ಲೋಕಾಯುಕ್ತ ದಾಳಿ – ಉಡುಪಿ ಅಬಕಾರಿ ಡಿಸಿ ಬಳಿ 8.69 ಕೋಟಿ ರೂಪಾಯಿ ಅಕ್ರಮ ಆಸ್ತಿ ಪತ್ತೆ
ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಅಬಕಾರಿ ಉಪ ಆಯುಕ್ತ (ಡಿಸಿ) ಶ್ರೀನಿವಾಸ್ ಟಿ.ಎಂ. ಅವರಿಗೆ ಸಂಬಂಧಿಸಿದ 15 ಕ್ಕೂ ಹೆಚ್ಚು ಸ್ಥಳಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದರು. ಈ ಕಾರ್ಯಾಚರಣೆಯಲ್ಲಿ ಅಂದಾಜು 8.69 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಆಸ್ತಿ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.


ಉಡುಪಿ ಸೇರಿದಂತೆ ವಿವಿಧ ಸ್ಥಳಗಳಲ್ಲಿ ನಡೆದ ದಾಳಿಯಲ್ಲಿ ಅಧಿಕಾರಿಗಳು ಹಲವು ಪ್ರಮುಖ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಅಧಿಕಾರಿಯ ಮನೆ ಸೇರಿದಂತೆ ವಿವಿಧ ಆಸ್ತಿಗಳಲ್ಲಿ ಪರಿಶೀಲನೆ ನಡೆಸಿದ ಲೋಕಾಯುಕ್ತ ತಂಡವು ಆದಾಯಕ್ಕಿಂತ ಹೆಚ್ಚು ಸಂಪತ್ತು ಹೊಂದಿರುವುದಾಗಿ ಶಂಕಿಸಿ ಈ ಕ್ರಮ ಕೈಗೊಂಡಿದೆ.
ದಾಳಿಯ ವೇಳೆ ಸುಮಾರು 6.90 ಕೋಟಿ ರೂಪಾಯಿ ಮೌಲ್ಯದ ಸ್ಥಿರಾಸ್ತಿಗಳು ಪತ್ತೆಯಾಗಿದ್ದು, ಇದರಲ್ಲಿ 11 ನಿವೇಶನಗಳು, 6 ಸುಸಜ್ಜಿತ ವಾಸದ ಮನೆಗಳು ಹಾಗೂ 31 ಎಕರೆ ಕೃಷಿ ಭೂಮಿ ಸೇರಿವೆ.


ಇದಲ್ಲದೆ ಸುಮಾರು 2.66 ಕೋಟಿ ರೂಪಾಯಿ ಮೌಲ್ಯದ ಚರಾಸ್ತಿಗಳು ಕೂಡ ಪತ್ತೆಯಾಗಿವೆ. ಇದರಲ್ಲಿ 1.47 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣಗಳು, 17 ಲಕ್ಷ ರೂಪಾಯಿ ಮೌಲ್ಯದ ಕಾರುಗಳು, 25.75 ಲಕ್ಷ ರೂಪಾಯಿ ನಗದು ಠೇವಣಿ ಹಾಗೂ 72.68 ಲಕ್ಷ ರೂಪಾಯಿ ಮೌಲ್ಯದ ಗೃಹೋಪಯೋಗಿ ವಸ್ತುಗಳು ಸೇರಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಂಗಳೂರು ಲೋಕಾಯುಕ್ತ ಎಸ್ಪಿ ದಿನೇಶ್ ಕುಮಾರ್ ಅವರ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು, ಅಧಿಕಾರಿಯ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಮುಂದಿನ ದಿನಗಳಲ್ಲಿ ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.


ದಾಳಿಯ ಬಳಿಕ ಈ ಪ್ರಕರಣ ಉಡುಪಿ ಜಿಲ್ಲೆಯಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದು, ಮುಂದಿನ ತನಿಖೆಯನ್ನು ಲೋಕಾಯುಕ್ತ ಅಧಿಕಾರಿಗಳು ಮುಂದುವರೆಸುತ್ತಿದ್ದಾರೆ.




