11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆಯತ್ನ ಪ್ರಕರಣದ ಪ್ರಮುಖ ಆರೋಪಿ ‘ಚುಂಕಿ’ ಸಿಸಿಬಿ ಬಲೆಗೆ!
ಸುಮಾರು 11 ವರ್ಷಗಳಿಂದ ಪೊಲೀಸರ ಕಣ್ಣು ತಪ್ಪಿಸಿ ತಲೆಮರೆಸಿಕೊಂಡಿದ್ದ ಕೊಲೆಯತ್ನ ಪ್ರಕರಣದ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಮಂಗಳೂರು ಸಿಸಿಬಿ (CCB) ಪೊಲೀಸರು ಯಶಸ್ವಿಯಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಮಲ್ಲೇನಹಳ್ಳಿ ಮೂಲದ 34 ವರ್ಷ ಪ್ರಾಯದ ಚುಂಕಿ ಆಕಾಶಭವನ ಅಲಿಯಾಸ್ ಸಂತೋಷ್ ಎಸ್. ಬಂಧಿತ ಆರೋಪಿ.

ಪ್ರಕರಣದ ಹಿನ್ನೆಲೆ:
2015ರಲ್ಲಿ ಮಂಗಳೂರು ನಗರದ ಆಕಾಶಭವನದಲ್ಲಿ ನಡೆದ ಮದುವೆಯ ‘ಮಧುರಂಗಿ’ ಶಾಸ್ತ್ರದ ಸಂದರ್ಭದಲ್ಲಿ ಅಶೋಕ ಕುಮಾರ ಕೊಟ್ಟಾರಿ ಹಾಗೂ ಜಗ್ಗು ಎಂಬವರ ನಡುವೆ ಕ್ಷುಲ್ಲಕ ಕಾರಣಕ್ಕೆ ಮಾತಿನ ಚಕಮಕಿ ನಡೆದಿತ್ತು. ಈ ವೇಳೆ ಪ್ರಮುಖ ಆರೋಪಿ ಸಂತೋಷ್ ಅಲಿಯಾಸ್ ಚುಂಕಿ, ತನ್ನ ಸಹಚರರಾದ ರಂಜಿತ್, ಧನು, ಧೂಮ, ಸ್ವೀಟಿ ಅಲಿಯಾಸ್ ನರೇಶ್ ಮತ್ತು ಜಗ್ಗು ಅವರೊಂದಿಗೆ ಸೇರಿಕೊಂಡು ಅಶೋಕ ಕುಮಾರ್ ಅವರ ಮೇಲೆ ತಲವಾರಿನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದನು.
ಈ ಘಟನೆಗೆ ಸಂಬಂಧಿಸಿದಂತೆ ಕಾವೂರು ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ (ಪ್ರಕರಣ ಸಂಖ್ಯೆ: 135/2015) ಪ್ರಕರಣ ದಾಖಲಾಗಿತ್ತು. ಘಟನೆ ನಡೆದ ದಿನದಿಂದಲೂ ಆರೋಪಿ ಚುಂಕಿ ತಲೆಮರೆಸಿಕೊಂಡಿದ್ದರಿಂದ, ಮಾನ್ಯ ನ್ಯಾಯಾಲಯವು ಆತನ ವಿರುದ್ಧ LPC (Long Pending Case – 25/2025) ವಾರಂಟ್ ಹೊರಡಿಸಿತ್ತು.


ಹಾವೇರಿಯಲ್ಲಿ ಸಿಸಿಬಿ ಕಾರ್ಯಾಚರಣೆ:
ಯಾವುದೇ ಸುಳಿವು ನೀಡದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಗ್ಗೆ ಸುದೀರ್ಘ ಕಾಲದಿಂದ ಮಾಹಿತಿ ಕಲೆಹಾಕುತ್ತಿದ್ದ ಸಿಸಿಬಿ ಪೊಲೀಸರಿಗೆ, ಆತ ಶಿವಮೊಗ್ಗದಲ್ಲಿರುವ ಬಗ್ಗೆ ಖಚಿತ ಮಾಹಿತಿ ಲಭಿಸಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಸಿಸಿಬಿ ತಂಡ, ಜುಲೈ 29ರಂದು ಬುಧವಾರ ಹಾವೇರಿ ಜಿಲ್ಲೆಯ ಚಿಕ್ಕೆರೂರು ಎಂಬಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಬಂಧಿತ ಆರೋಪಿಯನ್ನು ಮುಂದಿನ ಕಾನೂನು ಕ್ರಮಗಳಿಗಾಗಿ ಕಾವೂರು ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ. ಸಿಸಿಬಿ ಘಟಕದ ಅಧಿಕಾರಿಗಳು ಮತ್ತು ಸಿಬ್ಬಂದಿ ಈ ಯಶಸ್ವಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.




