ಬಂಟ್ವಾಳದ ಕೆದಿಲ ಗ್ರಾಮದಲ್ಲಿ ಭೀಕರ ಗುಡ್ಡ ಕುಸಿತ – ಅಪಾಯದ ಅಂಚಿನಲ್ಲಿ 2 ಮನೆಗಳು, ಸ್ಥಳೀಯರಲ್ಲಿ ತೀವ್ರ ಆತಂಕ!
ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದ ಪಾಟ್ರಕೋಡಿ ಸಮೀಪದ ಕುದುಂಬ್ಲಾಡಿಯಲ್ಲಿ ದಿಢೀರ್ ಗುಡ್ಡ ಕುಸಿತ ಸಂಭವಿಸಿದ್ದು, ಸ್ಥಳೀಯ ಬಡ ಕುಟುಂಬಗಳ ಎರಡು ಮನೆಗಳು ಹಾಗೂ ವಿದ್ಯುತ್ ಕಂಬಗಳು ಸಂಪೂರ್ಣ ಅಪಾಯದ ಅಂಚಿಗೆ ಸಿಲುಕಿವೆ. ಹಸಿಮೀನು ವ್ಯಾಪಾರಿ ಸಿದ್ದೀಕ್ ಹಾಗೂ ಸಮೀರ್ ಗಡಿಯಾರ ಎಂಬವರ ಮನೆಗಳ ಹಿಂಭಾಗದ ಗುಡ್ಡ ಕುಸಿದಿದ್ದು, ಮನೆಗಳು ಯಾವುದೇ ಕ್ಷಣದಲ್ಲಾದರೂ ಧರಾಶಾಹಿಯಾಗುವ ಭೀತಿ ಎದುರಾಗಿದೆ. ಇದರೊಂದಿಗೆ ವಿದ್ಯುತ್ ಕಂಬಗಳು ಸಹ ಧರೆಗುರುಳುವ ಹಂತದಲ್ಲಿದ್ದು, ಸುತ್ತಮುತ್ತಲಿನ ಸಾರ್ವಜನಿಕರಲ್ಲಿ ಭಾರೀ ಆತಂಕ ಮೂಡಿಸಿದೆ.


ಸ್ಥಳೀಯರ ಆಕ್ರೋಶ ಮತ್ತು ಮನವಿ:
“ಅನಾಹುತ ಸಂಭವಿಸಿದ ಮೇಲೆ ಬಂದು ಮೊಸಳೆ ಕಣ್ಣೀರು ಸುರಿಸುವ ಬದಲು, ಸಂಬಂಧಪಟ್ಟ ಅಧಿಕಾರಿಗಳು ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಬಾಧಿತ ಕುಟುಂಬಗಳಿಗೆ ಸೂಕ್ತ ರಕ್ಷಣೆ ಹಾಗೂ ಧೈರ್ಯ ತುಂಬುವ ಕೆಲಸ ತಕ್ಷಣವೇ ಆಗಬೇಕಾಗಿದೆ” ಎಂದು ಸ್ಥಳೀಯ ಗ್ರಾಮಸ್ಥರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕೂಡಲೇ ಜಿಲ್ಲಾಡಳಿತ ಹಾಗೂ ಕೆದಿಲ ಗ್ರಾಮ ಪಂಚಾಯತ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳದಿದ್ದರೆ ದೊಡ್ಡ ಮಟ್ಟದ ಪ್ರಾಣಾಪಾಯ ಹಾಗೂ ಆಸ್ತಿಪಾಸ್ತಿ ನಷ್ಟ ಸಂಭವಿಸುವ ಸಾಧ್ಯತೆಯಿದೆ. ಆದ್ದರಿಂದ ಸಂಬಂಧಪಟ್ಟ ಇಲಾಖೆಗಳು ತಕ್ಷಣವೇ ಸ್ಪಂದಿಸಿ ಪರ್ಯಾಯ ವ್ಯವಸ್ಥೆ ಮಾಡಿಕೊಡಬೇಕೆಂದು ಗ್ರಾಮಸ್ಥರು ತುರ್ತು ಮನವಿ ಮಾಡಿದ್ದಾರೆ.




