May 1, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸಂಚಾರ ನಿಯಮ ಉಲ್ಲಂಘಿಸಿದವನಿಗೆ ನ್ಯಾಯಾಲಯದಿಂದ ವಿನೂತನ ಶಿಕ್ಷೆ – 15 ದಿನಗಳ ಕಾಲ ‘ಸಮುದಾಯ ಸೇವೆ’ಗೆ ಆದೇಶ

ಪದೇ ಪದೇ ಸಂಚಾರ ನಿಯಮಗಳನ್ನು ಗಾಳಿಗೆ ತೂರುತ್ತಿದ್ದ ಸವಾರನೊಬ್ಬನಿಗೆ ಸುಳ್ಯದ ನ್ಯಾಯಾಲಯವು ದಂಡದ ಜೊತೆಗೆ ಸಾರ್ವಜನಿಕವಾಗಿ ಸಂಚಾರ ನಿಯಮಗಳ ಅರಿವು ಮೂಡಿಸುವ ವಿಶಿಷ್ಟ ಶಿಕ್ಷೆಯನ್ನು ವಿಧಿಸಿದೆ.

ಪ್ರಕರಣದ ಹಿನ್ನೆಲೆ:

ದಿನಾಂಕ 12/03/2026 ರಂದು ಸುಳ್ಯ ನಿವಾಸಿ ರಕ್ಷಿತ್ ಜಿ. ಎಂಬುವವರು ಸುಳ್ಯ ಪೇಟೆಯಲ್ಲಿ ಸಂಚಾರ ನಿಯಮಗಳನ್ನು ಸತತವಾಗಿ ಉಲ್ಲಂಘಿಸಿದ್ದರು. ಈ ಬಗ್ಗೆ ಸುಳ್ಯ ಪೊಲೀಸ್ ಠಾಣೆಯ ಉಪ ನಿರೀಕ್ಷಕರಾದ ಸಂತೋಷ್ ಬಿ.ಪಿ. ಅವರು ಐಎಂವಿ ಕಾಯ್ದೆಯಡಿ (IMV Act) ವಿವಿಧ ಕಲಂಗಳಡಿ (119 R/w 177, 184, 194(C)) ಮೂರು ಪ್ರತ್ಯೇಕ ಲಘು ಪ್ರಕರಣಗಳನ್ನು ದಾಖಲಿಸಿದ್ದರು. ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ಸುಳ್ಯದ ಮಾನ್ಯ ಎಸ್.ಸಿ.ಜೆ. ಮತ್ತು ಜೆ.ಎಮ್.ಎಫ್.ಸಿ. ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಲಾಗಿತ್ತು.

ನ್ಯಾಯಾಲಯದ ಮಹತ್ವದ ತೀರ್ಪು:

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಗೆ ಈ ಕೆಳಗಿನ ಶಿಕ್ಷೆಗಳನ್ನು ವಿಧಿಸಿ ಆದೇಶ ಹೊರಡಿಸಿದೆ:

* ನಗದು ದಂಡ: ಪ್ರತ್ಯೇಕ ಎರಡು ಪ್ರಕರಣಗಳಲ್ಲಿ ಒಟ್ಟು 3,000 ರೂಪಾಯಿ ದಂಡ ವಿಧಿಸಲಾಗಿದೆ.

* ಸಮುದಾಯ ಸೇವೆ (Community Service): ಇದು ಈ ತೀರ್ಪಿನ ವಿಶೇಷತೆಯಾಗಿದ್ದು, ಆರೋಪಿಯು ಒಟ್ಟು ಮೂರು ಪ್ರಕರಣಗಳಲ್ಲಿ ತಲಾ 5 ದಿನಗಳಂತೆ (ದಿನಾಂಕ 15/03/2026 ರಿಂದ 29/03/2026 ರವರೆಗೆ) ಒಟ್ಟು 15 ದಿನಗಳ ಕಾಲ ಸುಳ್ಯ ಪೇಟೆಯ ಪ್ರಮುಖ ಜಂಕ್ಷನ್‌ಗಳಲ್ಲಿ ನಿಂತು ಸಾರ್ವಜನಿಕರಿಗೆ ಸಂಚಾರ ನಿಯಮಗಳ ಬಗ್ಗೆ ಅರಿವು ಮೂಡಿಸಬೇಕು.

* ಜಾಗೃತಿ ಫಲಕ ಹಿಡಿಯಬೇಕು: ಶಿಕ್ಷೆಯ ಅವಧಿಯಲ್ಲಿ ಸಂಚಾರ ನಿಯಮಗಳ ಅರಿವು ಮೂಡಿಸುವ ಫಲಕಗಳನ್ನು ಹಿಡಿದು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವಂತೆ ನ್ಯಾಯಾಲಯ ಸೂಚಿಸಿದೆ.

* ಪರವಾನಗಿ ಅಮಾನತು: ಆರೋಪಿತನ ಚಾಲನಾ ಪರವಾನಗಿಯನ್ನು (Driving License) ಮೂರು ತಿಂಗಳ ಕಾಲ ಅಮಾನತಿನಲ್ಲಿಡಲು ಆದೇಶಿಸಲಾಗಿದೆ.

ಸಂಚಾರ ನಿಯಮಗಳನ್ನು ಮೀರುವವರಿಗೆ ಈ ತೀರ್ಪು ಒಂದು ಎಚ್ಚರಿಕೆಯ ಸಂದೇಶವಾಗಿದ್ದು, ಸಾರ್ವಜನಿಕ ವಲಯದಲ್ಲಿ ಶ್ಲಾಘನೆ ವ್ಯಕ್ತವಾಗಿದೆ.

You may also like

News

ದ್ವಿತೀಯ ಪಿಯುಸಿ ಫಲಿತಾಂಶ – ಮಂಗಳೂರಿನ ಸೈಂಟ್ ಆಗ್ನೇಸ್ ಕಾಲೇಜಿಗೆ ಶೇ. 98.05 ಯಶಸ್ಸು

ರಾಜ್ಯ ಮಟ್ಟದಲ್ಲಿ ಮಿಂಚಿದ ವಿದ್ಯಾರ್ಥಿನಿಯರನ್ನು ಅಭಿನಂದಿಸಿದ ಪ್ರಾಂಶುಪಾಲರಾದ ಭಗಿನಿ ನೊರಿನ್ ಡಿಸೋಜ 2025-26 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಮಂಗಳೂರು ನಗರದ ಪ್ರತಿಷ್ಠಿತ ಸೈಂಟ್
News

ಧರ್ಮಸ್ಥಳದಲ್ಲಿ 54ನೇ ವರ್ಷದ ಸಾಮೂಹಿಕ ವಿವಾಹ – 106 ಜೋಡಿಗಳ ದಾಂಪತ್ಯ ಆರಂಭ

ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಏಪ್ರಿಲ್ 29ರಂದು ಬುಧವಾರ ಸಂಜೆ 6.40ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ

You cannot copy content of this page