ಬೆಳ್ತಂಗಡಿಯಲ್ಲಿ ಶಾಲಾ ವಿದ್ಯಾರ್ಥಿನಿ ಅಪಹರಣ
ಚೂರಿ ಇರಿತ ಪ್ರಕರಣ ನಕಲಿ

ಬಾಲಕಿಯೇ ಸುಳ್ಳು ಹೇಳಿಕೆ ನೀಡಿರುವುದಾಗಿ ಒಪ್ಪಿಗೆ

ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಶಾಲಾ ವಿದ್ಯಾರ್ಥಿನಿಯ ಅಪಹರಣ ಹಾಗೂ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಡೆಸಿದ ತನಿಖೆಯಲ್ಲಿ ಪ್ರಕರಣ ನಕಲಿ ಎಂದು ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಸಂಗ್ರಹಿಸಲಾದ CCTV ದೃಶ್ಯಗಳನ್ನು ಪರಿಶೀಲಿಸಿದಾಗ, ದೂರಿನಲ್ಲಿ ಉಲ್ಲೇಖಿಸಲಾದಂತೆ ಯಾವುದೇ ಸಂಶಯಾಸ್ಪದ ವಾಹನಗಳು ಕಂಡುಬಂದಿಲ್ಲ. ಇದರಿಂದ ಪ್ರಕರಣದ ಬಗ್ಗೆ ಅನುಮಾನ ಬಲಪಟ್ಟಿತ್ತು.


ಇನ್ನು ವಿದ್ಯಾರ್ಥಿನಿಗೆ ನಡೆಸಿದ ವೈದ್ಯಕೀಯ ಪರೀಕ್ಷೆಯಲ್ಲಿ, ಗಾಯವು ಪ್ರಾಥಮಿಕವಾಗಿ ಸ್ವಯಂ ಉಂಟುಮಾಡಿಕೊಂಡ ಗಾಯ (Self Inflicted Wound) ಎಂದು ದೃಢಪಟ್ಟಿದೆ. ನಂತರ ಪೊಲೀಸರು ಬಾಲಕಿಯ ಹೇಳಿಕೆಯನ್ನು ಪುನಃ ದಾಖಲಿಸಿದ್ದು, ಈ ವೇಳೆ ಘಟನೆಯ ಬಗ್ಗೆ ತಾನು ಸುಳ್ಳು ಹೇಳಿಕೆ ನೀಡಿದ್ದೆನೆಂದು ಬಾಲಕಿಯೇ ಒಪ್ಪಿಕೊಂಡಿದ್ದಾಳೆ.
ಬಾಲಕಿ ಅಪ್ರಾಪ್ತೆಯಾಗಿರುವ ಹಿನ್ನೆಲೆಯಲ್ಲಿ, ಆಕೆಯ ಹಿತದೃಷ್ಟಿಯಿಂದ ಪ್ರಕರಣವನ್ನು ಸೂಕ್ಷ್ಮವಾಗಿ ಪರಿಗಣಿಸಲಾಗುತ್ತಿದೆ. ಈ ಸಂಬಂಧ ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿ (CDPO) ಅವರ ಮೂಲಕ ಬಾಲಕಿಗೆ ಕೌನ್ಸೆಲಿಂಗ್ ನೀಡಲಾಗುವುದು. ಕೌನ್ಸೆಲಿಂಗ್ ವರದಿ ಆಧರಿಸಿ ಮುಂದಿನ ಕಾನೂನು ಕ್ರಮದ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಪೊಲೀಸ್ ಇಲಾಖೆ ತಿಳಿಸಿದೆ.

ಇದಲ್ಲದೆ, ಅಪ್ರಾಪ್ತ ಬಾಲಕಿಗೆ ವಾಹನ ಚಾಲನೆಗೆ ಅವಕಾಶ ನೀಡಿದ ವ್ಯಕ್ತಿಯ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದು, ಪರಿಶೀಲಿಸದ ಮಾಹಿತಿ ಅಥವಾ ವದಂತಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳದಂತೆ ಜವಾಬ್ದಾರಿಯಿಂದ ವರ್ತಿಸಬೇಕು ಎಂದು ತಿಳಿಸಿದ್ದಾರೆ.




