡುಬಂದಿದ್ದು, ಈ ಹಿನ್ನೆಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪಿಗಳ ಪತ್ತೆಗೆ ತನಿಖೆ ಆರಂಭಿಸಿದ್ದಾರೆ.




