ಸಂಚಾರ ನಿಯಮಗಳ ಕಟ್ಟುನಿಟ್ಟಿನ ಪಾಲನೆಯೇ ಜೀವ ರಕ್ಷಣೆ – ಜೈಬುನ್ನೀಸಾ
ಸಂಚಾರ ನಿಯಮಗಳನ್ನು ಉಲ್ಲಂಘಿಸದೆ ಕಟ್ಟುನಿಟ್ಟಾಗಿ ಪಾಲಿಸಿದರೆ ರಸ್ತೆ ಅಪಘಾತಗಳನ್ನು ಪರಿಣಾಮಕಾರಿಯಾಗಿ ತಡೆಗಟ್ಟಬಹುದು. ರಸ್ತೆ ಸುರಕ್ಷತೆಯ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸುವ ಅಗತ್ಯವಿದ್ದು, ಎಲ್ಲರೂ ಸಂಚಾರ ನಿಯಮಗಳನ್ನು ಪಾಲಿಸುವ ಮೂಲಕ ಅಪಘಾತ ತಡೆಗೆ ಸಹಕರಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯವರಾದ ಜೈಬುನ್ನೀಸಾ ಹೇಳಿದರು.

ಅವರು ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಸಾರಿಗೆ ಇಲಾಖೆ ಹಾಗೂ ಪೊಲೀಸ್ ಇಲಾಖೆ ಸಹಯೋಗದಲ್ಲಿ ಮಂಗಳೂರು ಪ್ರಾದೇಶಿಕ ಸಾರಿಗೆ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ 37ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ರಸ್ತೆ ಅಪಘಾತಗಳಿಂದ ಅನೇಕ ಮಂದಿ ಪ್ರಾಣ ಕಳೆದುಕೊಳ್ಳುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ರಸ್ತೆ ನಿಯಮಗಳನ್ನು ಪಾಲಿಸುವುದೇ ಜೀವ ರಕ್ಷಿಸುವ ಪ್ರಮುಖ ಸಾಧನವಾಗಿದೆ. ವಾಹನ ಸವಾರರು ತಮ್ಮ ಮೇಲೆಯೇ ನಂಬಿಕೆ ಇಟ್ಟುಕೊಂಡಿರುವ ಕುಟುಂಬದ ಕ್ಷೇಮವನ್ನು ಸದಾ ನೆನಪಿನಲ್ಲಿಟ್ಟುಕೊಂಡು ಜವಾಬ್ದಾರಿಯಿಂದ ವಾಹನ ಚಲಾಯಿಸಬೇಕು ಎಂದು ಅವರು ಹೇಳಿದರು.


ರಸ್ತೆ ಸುರಕ್ಷತೆಯ ಕುರಿತು ಜನರಿಗೆ ಸಮಗ್ರ ಮಾಹಿತಿ ನೀಡುವ ಅಗತ್ಯವಿದ್ದು, ವಿಶೇಷವಾಗಿ ಯುವಕರಲ್ಲಿ ಕಾನೂನು ಅರಿವಿನ ಕೊರತೆ ಕಂಡುಬರುತ್ತಿದೆ. ಶಾಲಾ–ಕಾಲೇಜು ವಿದ್ಯಾರ್ಥಿಗಳಿಗೆ ಸಂಚಾರ ನಿಯಮಗಳ ಬಗ್ಗೆ ಅರಿವು ಮೂಡಿಸಬೇಕು. ಅತಿವೇಗ, ಮದ್ಯ ಸೇವಿಸಿ ವಾಹನ ಚಾಲನೆ ಹಾಗೂ ಅಜಾಗರೂಕತೆ ಅಪಘಾತಗಳಿಗೆ ಪ್ರಮುಖ ಕಾರಣಗಳಾಗಿವೆ ಎಂದು ಜೈಬುನ್ನೀಸಾ ಅವರು ಎಚ್ಚರಿಸಿದರು.

ಕಾರ್ಯಕ್ರಮಕ್ಕೆ ಉಪ ಸಾರಿಗೆ ಆಯುಕ್ತ ಹಾಗೂ ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿ ಮುರಗೇಂದ್ರ ಬಸವರಾಜ ಶಿರೋಳಕರ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಸಂಚಾರ ಪೊಲೀಸ್ ಉಪವಿಭಾಗದ ಸಹಾಯಕ ಆಯುಕ್ತೆ ನಜ್ಮಾ ಫಾರೂಖಿ ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು. ಕಚೇರಿ ಅಧೀಕ್ಷಕಿ ರಶ್ಮಿ ಸ್ವಾಗತಿಸಿದರು.




