ಮಹೇಶ್ ಶೆಟ್ಟಿ ತಿಮರೋಡಿಗೆ ಗಡಿಪಾರು ಆದೇಶ: ರಾಯಚೂರು ಜಿಲ್ಲೆಯ ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಗೆ ನಿಷ್ಕಾಸನೆ
ದಕ್ಷಿಣ ಕನ್ನಡ ಜಿಲ್ಲೆಯಿಂದ ಮಹೇಶ್ ಶೆಟ್ಟಿ ತಿಮರೋಡಿಯನ್ನು ಗಡಿಪಾರು ಮಾಡುವಂತೆ ಸಲ್ಲಿಸಲಾದ ಅರ್ಜಿಯ ಹಿನ್ನೆಲೆಯಲ್ಲಿ, ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರು ಹಾಗೂ ಉಪವಿಭಾಗೀಯ ದಂಡಾಧಿಕಾರಿಗಳು ಕರ್ನಾಟಕ ಪೊಲೀಸ್ ಕಾಯ್ದೆ–1963ರ ಕಲಂ 55(ಎ) ಮತ್ತು (ಬಿ) ಅಡಿಯಲ್ಲಿ ದಿನಾಂಕ 17-09-2025 ರಂದು ಗಡಿಪಾರು ಆದೇಶ ಹೊರಡಿಸಿದ್ದರು. ಈ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ರಿಟ್ ಪಿಟಿಷನ್ ಸಂಖ್ಯೆ 30021/2025 ಕುರಿತು ಮಾನ್ಯ ಉಚ್ಚ ನ್ಯಾಯಾಲಯವು, ಗಡಿಪಾರು ಆದೇಶವನ್ನು ಕೆ.ಪಿ. ಕಾಯ್ದೆಯ ಯಾವ ಕಲಂ ಅಡಿಯಲ್ಲಿ ಹೊರಡಿಸಲಾಗಿದೆ ಎಂಬುದನ್ನು ಸ್ಪಷ್ಟ ಕಾರಣಗಳೊಂದಿಗೆ ಪುನಃ ಆದೇಶ ಮಾಡುವಂತೆ ನಿರ್ದೇಶನ ನೀಡಿತ್ತು. ಉಚ್ಚ ನ್ಯಾಯಾಲಯದ ಆದೇಶದ ಪ್ರತಿಯನ್ನು ಸ್ವೀಕರಿಸಿದ 15 ದಿನಗಳೊಳಗೆ ಹೊಸ ಆದೇಶ ಹೊರಡಿಸುವಂತೆ ಸೂಚಿಸಲಾಗಿತ್ತು.

ಅದರಂತೆ, ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರು ಮಹೇಶ್ ಶೆಟ್ಟಿ ತಿಮರೋಡಿಯನ್ನು ದಿನಾಂಕ 16-12-2025 ರಿಂದ 16-09-2026 ರವರೆಗೆ ರಾಯಚೂರು ಜಿಲ್ಲೆಯ ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡುವಂತೆ ಪುನಃ ಆದೇಶ ಹೊರಡಿಸಿದ್ದಾರೆ.

ಈ ಗಡಿಪಾರು ಆದೇಶವನ್ನು ಜಾರಿಗೊಳಿಸುವ ಸಲುವಾಗಿ ಬೆಳ್ತಂಗಡಿ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರು ಆರೋಪಿತನ ನಿವಾಸಕ್ಕೆ ತೆರಳಿದಾಗ, ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ಹಾಜರಿರಲಿಲ್ಲ. ಆದ್ದರಿಂದ, ಕರ್ನಾಟಕ ಪೊಲೀಸ್ ಕಾಯ್ದೆಯ ಅನ್ವಯ ತಲೆಮರೆಸಿಕೊಂಡಿರುವ ವ್ಯಕ್ತಿಗೆ ಅನುಸರಿಸಬೇಕಾದ ಪ್ರಕ್ರಿಯೆ ಪ್ರಕಾರ, ಸಹಾಯಕ ಆಯುಕ್ತರು, ಪುತ್ತೂರು ಉಪವಿಭಾಗ ಅವರ ಅನುಮತಿ ಪಡೆದು, ಗಡಿಪಾರು ಆದೇಶವನ್ನು ಸದ್ರಿಯವರ ಮನೆಯ ಗೋಡೆಯ ಮೇಲೆ ಅಂಟಿಸಿ ಹಾಗೂ ಉಜಿರೆ ಪರಿಸರದಲ್ಲಿ ಸಾರ್ವಜನಿಕವಾಗಿ ಪ್ರಚಾರ ಮಾಡಿ ಜಾರಿಗೊಳಿಸಲಾಗಿದೆ.




