July 10, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

‘ಸಹಕಾರ ರತ್ನ’ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರಿಗೆ ಅಮೆರಿಕದ ಪೆನ್ಸಿಲ್ವೇನಿಯಾ ವಿವಿಯಿಂದ ‘ವಿಷನರಿ ಲೀಡರ್‌ಶಿಪ್ ಅವಾರ್ಡ್’

ನವೋದಯ ಸ್ವಸಹಾಯ ಗುಂಪುಗಳ ಮೂಲಕ ಮಹಿಳಾ ಸಬಲೀಕರಣದಲ್ಲಿ ಸಲ್ಲಿಸಿದ ಮಹತ್ವದ ಸೇವೆಯನ್ನು ಗುರುತಿಸಿ ಅಮೆರಿಕದ ಪ್ರತಿಷ್ಠಿತ ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯವು ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ‘ಸಹಕಾರ ರತ್ನ’ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರಿಗೆ ‘ವಿಷನರಿ ಲೀಡರ್‌ಶಿಪ್ ಅವಾರ್ಡ್ ಇನ್ ವುಮೆನ್ ಎಂಪವರ್‌ಮೆಂಟ್’ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.

ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯದ ಪ್ರತಿನಿಧಿಗಳು ಮಂಗಳೂರಿಗೆ ಆಗಮಿಸಿ ಜನವರಿ 6ರಂದು ಮಂಗಳವಾರ ಎಸ್‌ಸಿಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಜನಸಾಮಾನ್ಯರಲ್ಲಿ ಉಳಿತಾಯದ ಅರಿವು ಮೂಡಿಸಿ ಅಭಿವೃದ್ಧಿಯತ್ತ ಮುನ್ನಡೆಸುತ್ತಿರುವ ನವೋದಯ ಸ್ವಸಹಾಯ ಗುಂಪುಗಳ ಸಂಘಟನಾ ಶಕ್ತಿ ಮತ್ತು ಕಾರ್ಯಕ್ಷಮತೆಯನ್ನು ಅಧ್ಯಯನ ಮಾಡುವ ಉದ್ದೇಶದಿಂದ ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯದ ಅಧ್ಯಯನ ತಂಡವು ಎಸ್‌ಸಿಡಿಸಿಸಿ ಬ್ಯಾಂಕ್ ಹಾಗೂ ನವೋದಯ ಚಟುವಟಿಕೆಗಳ ಕುರಿತು ಮಾಹಿತಿ ಸಂಗ್ರಹಿಸಿತು. ಇದೇ ಸಂದರ್ಭದಲ್ಲಿ ಡಾ. ರಾಜೇಂದ್ರ ಕುಮಾರ್ ಅವರಿಗೆ ಗೌರವ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯದ ಪರವಾಗಿ ಪ್ರೊಫೆಸರ್ ಫೆಮಿಡಾ ಹ್ಯಾಂಡಿ ಅವರು ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಬಳಿಕ ಮಾತನಾಡಿದ ಅವರು, ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ನವೋದಯ ಸ್ವಸಹಾಯ ಸಂಘಗಳ ಮೂಲಕ ಹಿಂದುಳಿದ ವರ್ಗಗಳು ಹಾಗೂ ವಿಶೇಷವಾಗಿ ಮಹಿಳೆಯರ ಸಬಲೀಕರಣಕ್ಕಾಗಿ ಅಹೋರಾತ್ರಿ ಶ್ರಮಿಸುತ್ತಿದ್ದು, ಅಸಂಖ್ಯಾತ ಕುಟುಂಬಗಳ ಬದುಕಿಗೆ ಬೆಳಕು ನೀಡಿರುವ ಅವರ ದೂರದೃಷ್ಟಿ ಮತ್ತು ಸೇವಾಭಾವನೆಯನ್ನು ಗೌರವಿಸುವ ಉದ್ದೇಶದಿಂದ ಈ ಪ್ರಶಸ್ತಿಯನ್ನು ನೀಡಲಾಗಿದೆ ಎಂದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಡಾ. ರಾಜೇಂದ್ರ ಕುಮಾರ್, ಕಳೆದ 15 ವರ್ಷಗಳಿಂದ ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯದ ಅಧ್ಯಯನ ತಂಡವು ಪ್ರೊ. ಫೆಮಿಡಾ ಹ್ಯಾಂಡಿ ಅವರ ನೇತೃತ್ವದಲ್ಲಿ ಎಸ್‌ಸಿಡಿಸಿಸಿ ಬ್ಯಾಂಕ್ ಹಾಗೂ ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್‌ಗೆ ನಿರಂತರವಾಗಿ ಭೇಟಿ ನೀಡುತ್ತಿದ್ದು, ಸ್ವಸಹಾಯ ಸಂಘಗಳ ಮೂಲಕ ಜಾರಿಗೊಳಿಸಿರುವ ಮಹಿಳಾ ಸಬಲೀಕರಣ ಹಾಗೂ ಸೂಕ್ಷ್ಮ ಹಣಕಾಸು (ಮೈಕ್ರೋ ಫೈನಾನ್ಸ್) ಮಾದರಿಯ ಯಶಸ್ಸನ್ನು ಅಧ್ಯಯನ ಮಾಡುತ್ತಿದೆ ಎಂದು ತಿಳಿಸಿದರು.

ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯದ ಅಧ್ಯಯನ ತಂಡದಲ್ಲಿ ಪ್ರೊ. ಫೆಮಿಡಾ ಹ್ಯಾಂಡಿ, ಪ್ರೊ. ಲ್ಯೂಕಸ್ ವಿನೋದ್ ದೀಕ್ಷಿತ್ ಸೇರಿದಂತೆ ಹಲವಾರು ಸಂಶೋಧಕರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಎಸ್‌ಸಿಡಿಸಿಸಿ ಬ್ಯಾಂಕಿನ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ನಿರ್ದೇಶಕರಾದ ಎಂ. ವಾದಿರಾಜ ಶೆಟ್ಟಿ, ಶಶಿಕುಮಾರ್ ರೈ ಬಾಲ್ಯೋಟ್ಟು, ಸದಾಶಿವ ಉಳ್ಳಾಲ್, ಎಸ್.ಬಿ. ಜಯರಾಮ್ ರೈ, ಅಶೋಕ್ ಕುಮಾರ್ ಶೆಟ್ಟಿ, ಎಂ. ಮಹೇಶ್ ಹೆಗ್ಡೆ, ಕೆ. ಜೈರಾಜ್ ಬಿ. ರೈ, ರಾಜೇಶ್ ರಾವ್, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್, ನವೋದಯ ಚಾರಿಟೇಬಲ್ ಟ್ರಸ್ಟ್ ಸಿಇಒ ಪೂರ್ಣಿಮಾ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

You may also like

News

Mangalore Diocese Clergy Retreat Concludes at Shanthi Kiran

The first batch of the Annual Clergy Retreat 2026 of the Diocese of Mangalore concluded on Friday, July 10, at
News

Father Muller Ushers in a New Era of Precision Orthopaedics with the Region’s First STRYKER–USA MAKO SmartRobotics™ System

Father Muller Medical College Hospital has once again reaffirmed its commitment to pioneering excellence in healthcare with the commissioning of

You cannot copy content of this page