May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ರಿಶೆಲ್ ಡಿಸೋಜ ಸಾವಿಗೆ ನ್ಯಾಯದ ಹೆಜ್ಜೆ – ತಿಂಗಳುಗಳ ಪರಾರಿಯ ಬಳಿಕ ಚಿರಾಗ್ ಬಂಧನ

AICU ರಾಜಾಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ಹಾಗೂ ಕ್ರೈಸ್ತ ಸಂಘಟನಾ ಅಧ್ಯಕ್ಷ ಸ್ಟ್ಯಾನಿ ಪಿಂಟೊ ಅವರ ನಿರಂತರ ಹೋರಾಟದ ಒತ್ತಡಕ್ಕೆ ಮಣಿದ ಪೊಲೀಸ್ ಯಂತ್ರ

ಹೆಚ್ಚಿನ ವಿಚಾರಣೆಗಾಗಿ ಆರೋಪಿ ಪೊಲೀಸ್ ಕಸ್ಟಡಿಗೆ

ಕದ್ರಾದ ಯುವತಿ ರಿಶೆಲ್ ಡಿಸೋಜ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ಆರೋಪಿತನಾಗಿದ್ದ ಚಿರಾಗ್ ಕೊನೆಗೂ ಬಂಧನಕ್ಕೊಳಗಾಗಿದ್ದಾನೆ. ತಿಂಗಳುಗಳಿಂದ ಪೊಲೀಸರ ಕೈಗೆ ಸಿಗದೆ ಬೆಂಗಳೂರು, ಪುಣೆ, ಮಹಾರಾಷ್ಟ್ರ ಹಾಗೂ ಹೈದರಾಬಾದ್‌ನಲ್ಲಿ ಪರಾರಿಯಾಗಿದ್ದ ಆರೋಪಿಯನ್ನು ಚೆನೈನಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗೆ ಪೊಲೀಸ್ ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ತಿಳಿಸಿದ್ದಾರೆ.

ರಿಶೆಲ್ ಸಾವಿನ ಬಳಿಕ ಕುಟುಂಬಸ್ಥರು, ಸಾರ್ವಜನಿಕರು ಹಾಗೂ ವಿವಿಧ ಸಂಘಟನೆಗಳು ನ್ಯಾಯಕ್ಕಾಗಿ ಹೋರಾಟ ನಡೆಸಿದರೂ ಆರಂಭಿಕ ಹಂತದಲ್ಲಿ ನಡೆದ ತನಿಖೆಯಲ್ಲಿ ಲೋಪ ಕಂಡುಬಂದಿತ್ತು. ಇದೇ ಕಾರಣಕ್ಕೆ ಸಂಬಂಧಿಸಿದ ಪಿಎಸ್ಸೈಯನ್ನು ಅಮಾನತು ಮಾಡಲಾಗಿದ್ದು, ಪೊಲೀಸ್ ಇಲಾಖೆಯೊಳಗಿನ ನಿರ್ಲಕ್ಷ್ಯವೂ ತನಿಖೆಯ ಅಂಗಳಕ್ಕೆ ಬಂದಿದೆ.

ಆರೋಪಿಯು ತಪ್ಪಿಸಿಕೊಳ್ಳಲು ಸಹಾಯ ಮಾಡಿದ ಆರೋಪದಲ್ಲಿ ಆತನ ಚಿಕ್ಕಮ್ಮ ಸುವರ್ಣ ಹಾಗೂ ಅಂಕಲ್ ನಿತಿನ್ ಗಾಂವ್ಕರ್ ವಿರುದ್ಧ ‘ಆಶ್ರಯ ನೀಡಿದ’ ಪ್ರಕರಣ ದಾಖಲಾಗಿದ್ದು, ಅವರನ್ನು ವಿಚಾರಣೆಗೆ ಕರೆಸಲಾಗುತ್ತದೆ. ಅಲ್ಲದೆ ಪ್ರಕರಣದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡಿದವರ ಮೇಲೆಯೂ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಪ್ರಕರಣದ ನಿಜಾಂಶ ಹೊರಬರಲು ಮರು ಮರಣೋತ್ತರ ಪರೀಕ್ಷೆಯ ವರದಿ ಹಾಗೂ ಆರೋಪಿತ ಮತ್ತು ಮೃತಳ ಮೊಬೈಲ್‌ಗಳನ್ನು ಎಫ್‌ಎಸ್‌ಎಲ್‌ಗೆ ಕಳುಹಿಸಲಾಗಿದೆ. ವರದಿ ಬಂದ ಬಳಿಕ ಸತ್ಯ ಸ್ಪಷ್ಟವಾಗಲಿದೆ ಎಂದು ಎಸ್ಪಿ ದೀಪನ್ ಎಂ.ಎನ್. ಸ್ಪಷ್ಟಪಡಿಸಿದ್ದಾರೆ.

ಈ ನಡುವೆ AICU ರಾಜಾಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ಹಾಗೂ ಬೆಂಗಳೂರಿನ ಕ್ರೈಸ್ತ ಸಂಘಟನೆ ಅಧ್ಯಕ್ಷರಾದ ಸ್ಟ್ಯಾನಿ ಪಿಂಟೊ ಇವರ ನಿರಂತರ ಹೋರಾಟ ಮತ್ತು ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜ ಅವರು ವಿಧಾನಸೌಧದಲ್ಲಿ ಈ ಪ್ರಕರಣವನ್ನು ಪ್ರಸ್ತಾಪಿಸಿ ಸರ್ಕಾರದ ಗಮನ ಸೆಳೆದಿದ್ದರು. ಆರೋಪಿಯ ಬಂಧನಕ್ಕೂ ಮುನ್ನ ಕರ್ನಾಟಕ ಕ್ರೈಸ್ತ ಸಂಘಟನೆ ಹಾಗೂ ಅಂಬೇಡ್ಕರ್ ಮಹಿಳಾ ಮತ್ತು ಮಕ್ಕಳ ರಕ್ಷಣಾ ವೇದಿಕೆಯವರು ಪೊಲೀಸ್ ಮಹಾ ನಿರ್ದೇಶಕರಾದ ಸಲೀಂ ಅವರನ್ನು ಭೇಟಿ ಮಾಡಿ ತಕ್ಷಣ ಕ್ರಮಕ್ಕೆ ಒತ್ತಾಯಿಸಿದ್ದರು. ಡಿಜಿಪಿಯವರ ನೇರ ಸೂಚನೆಯ ಬಳಿಕವೇ ಬಂಧನ ಪ್ರಕ್ರಿಯೆ ಚುರುಕುಗೊಂಡಿದೆ ಎಂಬ ಆರೋಪವೂ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.

ರಿಶೆಲ್ ಸಾವಿಗೆ ನ್ಯಾಯ ಸಿಗಬೇಕೆಂಬ ಸಾರ್ವಜನಿಕರ ಆಗ್ರಹ ಇದೀಗ ಮತ್ತಷ್ಟು ಬಲ ಪಡೆದುಕೊಂಡಿದೆ.

 

You may also like

News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು
News

ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಮೂಲಭೂತ ಸೌಕರ್ಯ ಒದಗಿಸಲು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ MLC ಐವನ್ ಡಿಸೋಜ

ಕರಾವಳಿ ಕರ್ನಾಟಕದ ಜನರ ದಶಕಗಳ ಬೇಡಿಕೆಯಾಗಿರುವ ಹೈಕೋರ್ಟ್ ಸಂಚಾರಿ ಪೀಠವನ್ನು ಮಂಗಳೂರಿನಲ್ಲಿ ಸ್ಥಾಪಿಸುವ ಪ್ರಕ್ರಿಯೆಗೆ ವೇಗ ನೀಡುವ ನಿಟ್ಟಿನಲ್ಲಿ, ಹೋರಾಟ ಸಮಿತಿಯ ಸಂಚಾಲಕ ಹಾಗೂ ಶಾಸಕ MLC

You cannot copy content of this page