August 15, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸೆಪ್ಟೆಂಬರ್ 12ರಂದು ಬಂಟ್ವಾಳದಲ್ಲಿ ರಾಷ್ಟ್ರೀಯ ಲೋಕ ಅದಾಲತ್ – ರಾಜಿ ಮೂಲಕ ಪ್ರಕರಣಗಳ ಇತ್ಯರ್ಥಕ್ಕೆ ಅವಕಾಶ

ಬಾಕಿ ಉಳಿದಿರುವ ರಾಜಿಯಾಗಬಹುದಾದ ಪ್ರಕರಣಗಳನ್ನು ತ್ವರಿತವಾಗಿ ಮತ್ತು ಸೌಹಾರ್ದಯುತವಾಗಿ ಇತ್ಯರ್ಥಪಡಿಸುವ ಉದ್ದೇಶದಿಂದ ಸೆಪ್ಟೆಂಬರ್ 12ರಂದು ಬಂಟ್ವಾಳ ನ್ಯಾಯಾಲಯ ಸಂಕೀರ್ಣದಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ಲೋಕ ಅದಾಲತ್‌ನ ಪೂರ್ವಭಾವಿ ಸಭೆ ಬಂಟ್ವಾಳ ಹಿರಿಯ ಸಿವಿಲ್ ಜಡ್ಜ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ನಡೆಯಿತು.

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಬಂಟ್ವಾಳ ನ್ಯಾಯಾಲಯಗಳ ವ್ಯಾಪ್ತಿಯಲ್ಲಿ ವಿಚಾರಣೆಯ ಹಂತದಲ್ಲಿರುವ ರಾಜಿಯಾಗಬಹುದಾದ ಸಿವಿಲ್ ಹಾಗೂ ಕ್ರಿಮಿನಲ್ ಪ್ರಕರಣಗಳನ್ನು ಲೋಕ ಅದಾಲತ್ ಮೂಲಕ ಇತ್ಯರ್ಥಪಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಬಂಟ್ವಾಳ ಹಿರಿಯ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶರಾದ ಅನಿಲ್ ಪ್ರಕಾಶ್ ಎಂ.ಪಿ. ಅವರು ತಿಳಿಸಿದರು.

ಲೋಕ ಅದಾಲತ್‌ನಲ್ಲಿ ಕ್ರಿಮಿನಲ್ ಕಾಂಪೌಂಡಬಲ್ ಪ್ರಕರಣಗಳು, ಎನ್‌ಐ ಕಾಯ್ದೆಯ ಪ್ರಕರಣಗಳು, ಬ್ಯಾಂಕ್ ಹಾಗೂ ಹಣ ವಸೂಲಿ ಪ್ರಕರಣಗಳು, ಎಂಎಸಿಟಿ ಪ್ರಕರಣಗಳು, ಕಾರ್ಮಿಕ ವ್ಯಾಜ್ಯಗಳು, ಕೌಟುಂಬಿಕ ವಿವಾದಗಳು, ಭೂಸ್ವಾಧೀನ ಹಾಗೂ ಕಂದಾಯ ಸಂಬಂಧಿತ ಪ್ರಕರಣಗಳು ಸೇರಿದಂತೆ ವಿವಿಧ ರಾಜಿಯಾಗಬಹುದಾದ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಅವಕಾಶವಿದೆ ಎಂದು ಅವರು ಹೇಳಿದರು.

ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸುವುದರಿಂದ ಸಮಯ ಮತ್ತು ವೆಚ್ಚವನ್ನು ಉಳಿಸಿಕೊಳ್ಳುವುದರ ಜೊತೆಗೆ, ಎರಡೂ ಪಕ್ಷಗಳ ಸಮ್ಮತಿಯೊಂದಿಗೆ ಸೌಹಾರ್ದಯುತ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗಲಿದೆ ಎಂದು ತಿಳಿಸಲಾಯಿತು.

ಸಭೆಯಲ್ಲಿ ಪ್ರಧಾನ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶರಾದ ರಾಜೇಂದ್ರ ಪ್ರಸಾದ್ ಕೆ.ಎಸ್., ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶೆಯವರಾದ ಸೌಂದರ್ಯ ಎಂ. ಉಪಸ್ಥಿತರಿದ್ದರು.

ಬಂಟ್ವಾಳ ವ್ಯಾಪ್ತಿಯ ವಿವಿಧ ಇಲಾಖೆಗಳ ಅಧಿಕಾರಿಗಳು, ಪೊಲೀಸ್ ಠಾಣೆಗಳ ಪೊಲೀಸ್ ನಿರೀಕ್ಷಕರು ಹಾಗೂ ಉಪನಿರೀಕ್ಷಕರು, ರಾಷ್ಟ್ರೀಕೃತ ಬ್ಯಾಂಕ್‌ಗಳು ಮತ್ತು ಸಹಕಾರಿ ಸಂಸ್ಥೆಗಳ ಶಾಖಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿ ಲೋಕ ಅದಾಲತ್‌ನಲ್ಲಿ ಪ್ರಕರಣಗಳ ಇತ್ಯರ್ಥಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಿದರು.

You may also like

News

27 ವರ್ಷಗಳ ಸೇವೆಯ ಬಳಿಕ ಜೀವನ್ ಸಂತೋಷ್ ಮಾರ್ಟಿಸ್‌ ಅವರು KSRTC ಟ್ರಾಫಿಕ್ ಕಂಟ್ರೋಲರ್ ಹುದ್ದೆಗೆ ಬಡ್ತಿ

KSRTC ಪುತ್ತೂರು ವಿಭಾಗದಲ್ಲಿ ಸುದೀರ್ಘ ಸೇವೆ ಸಲ್ಲಿಸಿರುವ ಬಂಟ್ವಾಳ ತಾಲೂಕಿನ ಮಾಣಿ ಗ್ರಾಮದ ಮಾರ್ಟಿಸ್ ಕುಟುಂಬದ ಜೀವನ್ ಸಂತೋಷ್ ಮಾರ್ಟಿಸ್ ಅವರು ಟ್ರಾಫಿಕ್ ಕಂಟ್ರೋಲರ್ (ಸಂಚಾರ ನಿಯಂತ್ರಕ)
News

ಕನ್ನಡ ಪತ್ರಿಕಾ ಸಂಸ್ಕೃತಿ ಉಳಿವಿಗಾಗಿ ಕಾಸರಗೋಡಿನಲ್ಲಿ ಐತಿಹಾಸಿಕ ಹೆಜ್ಜೆ – “ಮನೆಗೊಂದು, ಶಾಲೆಗೊಂದು ಕನ್ನಡ ಪತ್ರಿಕಾ ಅಭಿಯಾನ”ಕ್ಕೆ ಚಾಲನೆ

ಕನ್ನಡ ಪತ್ರಿಕೋದ್ಯಮದ 183ನೇ ಸಂಸ್ಥಾಪನಾ ವರ್ಷಾಚರಣೆಯ ಸುಸಂದರ್ಭದಲ್ಲಿ, ಪತ್ರಿಕಾ ಓದುಗರನ್ನು ಪ್ರೋತ್ಸಾಹಿಸಲು ಹಾಗೂ ಭಾಷಾಭಿಮಾನವನ್ನು ಜಾಗೃತಗೊಳಿಸಲು “ನಮ್ಮ ಪತ್ರಿಕೆ – ನಮ್ಮ ಹೆಮ್ಮೆ” ಎಂಬ ಘೋಷಣೆಯೊಂದಿಗೆ “ಮನೆಗೊಂದು,

You cannot copy content of this page