ಕಲ್ಲಡ್ಕ ಶ್ರೀ ರಾಮ ಶಾಲಾ ಬಸ್ ಮೇಲೆ ಮರ ಬಿದ್ದು ದುರಂತ – ಓರ್ವ ವಿದ್ಯಾರ್ಥಿ ಮೃತ್ಯು, ಇಬ್ಬರು ಆಸ್ಪತ್ರೆಗೆ ದಾಖಲು
ಶಾಲೆ ಮುಗಿಸಿ ಮನೆಗೆ ತೆರಳುತ್ತಿದ್ದ ಶಾಲಾ ಬಸ್ ಮೇಲೆ ಬೃಹತ್ ಗಾತ್ರದ ಮರಬಿದ್ದು, ಮಗುವೊಂದು ಸ್ಥಳದಲ್ಲೇ ಮೃತಪಟ್ಟು, ಮತ್ತಿಬ್ಬರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದಲ್ಲಿ ಸಂಭವಿಸಿದೆ.



ಘಟನೆಯ ವಿವರ:
ಇಂದು ಜುಲಾಯ್ 22ರಂದು ಸಂಜೆ ಸುಮಾರು 5 ಗಂಟೆಯ ವೇಳೆಗೆ ಕಲ್ಲಡ್ಕ ಶ್ರೀ ರಾಮ ಶಾಲೆಯ ಬಸ್ಸು ದಿನನಿತ್ಯದಂತೆ ವಿದ್ಯಾರ್ಥಿಗಳನ್ನು ಅವರ ಮನೆಗಳಿಗೆ ಕರೆದೊಯ್ಯುತ್ತಿತ್ತು. ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೇಟ್ಟಿ ದೈವಸ್ಥಾನದ ಬಳಿ ಬಸ್ಸು ಸಾಗುತ್ತಿದ್ದಾಗ, ರಸ್ತೆ ಬದಿಯಲ್ಲಿದ್ದ ಬೃಹತ್ ಗಾತ್ರದ ಮರವೊಂದು ಏಕಾಏಕಿ ಬಸ್ನ ಮೇಲೆ ಉರುಳಿಬಿದ್ದಿದೆ.

ಮರ ಬಿದ್ದ ರಭಸಕ್ಕೆ ಬಸ್ನಲ್ಲಿದ್ದ ಮಗುವೊಂದು ದುರದೃಷ್ಟವಶಾತ್ ಪ್ರಾಣ ಕಳೆದುಕೊಂಡಿದೆ. ಇನ್ನುಳಿದಂತೆ ಇಬ್ಬರು ಮಕ್ಕಳು ತೀವ್ರವಾಗಿ ಗಾಯಗೊಂಡಿದ್ದು, ತಕ್ಷಣವೇ ಅವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ರವಾನಿಸಲಾಗಿದೆ.

ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕಾನೂನು ಕ್ರಮ ಹಾಗೂ ತನಿಖೆಯನ್ನು ಕೈಗೊಂಡಿದ್ದಾರೆ.



