August 25, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

30 ವರ್ಷಗಳ ಕಾಲ ಜ್ಞಾನದ ದೀಪ ಬೆಳಗಿಸಿದ ಶಿಕ್ಷಕಿ ಜುಲಿಯಾನ ಡಯಾಸ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ

ಸಾವಿರಾರು ವಿದ್ಯಾರ್ಥಿಗಳ ಮನ ಗೆದ್ದ ಶಿಕ್ಷಕಿ

ಶಿಕ್ಷಣ ಕ್ಷೇತ್ರದಲ್ಲಿ ಮೂರು ದಶಕಗಳ ಕಾಲ ಸಮರ್ಪಣಾ ಮನೋಭಾವದಿಂದ ಸೇವೆ ಸಲ್ಲಿಸಿ ಸಾವಿರಾರು ವಿದ್ಯಾರ್ಥಿಗಳ ಬದುಕಿನಲ್ಲಿ ಜ್ಞಾನದ ಬೆಳಕು ಹರಡಿದ ಬೈಂದೂರು ಕುಂದಾಪುರದಲ್ಲಿನ ಶಿಕ್ಷಕಿ ಜುಲಿಯಾನ ಡಯಾಸ್ ಅವರು ಸರ್ಕಾರಿ ಸೇವೆಯಿಂದ ವಯೋನಿವೃತ್ತಿ ಹೊಂದಿದ್ದಾರೆ. ತಮ್ಮ ಬೋಧನಾ ಬದುಕಿನ ಆರಂಭವನ್ನು ಅಯ್ಯಂಗಾರ್ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಮಾರು ಎರಡುವರೆ ವರ್ಷಗಳ ಸೇವೆಯೊಂದಿಗೆ ಆರಂಭಿಸಿದ ಅವರು, ಬಳಿಕ ತಲ್ಲೂರಿನ ಕೋಟೆಬಾಗಿಲು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಮಾರು 27 ವರ್ಷಗಳಿಗಿಂತ ಅಧಿಕ ಸುದೀರ್ಘ ಸೇವೆ ಸಲ್ಲಿಸಿ ಶಿಕ್ಷಣ ಕ್ಷೇತ್ರದಲ್ಲಿ ವಿಶಿಷ್ಟ ಗುರುತನ್ನು ಮೂಡಿಸಿದರು. ನಂತರ ಆಲೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕಿಯಾಗಿ ಅಲ್ಪಾವಧಿಯ ಸೇವೆ ಸಲ್ಲಿಸಿ ಗೌರವಯುತವಾಗಿ ನಿವೃತ್ತಿ ಹೊಂದಿದ್ದಾರೆ.

ಸರಳತೆ, ಸಜ್ಜನಿಕೆ, ಕರ್ತವ್ಯನಿಷ್ಠೆ ಹಾಗೂ ವಿದ್ಯಾರ್ಥಿಗಳ ಮೇಲಿನ ಅಪಾರ ಪ್ರೀತಿ-ಕಾಳಜಿಯಿಂದ ಶಿಕ್ಷಕಿ ಜುಲಿಯಾನ ಡಯಾಸ್ ಅವರು ವಿದ್ಯಾರ್ಥಿಗಳು, ಪೋಷಕರು ಹಾಗೂ ಸಹೋದ್ಯೋಗಿಗಳ ಅಪಾರ ಗೌರವಕ್ಕೆ ಪಾತ್ರರಾಗಿದ್ದರು. ಪಾಠ ಬೋಧನೆಯನ್ನು ಕೇವಲ ಪಠ್ಯಕ್ರಮಕ್ಕೆ ಸೀಮಿತಗೊಳಿಸದೆ, ಮಕ್ಕಳಲ್ಲಿ ಉತ್ತಮ ಸಂಸ್ಕಾರ, ನೈತಿಕ ಮೌಲ್ಯಗಳು ಮತ್ತು ಜೀವನ ಕೌಶಲ್ಯಗಳನ್ನು ಬೆಳೆಸುವಲ್ಲಿ ಅವರು ಮಹತ್ವದ ಪಾತ್ರ ವಹಿಸಿದ್ದರು.

ಅವರ ಸೌಮ್ಯ ಸ್ವಭಾವ, ಆತ್ಮೀಯ ನಡೆ ಮತ್ತು ಸಮರ್ಪಿತ ಸೇವೆಯಿಂದ ಅನೇಕ ವಿದ್ಯಾರ್ಥಿಗಳ ನೆಚ್ಚಿನ ಶಿಕ್ಷಕಿಯಾಗಿ ಗುರುತಿಸಿಕೊಂಡಿದ್ದರು. ಅವರ ಮಾರ್ಗದರ್ಶನದಲ್ಲಿ ಶಿಕ್ಷಣ ಪಡೆದ ಹಲವರು ಇಂದು ವಿವಿಧ ಕ್ಷೇತ್ರಗಳಲ್ಲಿ ಯಶಸ್ಸಿನ ಹಾದಿಯಲ್ಲಿ ಸಾಗುತ್ತಿದ್ದು, ತಮ್ಮ ಶಿಕ್ಷಕಿಯ ಕೊಡುಗೆಯನ್ನು ಕೃತಜ್ಞತೆಯಿಂದ ಸ್ಮರಿಸುತ್ತಿದ್ದಾರೆ. ಕೋಟೆಬಾಗಿಲು-ತಲ್ಲೂರು ಗ್ರಾಮಸ್ಥರೊಂದಿಗೂ ಅವರು ಆತ್ಮೀಯ ಬಾಂಧವ್ಯ ಬೆಳೆಸಿಕೊಂಡಿದ್ದರು. ಗ್ರಾಮಸ್ಥರು ಅವರನ್ನು ತಮ್ಮ ಕುಟುಂಬದ ಸದಸ್ಯೆಯಂತೆಯೇ ಪ್ರೀತಿಸುತ್ತಿದ್ದರೆ, ಶಿಕ್ಷಕಿ ಜುಲಿಯಾನ ಡಯಾಸ್ ಅವರೂ ಜನರೊಂದಿಗೆ ಅತ್ಯಂತ ಆತ್ಮೀಯತೆಯಿಂದ ಬೆರೆತು ಸಮಾಜದ ವಿಶ್ವಾಸ ಗಳಿಸಿದ್ದರು.

ಸುಮಾರು 30 ವರ್ಷಗಳ ಕಾಲ ಶಿಕ್ಷಣ ಸೇವೆಯಲ್ಲಿ ತೊಡಗಿಸಿಕೊಂಡು ಜ್ಞಾನ ದಾನ ಎಂಬ ಮಹತ್ತರ ಕಾರ್ಯದ ಮೂಲಕ ಸಮಾಜ ನಿರ್ಮಾಣಕ್ಕೆ ಅಮೂಲ್ಯ ಕೊಡುಗೆ ನೀಡಿದ ಅವರ ನಿವೃತ್ತಿ ಶಾಲಾ ವಲಯ ಹಾಗೂ ಗ್ರಾಮಸ್ಥರಲ್ಲಿ ಭಾವನಾತ್ಮಕ ಕ್ಷಣಕ್ಕೆ ಕಾರಣವಾಗಿದೆ. ಅವರ ಮುಂದಿನ ನಿವೃತ್ತ ಜೀವನವು ಉತ್ತಮ ಆರೋಗ್ಯ, ನೆಮ್ಮದಿ, ಸಂತೋಷ ಹಾಗೂ ದೇವರ ಕೃಪಾಶೀರ್ವಾದದಿಂದ ಕೂಡಿರಲಿ ಎಂದು ವಿದ್ಯಾರ್ಥಿಗಳು, ಪೋಷಕರು, ಸಹೋದ್ಯೋಗಿಗಳು, ಹಳೆಯ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಹೃತ್ಪೂರ್ವಕವಾಗಿ ಶುಭ ಹಾರೈಸಿದ್ದಾರೆ.

You may also like

News

ಕಸ ಗುಡಿಸುವ ಕಾಯಕದಿಂದ ಫಾರ್ಚುನರ್‌ವರೆಗೆ – ಸೇಸಪ್ಪ ಅವರ ಯಶೋಗಾಥೆ!

ಬಡತನ ಕನಸು ಕಾಣುವುದಕ್ಕೆ ಅಡ್ಡಿಯಾಗದು ಎಂಬುದಕ್ಕೆ ಬಂಟ್ವಾಳ ತಾಲೂಕಿನ ನಾವೂರು ನಿವಾಸಿ ಹಾಗೂ ಬಂಟ್ವಾಳ ಪುರಸಭೆಯ ಪೌರಕಾರ್ಮಿಕ ಸೇಸಪ್ಪ ಅವರ ಬದುಕು ಉತ್ತಮ ಉದಾಹರಣೆ. ಲಕ್ಷಾಂತರ ರೂಪಾಯಿ
News

ಪೊಂಪೈ ಕಾಲೇಜು ಐಕಳದಲ್ಲಿ ಮಾದಕ ವಸ್ತು, ಮಾನವ ಕಳ್ಳಸಾಗಣೆ ವಿರುದ್ಧ ಜಾಗೃತಿ

ಯುವಜನತೆ ಜಾಗೃತರಾದರೆ ಸಮಾಜ ಸುಧಾರಣೆ ಸಾಧ್ಯ – ಗಣೇಶ್ ಕುಮಾರ್ ಪೊಂಪೈ ಕಾಲೇಜು ಐಕಳದ ಆಂತರಿಕ ಗುಣಮಟ್ಟ ಭರವಸೆ ಕೋಶ, ಮಾನವ ಕಳ್ಳಸಾಗಣೆ ವಿರೋಧಿ ಸಂಘ, ಮಾದಕ

You cannot copy content of this page