ವಿಟ್ಲ ಠಾಣಾ ವ್ಯಾಪ್ತಿಯ ಅಬ್ದುಲ್ ಖಾದರ್ @ ಶೌಕತ್ ಗಡಿಪಾರು
ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕಸಬ ಗ್ರಾಮ, ಬಂಟ್ವಾಳ ತಾಲೂಕು ನಿವಾಸಿ ಅಬ್ದುಲ್ ಖಾದರ್ @ ಶೌಕತ್ ವಿರುದ್ಧ ಹಲ್ಲೆ, ದೊಂಬಿ, ನಿಷೇಧಿತ ಮಾದಕ ದ್ರವ್ಯ ಸೇವನೆ ಹಾಗೂ ಎನ್ಡಿಪಿಎಸ್ ಕಾಯ್ದೆಯಡಿ ಮೂರು ಪ್ರಕರಣಗಳು ದಾಖಲಾಗಿದ್ದವು. ಈತನ ವಿರುದ್ಧ ವಿಟ್ಲ ಪೊಲೀಸ್ ಠಾಣೆಯ ಠಾಣಾಧಿಕಾರಿಗಳ ವರದಿಯ ಆಧಾರದಲ್ಲಿ ಮಂಗಳೂರು ಉಪವಿಭಾಗದ ಸಹಾಯಕ ಆಯುಕ್ತರು ಹಾಗೂ ಉಪವಿಭಾಗಿಯ ದಂಡಾಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.

ಅದರಂತೆ, ಅಬ್ದುಲ್ ಖಾದರ್ @ ಶೌಕತ್ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡುವಂತೆ ಆದೇಶ ಹೊರಡಿಸಲಾಗಿದೆ. ಸದರಿ ಆದೇಶದಂತೆ ಜನವರಿ 08ರಂದು ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪೊಲೀಸ್ ಠಾಣೆಗೆ ಪೊಲೀಸ್ ಭದ್ರತೆಯೊಂದಿಗೆ ಸುರಕ್ಷಿತವಾಗಿ ಕಳುಹಿಸಲಾಗಿದೆ.







