ನಿಟ್ಟೆ ವಿನಯ ಹೆಗ್ಡೆ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ರೆಡ್ ಕ್ರಾಸ್ ವತಿಯಿಂದ ಶ್ರದ್ಧಾಂಜಲಿ ಸಭೆ
ಕರಾವಳಿ ಜಿಲ್ಲೆಯ ಶೈಕ್ಷಣಿಕ ಹಾಗೂ ಔದ್ಯಮಿಕ ಕ್ಷೇತ್ರಗಳಿಗೆ ಅಪಾರ ಮತ್ತು ಅದ್ವಿತೀಯ ಕೊಡುಗೆ ನೀಡಿರುವ ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಾಧಿಪತಿ ದಿವಂಗತ ನಿಟ್ಟೆ ವಿನಯ ಹೆಗ್ಡೆ ಅವರ ಆದರ್ಶಯುತ ಜೀವನ ಸಮಾಜಕ್ಕೆ ಸದಾ ಪ್ರೇರಣಾದಾಯಕವಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ರೆಡ್ ಕ್ರಾಸ್ ಸೊಸೈಟಿಯ ಅಧ್ಯಕ್ಷ ಸಿ.ಎ. ಶಾಂತಾರಾಮ ಶೆಟ್ಟಿ ಹೇಳಿದರು.


ಇತ್ತೀಚೆಗೆ ನಿಧನರಾದ ನಿಟ್ಟೆ ವಿನಯ ಹೆಗ್ಡೆ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ರೆಡ್ ಕ್ರಾಸ್ ವತಿಯಿಂದ ಆಯೋಜಿಸಲಾದ ಶ್ರದ್ಧಾಂಜಲಿ ಸಭೆಯಲ್ಲಿ ಅವರು ನುಡಿ ನಮನ ಸಲ್ಲಿಸಿ ಮಾತನಾಡಿದರು. ಸಾಧನೆಯ ಜೊತೆಗೆ ಸರಳತೆ, ಸೌಜನ್ಯ ಮತ್ತು ಸಮಾಜಮುಖಿ ಚಿಂತನೆಯ ಮೂಲಕ ವಿನಯ ಹೆಗ್ಡೆ ಅವರು ಜನಮಾನಸದಲ್ಲಿ ಗೌರವದ ಸ್ಥಾನ ಗಳಿಸಿದ್ದರು ಎಂದು ಅವರು ಹೇಳಿದರು. ರೆಡ್ ಕ್ರಾಸ್ ಸಂಸ್ಥೆಯ ಸಮಾಜ ಸೇವಾ ಚಟುವಟಿಕೆಗಳಿಗೆ ವಿನಯ ಹೆಗ್ಡೆ ಅವರು ನೀಡಿದ ಬೆಂಬಲ ಹಾಗೂ ಪ್ರೋತ್ಸಾಹ ಸದಾ ಸ್ಮರಣೀಯವಾಗಿರುತ್ತದೆ ಎಂದು ಶಾಂತಾರಾಮ ಶೆಟ್ಟಿ ಸ್ಮರಿಸಿದರು.

ಈ ಶ್ರದ್ಧಾಂಜಲಿ ಸಭೆಯಲ್ಲಿ ನಿವೃತ್ತ ಅಪರ ಜಿಲ್ಲಾಧಿಕಾರಿ ಪ್ರಭಾಕರ ಶರ್ಮ, ದ.ಕ. ಜಿಲ್ಲಾ ರೆಡ್ ಕ್ರಾಸ್ ಸಮಿತಿಯ ಉಪಾಧ್ಯಕ್ಷ ಡಾ. ಸತೀಶ್ ರಾವ್, ಕಾರ್ಯದರ್ಶಿ ಕಿಶೋರ್ ಚಂದ್ರ ಹೆಗ್ಡೆ, ನಿರ್ದೇಶಕರಾದ ಡಾ. ಸುಮನಾ ಬಿ. ಹಾಗೂ ಪಿ.ಬಿ. ಹರೀಶ್ ರೈ ಅವರು ನುಡಿ ನಮನ ಸಲ್ಲಿಸಿದರು. ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಯೂತ್ ರೆಡ್ ಕ್ರಾಸ್ ನೋಡಲ್ ಅಧಿಕಾರಿ ಡಾ. ಶಂತನು, ರೆಡ್ ಕ್ರಾಸ್ ಜಿಲ್ಲಾ ಘಟಕದ ಖಜಾಂಜಿ ಮೋಹನ್ ಶೆಟ್ಟಿ, ನಿರ್ದೇಶಕ ಗುರುದತ್ ನಾಯಕ್ ಹಾಗೂ ಕಚೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.




