August 25, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪ್ರೀತಿಯ ನಾಟಕವಾಡಿ ₹50 ಲಕ್ಷದ ಚಿನ್ನದೊಂದಿಗೆ ಪರಾರಿಯಾಗಿದ್ದ ಪೋಕ್ಸೋ ಆರೋಪಿ ರೋಶನ್ ಫೆರ್ನಾಂಡಿಸ್ ಬಂಧನ

ಬೆಳ್ತಂಗಡಿ DYSP ರೋಹಿಣಿ ಸಿ.ಕೆ. ನೇತೃತ್ವದ ತಂಡದಿಂದ ಭರ್ಜರಿ ಕಾರ್ಯಾಚರಣೆ – ಅಪ್ರಾಪ್ತ ಬಾಲಕಿ ಸುರಕ್ಷಿತವಾಗಿ ಪೋಷಕರ ವಶಕ್ಕೆ

AICU ರಾಜ್ಯಾಧ್ಯಕ್ಷ ಅಲ್ವಿನ್ ಡಿಸೋಜ ಪಾನೀರ್ ಅವರ ಮನವಿಗೆ ತಕ್ಷಣ ಸ್ಪಂದಿಸಿದ ಪೊಲೀಸ್ ಇಲಾಖೆ

ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ ಹೆಸರಿನಲ್ಲಿ ನಂಬಿಸಿ, ಆಕೆಯ ಮನೆಯಿಂದ ಸುಮಾರು ₹50 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ತೆಗೆದುಕೊಂಡು ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಬೆಳ್ತಂಗಡಿ ಉಪವಿಭಾಗದ ಪೊಲೀಸ್ ಇಲಾಖೆ ಯಶಸ್ವಿಯಾಗಿದೆ.

ಬಂಧಿತ ಆರೋಪಿಯನ್ನು ರೋಶನ್ ಫೆರ್ನಾಂಡಿಸ್ ಎಂದು ಗುರುತಿಸಲಾಗಿದೆ. ಈತ ಅಪ್ರಾಪ್ತ ಬಾಲಕಿಯನ್ನು ನಂಬಿಸಿ ಮನೆಯಿಂದ ಭಾರಿ ಪ್ರಮಾಣದ ಚಿನ್ನಾಭರಣಗಳನ್ನು ತರಿಸಿಕೊಂಡು ಪರಾರಿಯಾಗಿದ್ದ ಎನ್ನಲಾಗಿದೆ.

ಲಭ್ಯ ಮಾಹಿತಿಯ ಪ್ರಕಾರ, ಮೇ 10ರಂದು ಬೆಳ್ತಂಗಡಿ ತಾಲೂಕಿನ ಅಪ್ರಾಪ್ತ ಬಾಲಕಿಯೊಬ್ಬಳೊಂದಿಗೆ ಸ್ನೇಹ ಬೆಳೆಸಿದ್ದ ಆರೋಪಿ, ಆಕೆಯನ್ನು ನಂಬಿಸಿ ಮನೆಯಲ್ಲಿದ್ದ ಚಿನ್ನಾಭರಣಗಳನ್ನು ತೆಗೆದುಕೊಂಡು ಬರಲು ಪ್ರೇರೇಪಿಸಿದ್ದ. ಬಳಿಕ ಚಿನ್ನಾಭರಣಗಳೊಂದಿಗೆ ತಲೆಮರೆಸಿಕೊಂಡಿದ್ದಾನೆ. ತನಿಖೆಯಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ಮೊಬೈಲ್ ಫೋನ್ ಸೇರಿದಂತೆ ಯಾವುದೇ ತಾಂತ್ರಿಕ ಸಂಪರ್ಕ ಸಾಧನಗಳನ್ನು ಬಳಸದೆ ಅಡಗಿಕೊಂಡಿದ್ದ ಎನ್ನಲಾಗಿದೆ.

ಆರೋಪಿಯ ವಿರುದ್ಧ ಈ ಹಿಂದೆ ಕೂಡ ಕಾನೂನು ಪ್ರಕರಣಗಳು ದಾಖಲಾಗಿದ್ದವು ಎಂದು ತಿಳಿದುಬಂದಿದೆ. 2016ರಲ್ಲಿ ಉಳ್ಳಾಲ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿಗೆ ಸಂಬಂಧಿಸಿದ ಪ್ರಕರಣದಲ್ಲಿ ಈತನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಜೈಲು ಶಿಕ್ಷೆಯನ್ನೂ ಅನುಭವಿಸಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕಿಯ ಕುಟುಂಬಸ್ಥರು ನೆರವಿಗಾಗಿ ಆಲ್ ಇಂಡಿಯಾ ಕ್ಯಾಥೊಲಿಕ್ ಯೂನಿಯನ್ (AICU) ರಾಜ್ಯಾಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ಅವರನ್ನು ಸಂಪರ್ಕಿಸಿದ್ದರು. ಕುಟುಂಬದ ಮನವಿಗೆ ಸ್ಪಂದಿಸಿದ ಅವರು, ಬೆಳ್ತಂಗಡಿ ಡಿವೈಎಸ್ಪಿ ರೋಹಿಣಿ ಸಿ.ಕೆ. ಅವರನ್ನು ಭೇಟಿ ಮಾಡಿ ಪ್ರಕರಣದ ಗಂಭೀರತೆಯನ್ನು ವಿವರಿಸಿ ತ್ವರಿತ ಕ್ರಮಕ್ಕೆ ಮನವಿ ಮಾಡಿದ್ದರು.

ಇದನ್ನು ಗಂಭೀರವಾಗಿ ಪರಿಗಣಿಸಿದ ಡಿವೈಎಸ್ಪಿ ರೋಹಿಣಿ ಸಿ.ಕೆ. ಅವರು ಆರೋಪಿಯ ಪತ್ತೆಗಾಗಿ ವಿಶೇಷ ತನಿಖಾ ತಂಡವನ್ನು ರಚಿಸಿದ್ದರು. ನಿರಂತರ ತಾಂತ್ರಿಕ ಹಾಗೂ ಸ್ಥಳೀಯ ಮಾಹಿತಿ ಸಂಗ್ರಹದ ಮೂಲಕ ಕಾರ್ಯಾಚರಣೆ ನಡೆಸಿದ ತಂಡವು, ಅಂತಿಮವಾಗಿ ಮೂಡಬಿದಿರೆಯಲ್ಲಿ ಅಡಗಿದ್ದ ರೋಶನ್ ಫೆರ್ನಾಂಡಿಸ್‌ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಸದ್ಯ ಆರೋಪಿಯ ವಿರುದ್ಧ ಪೋಕ್ಸೋ ಸೇರಿದಂತೆ ಸಂಬಂಧಿತ ಕಾನೂನು ವಿಧಿಗಳ ಅಡಿಯಲ್ಲಿ ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಳ್ಳಲಾಗಿದೆ. ಅಪ್ರಾಪ್ತ ಬಾಲಕಿಯನ್ನು ಸುರಕ್ಷಿತವಾಗಿ ಪೋಷಕರ ವಶಕ್ಕೆ ಒಪ್ಪಿಸಲಾಗಿದೆ ಎಂದು ತಿಳಿದುಬಂದಿದೆ.

ಈ ಕಾರ್ಯಾಚರಣೆಯಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ರವಿ ಬಿ.ಎಸ್., ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ರಾಜೇಶ್ ಕೆ.ವಿ., ಎಎಸ್‌ಐ ಬಿನ್ನಿ, ಹೆಡ್ ಕಾನ್ಸ್ಟೇಬಲ್ ಪ್ರವೀಣ್, ಕಾನ್ಸ್ಟೇಬಲ್‌ಗಳಾದ ನಾಗರಾಜ್ ಹಾಗೂ ಬಸವರಾಜ್ ಮತ್ತು ಸಂತೋಷ್ ಕೆ.ಸಿ. ಉಪ್ಪಿನಂಗಡಿ ಸೇರಿದಂತೆ ವಿಶೇಷ ತಂಡದ ಸದಸ್ಯರು ಭಾಗವಹಿಸಿದ್ದರು.

ಅಲ್ಪಾವಧಿಯಲ್ಲೇ ಆರೋಪಿಯನ್ನು ಬಂಧಿಸಿ ಪ್ರಕರಣವನ್ನು ಭೇದಿಸಿದ ಡಿವೈಎಸ್ಪಿ ರೋಹಿಣಿ ಸಿ.ಕೆ. ಹಾಗೂ ಅವರ ತಂಡದ ಕಾರ್ಯಕ್ಷಮತೆಗೆ ಸಾರ್ವಜನಿಕ ವಲಯದಿಂದ ಪ್ರಶಂಸೆ ವ್ಯಕ್ತವಾಗಿದೆ.

You may also like

News

ಮಡಂತ್ಯಾರಿನಲ್ಲಿ ಸಂಭ್ರಮದ ಕೊಂಕಣಿ ಮಾನ್ಯತಾ ದಿವಸ್

ಕೊಂಕಣಿ ಭಾಷೆ, ಸಂಸ್ಕೃತಿ ಹಾಗೂ ಪರಂಪರೆಯನ್ನು ಸಂರಕ್ಷಿಸಿ, ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಐಸಿವೈಎಂ ಮಡಂತ್ಯಾರು ಘಟಕ, ಸಾಮಾಜಿಕ ಸಂವಹನ ಆಯೋಗ, ಕಥೊಲಿಕ್ ಸಭಾ ಮಡಂತ್ಯಾರು ಹಾಗೂ
News

ಸಂಚಾರ ನಿಯಮ ಉಲ್ಲಂಘನೆ – ಪುತ್ತೂರಿನಲ್ಲಿ ಗ್ಲಾಸ್ ಸ್ಟಿಕ್ಕರ್ ಅಳವಡಿಸಿದ ಹಾಗೂ ನಂಬರ್ ಪ್ಲೇಟ್ ಮರೆಮಾಚಿದ ವಾಹನಗಳಿಗೆ ಪೊಲೀಸರ ದಂಡ!

ಪುತ್ತೂರು: ವಾಹನಗಳ ಗ್ಲಾಸ್‌ಗಳಿಗೆ ದಟ್ಟವಾದ ಸ್ಟಿಕ್ಕರ್ ಅಳವಡಿಸಿ ಚಾಲನೆಗೆ ಅಡ್ಡಿಪಡಿಸುತ್ತಿದ್ದ ಹಾಗೂ ನೋಂದಣಿ ಸಂಖ್ಯೆ (ನಂಬರ್ ಪ್ಲೇಟ್) ಮರೆಮಾಚುವ ರೀತಿಯಲ್ಲಿ ಸ್ಟಿಕ್ಕರ್‌ಗಳನ್ನು ಹಾಕಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿ

You cannot copy content of this page