ರಾಜ್ಯದ ರಾಜಕೀಯದಲ್ಲಿ ಹೊಸ ಅಧ್ಯಾಯ – ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್
ರಾಜ್ಯ ರಾಜಕೀಯದಲ್ಲಿ ದೀರ್ಘಕಾಲದ ಹೋರಾಟ, ಸಂಘಟನಾ ಕೌಶಲ್ಯ ಮತ್ತು ಪಕ್ಷನಿಷ್ಠೆಯ ಮೂಲಕ ಗುರುತಿಸಿಕೊಂಡಿರುವ ಸನ್ಮಾನ್ಯ ಡಿ.ಕೆ. ಶಿವಕುಮಾರ್ ಅವರು ಇಂದು ಜೂನ್ 3ರಂದು ಬುಧವಾರ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು.

ಬೆಂಗಳೂರಿನ ಲೋಕಭವನದ ಗಾಜಿನ ಮನೆಯಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಘನತವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಡಿ.ಕೆ. ಶಿವಕುಮಾರ್ ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣವಚನ ಬೋಧಿಸಿದರು. ಸಾವಿರಾರು ಕಾರ್ಯಕರ್ತರು, ಗಣ್ಯರು ಹಾಗೂ ವಿವಿಧ ಕ್ಷೇತ್ರಗಳ ಪ್ರತಿನಿಧಿಗಳ ಸಮ್ಮುಖದಲ್ಲಿ ನಡೆದ ಈ ಸಮಾರಂಭವು ವಿಶೇಷ ಗಮನ ಸೆಳೆಯಿತು. ಸಂವಿಧಾನದ ಪ್ರತಿಯನ್ನು ಕೈಯಲ್ಲಿ ಹಿಡಿದು ತಮ್ಮ ಆರಾಧ್ಯ ದೈವ ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಸನ್ಮಾನ್ಯ ಡಿ.ಕೆ. ಶಿವಕುಮಾರ್ ಅವರು, ಕಾರ್ಯಕ್ರಮ ಆರಂಭಕ್ಕೂ ಮುನ್ನ ವೇದಿಕೆಗೆ ನಮಸ್ಕರಿಸಿ, ವೀರ ಗಂಗಾಧರ ಅಜ್ಜಯ್ಯನವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.


ರಾಜಕೀಯ ಜೀವನದಲ್ಲಿ ಹಲವು ಸವಾಲುಗಳು ಮತ್ತು ಏಳುಬೀಳುಗಳನ್ನು ಎದುರಿಸುತ್ತಾ ಪಕ್ಷ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿದ ನಾಯಕನಾಗಿ ಗುರುತಿಸಿಕೊಂಡಿರುವ ಅವರ ಅಧಿಕಾರಾರೋಹಣ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಮತ್ತು ಸಂಭ್ರಮ ಮೂಡಿಸಿದೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಬೆಂಬಲಿಗರು ಸಮಾರಂಭದಲ್ಲಿ ಭಾಗವಹಿಸಿ ಶುಭ ಹಾರೈಸಿದರು.
ಪ್ರಮಾಣವಚನ ಸಮಾರಂಭವು ಶಿಸ್ತುಬದ್ಧ ಹಾಗೂ ಅದ್ದೂರಿಯಾಗಿ ನಡೆಯಿತು. ಕಾರ್ಯಕ್ರಮದ ಪ್ರತಿಯೊಂದು ಕ್ಷಣವೂ ಕಾರ್ಯಕರ್ತರು ಮತ್ತು ಸಾರ್ವಜನಿಕರ ಗಮನ ಸೆಳೆಯಿತು. ನೂತನ ಮುಖ್ಯಮಂತ್ರಿಯವರ ಅಧಿಕಾರ ಸ್ವೀಕಾರದೊಂದಿಗೆ ರಾಜ್ಯದ ಅಭಿವೃದ್ಧಿ, ಜನಪರ ಆಡಳಿತ ಮತ್ತು ಸುಶಾಸನದ ಕುರಿತು ಹೊಸ ನಿರೀಕ್ಷೆಗಳು ವ್ಯಕ್ತವಾಗಿವೆ. ರಾಜ್ಯದ ರಾಜಕೀಯ ಇತಿಹಾಸದಲ್ಲಿ ಮತ್ತೊಂದು ಮಹತ್ವದ ಅಧ್ಯಾಯಕ್ಕೆ ಚಾಲನೆ ದೊರೆತಿದ್ದು, ನೂತನ ನಾಯಕತ್ವದಡಿ ಸರ್ಕಾರ ಯಾವ ರೀತಿಯ ಅಭಿವೃದ್ಧಿ ಕಾರ್ಯಕ್ರಮಗಳನ್ನು ರೂಪಿಸಲಿದೆ ಎಂಬುದರತ್ತ ರಾಜ್ಯದ ಜನರ ಚಿತ್ತ ನೆಟ್ಟಿದೆ.




