August 27, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕಾನೂನು ಕಾಲೇಜು ತರಗತಿಯಲ್ಲೇ ಶೂಟೌಟ್

ವಿದ್ಯಾರ್ಥಿನಿ ಹತ್ಯೆಗೈದು ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ

ಪಂಜಾಬ್: ಪಂಜಾಬ್‌ನ ತರ್ಣ್ ತರಣ್ ಜಿಲ್ಲೆಯ ಉಸ್ಮಾ ಗ್ರಾಮದ ‘ಮಾಯಿ ಭಾಗೋ ಕಾನೂನು ಕಾಲೇಜಿನಲ್ಲಿ’ ಇಂದು ಫೆಬ್ರವರಿ 9ರಂದು ಸೋಮವಾರ ಬೆಳಿಗ್ಗೆ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಸಹಪಾಠಿ ವಿದ್ಯಾರ್ಥಿನಿಯನ್ನೇ ಗುಂಡಿಕ್ಕಿ ಕೊಂದ ವಿದ್ಯಾರ್ಥಿಯೊಬ್ಬ, ನಂತರ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ನಡೆದಿದ್ದೇನು?

ಇಂದು ಬೆಳಿಗ್ಗೆ ಸುಮಾರು 9:15ಕ್ಕೆ ತರಗತಿಗಳು ಆರಂಭವಾಗುವ ಕೆಲವೇ ಕ್ಷಣಗಳ ಮೊದಲು ಈ ದುರಂತ ಸಂಭವಿಸಿದೆ. ಪ್ರಥಮ ವರ್ಷದ ಕಾನೂನು ವಿದ್ಯಾರ್ಥಿ 20 ವರ್ಷ ಪ್ರಾಯದ ಪ್ರಿನ್ಸ್ ರಾಜ್, ತನ್ನ ಬ್ಯಾಗ್‌ನಿಂದ ಪಿಸ್ತೂಲ್ ತೆಗೆದು ಸಹಪಾಠಿ 19 ವರ್ಷ ಪ್ರಾಯದ ಸಂದೀಪ್ ಕೌರ್ ಅವರ ತಲೆಗೆ ಗುಂಡು ಹಾರಿಸಿದ್ದಾನೆ. ಸಂದೀಪ್ ಕೌರ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಬಳಿಕ ಪ್ರಿನ್ಸ್ ತನಗೆ ತಾನೇ ಗುಂಡು ಹಾರಿಸಿಕೊಂಡಿದ್ದಾನೆ. ಪ್ರಸ್ತುತ ಆತನ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಸಿಸಿಟಿವಿಯಲ್ಲಿ ಸೆರೆಯಾದ ಭಯಾನಕ ದೃಶ್ಯ:

ಕಾಲೇಜಿನ ತರಗತಿಯಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಇಡೀ ಘಟನೆ ಸೆರೆಯಾಗಿದೆ. ಪ್ರಿನ್ಸ್ ಮತ್ತು ಸಂದೀಪ್ ಮೊದಲು ಮಾತನಾಡುತ್ತಿರುವುದು, ನಂತರ ಪ್ರಿನ್ಸ್ ಅಚಾನಕ್ಕಾಗಿ ಪಿಸ್ತೂಲ್ ತೆಗೆದು ಗುಂಡು ಹಾರಿಸುವುದು ದೃಶ್ಯದಲ್ಲಿದೆ. ಈ ವೇಳೆ ತರಗತಿಯಲ್ಲಿದ್ದ ಇತರ ವಿದ್ಯಾರ್ಥಿಗಳು ಭಯಭೀತರಾಗಿ ಓಡಿಹೋಗಿದ್ದಾರೆ.

ಏಕಪಕ್ಷೀಯ ಪ್ರೇಮದ ಶಂಕೆ:

ಈ ಕೃತ್ಯಕ್ಕೆ ನಿಖರ ಕಾರಣ ತಿಳಿದುಬಂದಿಲ್ಲವಾದರೂ, ಇದು ಏಕಪಕ್ಷೀಯ ಪ್ರೇಮಕ್ಕೆ ಸಂಬಂಧಿಸಿದ ಘಟನೆ ಎಂದು ಪೊಲೀಸರು ಶಂಕಿಸಿದ್ದಾರೆ. ಮೃತ ವಿದ್ಯಾರ್ಥಿನಿಯ ಪೋಷಕರು, “ಪ್ರಿನ್ಸ್ ರಾಜ್ ಕಳೆದ ಕೆಲವು ದಿನಗಳಿಂದ ಮಗಳಿಗೆ ಕಿರುಕುಳ ನೀಡುತ್ತಿದ್ದ” ಎಂದು ಆರೋಪಿಸಿದ್ದಾರೆ.

ಕಾಲೇಜು ಭದ್ರತೆಯ ಬಗ್ಗೆ ಪ್ರಶ್ನೆ:

ಶೈಕ್ಷಣಿಕ ಕೇಂದ್ರವಾದ ಕಾಲೇಜು ಆವರಣದೊಳಗೆ ಹಾಗೂ ತರಗತಿ ಕೋಣೆಗೆ ವಿದ್ಯಾರ್ಥಿಯೊಬ್ಬ ಪಿಸ್ತೂಲ್ ತಂದಿದ್ದು ಹೇಗೆ ಎಂಬುದು ಈಗ ದೊಡ್ಡ ಪ್ರಶ್ನೆಯಾಗಿದೆ. ಮೃತ ವಿದ್ಯಾರ್ಥಿನಿಯ ತಾಯಿ ಕಾಲೇಜಿನ ಭದ್ರತಾ ಲೋಪದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಪೊಲೀಸ್ ಕ್ರಮ:

ತರಣ್ ತರಣ್ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿ ತನಿಖೆ ಕೈಗೊಂಡಿದ್ದಾರೆ. ಎರಡೂ ಮೊಬೈಲ್‌ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಲಾಗಿದೆ. ಕಾಲೇಜು ಆವರಣಕ್ಕೆ ಶಸ್ತ್ರಾಸ್ತ್ರ ಸರಬರಾಜಾದ ಮೂಲದ ಬಗ್ಗೆ ತನಿಖೆ ಮುಂದುವರಿದಿದೆ.

You may also like

News

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ DAPC ಬಿಷಪ್‌ಗಳು – ಕ್ರೈಸ್ತ ಸಮುದಾಯದ ಬೇಡಿಕೆಗಳ ಕುರಿತು ಮನವಿ

ಡಯಾಸಿಸ್ ಆಫ್ ಆಲ್ ಪ್ರೊಟೆಸ್ಟಂಟ್ ಚರ್ಚಸ್ (DAPC) ನಿಯೋಗವು ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ, ರಾಜ್ಯದ ಪ್ರೊಟೆಸ್ಟಂಟ್, ಪೆಂಟೆಕೋಸ್ಟಲ್ ಹಾಗೂ ಸ್ವತಂತ್ರ ಕ್ರೈಸ್ತ
News

ಮೊಬೈಲ್‌ಗಾಗಿ ಜಗಳ ತಂಗಿಯ ಕೊಲೆ – ಸಹೋದರ ಸ್ಯಾಮ್ಸನ್ ಫ್ರಾನ್ಸಿಸ್ ಕುಟಿನ್ಹಾನಿಗೆ 5 ವರ್ಷ ಜೈಲು!

ಮೊಬೈಲ್ ವಿಚಾರವಾಗಿ ನಡೆದ ಜಗಳದ ವೇಳೆ ಸ್ವಂತ ತಂಗಿಯ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿ ಆಕೆಯ ಸಾವಿಗೆ ಕಾರಣವಾದ ಪ್ರಕರಣದಲ್ಲಿ ಆರೋಪಿಗೆ ಮಂಗಳೂರು ನ್ಯಾಯಾಲಯ ಶಿಕ್ಷೆ ವಿಧಿಸಿದೆ.

You cannot copy content of this page