ವೇಗದ ಅಬ್ಬರಕ್ಕೆ ವಿದ್ಯಾರ್ಥಿ ಬಲಿ – ವಾಹನ ಸಮೇತ ಚಾಲಕ ಪರಾರಿ
ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಸಂಭವಿಸಿದ ಹಿಟ್ ಆ್ಯಂಡ್ ರನ್ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಐಟಿಐ ವಿದ್ಯಾರ್ಥಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮತ್ತೋರ್ವ ವಿದ್ಯಾರ್ಥಿ ಗಂಭೀರ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕುಮಟಾ ತಾಲೂಕಿನ ಹೆಗಡೆ ನಿವಾಸಿ 18 ವರ್ಷ ಪ್ರಾಯದ ಚಿನ್ಮಯ ಪಟಗಾರ್ ಮೃತಪಟ್ಟ ವಿದ್ಯಾರ್ಥಿ. ಯಾಣ ನಿವಾಸಿ ತಿಲಕ ಗೌಡ ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.


ಚಿನ್ಮಯ ಮತ್ತು ತಿಲಕ ಗೌಡ ಇಬ್ಬರೂ ಅಂಕೋಲಾದ ಐಟಿಐ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು. ಜುಲಾಯ್ 7ರಂದು ಮಂಗಳವಾರ ಕುಮಟಾದಿಂದ ಬೈಕ್ನಲ್ಲಿ ಅಂಕೋಲಾಕ್ಕೆ ತೆರಳುತ್ತಿದ್ದ ವೇಳೆ ಬರ್ಗಿ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪರಿಚಿತ ವಾಹನವೊಂದು ಅವರ ಬೈಕ್ಗೆ ವೇಗವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಇಬ್ಬರೂ ರಸ್ತೆಗೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದರು.

ಅಪಘಾತದ ಬಳಿಕ ವಾಹನ ಚಾಲಕ ಗಾಯಾಳುಗಳಿಗೆ ನೆರವಾಗದೆ ಸ್ಥಳದಿಂದ ಪರಾರಿಯಾಗಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಸ್ಥಳೀಯ ಪೊಲೀಸರು ಹಿಟ್ ಆ್ಯಂಡ್ ರನ್ ಪ್ರಕರಣ ದಾಖಲಿಸಿಕೊಂಡಿದ್ದು, ಅಪಘಾತಕ್ಕೆ ಕಾರಣವಾದ ವಾಹನ ಹಾಗೂ ಚಾಲಕನ ಪತ್ತೆಗಾಗಿ ಹೆದ್ದಾರಿಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಪ್ರಕರಣದ ತನಿಖೆಯನ್ನು ತೀವ್ರಗೊಳಿಸಲಾಗಿದೆ.




