ಕುಂದಾಪುರ ಚರ್ಚ್ ಎದುರೇ ಐವನ್ ರಿಚರ್ಡ್ ಮಸ್ಕರೇನಸ್ ಅವರ ಬರ್ಬರ ಹತ್ಯೆ – ಪಿಸ್ತೂಲ್ನಿಂದ ಗುಂಡಿಕ್ಕಿ ದುಷ್ಕರ್ಮಿ ಪರಾರಿ
ಕುಂದಾಪುರ ನಗರದ ಮಧ್ಯಭಾಗದಲ್ಲಿರುವ ಹೋಲಿ ರೋಸರಿ ಚರ್ಚ್ ಎದುರಿನ ರಸ್ತೆಯಲ್ಲಿ ಇಂದು ಜುಲಾಯಿ 31ರಂದು ಶುಕ್ರವಾರ ಮುಂಜಾನೆ ಭೀಕರ ಕೊಲೆ ಪ್ರಕರಣವೊಂದು ನಡೆದಿದ್ದು, ವ್ಯಕ್ತಿಯೊಬ್ಬರನ್ನು ಪಿಸ್ತೂಲ್ನಿಂದ ಗುಂಡಿಕ್ಕಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬಾರ್ಕೂರು ಕಳ್ಳೂರು ಮೂಲದ 45 ವರ್ಷ ಪ್ರಾಯದ ಐವನ್ ರಿಚರ್ಡ್ ಮಸ್ಕರೇನಸ್ ಹತ್ಯೆಯಾದ ದುರದೃಷ್ಟಕರ ವ್ಯಕ್ತಿ.

ಘಟನೆಯ ವಿವರ:
ವಿವಿಧ ವ್ಯವಹಾರಗಳಲ್ಲಿ ತೊಡಗಿಸಿಕೊಂಡಿದ್ದ ಐವನ್, ತಮ್ಮ ಮೊದಲ ಪತ್ನಿ ಸೆಲ್ಮಾ ಮಸ್ಕರೇನಸ್ ಅವರನ್ನು ತೊರೆದು ಬಾರ್ಕೂರು ಮೂಲದ ಮತ್ತೊಬ್ಬ ಮಹಿಳೆಯೊಂದಿಗೆ ವಾಸಿಸುತ್ತಿದ್ದರು. ಇಂದು ಬೆಳಿಗ್ಗೆ ಸುಮಾರು 3.30ರ ವೇಳೆಗೆ ಐವನ್ ಅವರು ಮಹಿಳೆಯೊಂದಿಗೆ ಕಾರಿನಲ್ಲಿ ಆಗಮಿಸಿದ್ದಾಗ ಕುಂದಾಪುರದ ಚರ್ಚ್ ಎದುರು ಈ ಕೃತ್ಯ ನಡೆದಿದೆ.

ಅಜ್ಞಾತ ಆರೋಪಿಯೊಬ್ಬ ಪಿಸ್ತೂಲ್ನಿಂದ ಐವನ್ ಅವರ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾನೆ. ಗುಂಡೇಟಿನಿಂದ ತೀವ್ರ ರಕ್ತಸ್ರಾವಕ್ಕೊಳಗಾದ ಐವನ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಘಟನೆ ವೇಳೆ ಜೊತೆಯಲ್ಲಿದ್ದ ಮಹಿಳೆ ಆರೋಪಿಯನ್ನು ಗುರುತಿಸಿದ್ದು, ಹಣಕಾಸು ಅಥವಾ ಹಳೆಯ ವ್ಯವಹಾರದ ಹಿನ್ನೆಲೆಯಲ್ಲಿ ಈ ಹತ್ಯೆ ನಡೆದಿರಬಹುದು ಎಂದು ಪೊಲೀಸರ ಪ್ರಾಥಮಿಕ ತನಿಖೆಯಿಂದ ಅಂದಾಜಿಸಲಾಗಿದೆ.

ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳ ಭೇಟಿ:
ಘಟನಾ ಸ್ಥಳಕ್ಕೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್, ಹೆಚ್ಚುವರಿ SP ಸುಧಾಕರ್ ನಾಯಕ್, DYSP ಎಚ್.ಡಿ. ಕುಲಕರ್ಣಿ, ಕುಂದಾಪುರ ನಗರ ಠಾಣೆಯ ಇನ್ಸ್ಪೆಕ್ಟರ್ ಜಯರಾಮ ಗೌಡ ಹಾಗೂ ಪಿಎಸ್ಐಗಳಾದ ನಂಜಾ ನಾಯ್ಕ್, ಪುಷ್ಪಾ ಮತ್ತು ಅನೂಪ್ ನಾಯಕ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸೋಕೋ (SOCO) ಬೆರಳಚ್ಚು ಹಾಗೂ ವಿಧಿವಿಜ್ಞಾನ ತಂಡವು ಸ್ಥಳಕ್ಕೆ ಭೇಟಿ ನೀಡಿ ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿದೆ. ತಲೆಮರೆಸಿಕೊಂಡಿರುವ ಆರೋಪಿಯ ಬಂಧನಕ್ಕಾಗಿ ಪೊಲೀಸರು ವ್ಯಾಪಕ ಬಲೆ ಬೀಸಿದ್ದಾರೆ.




