ಸೆಪ್ಟೆಂಬರ್ 8ಕ್ಕೆ ದಕ್ಷಿಣ ಕನ್ನಡ–ಉಡುಪಿ ಜಿಲ್ಲೆಗಳಲ್ಲಿ ರಜೆ ಘೋಷಿಸಲು ಮನವಿ
ಸಚಿವ ಯು.ಟಿ. ಖಾದರ್ ಅವರಿಗೆ ಸ್ಟ್ಯಾನಿ ಪಿಂಟೋ ಬೆಂಗಳೂರು ಹಾಗೂ ಆಲ್ವಿನ್ ಡಿಸೋಜ ಪಾನೀರ್ ನೇತೃತ್ವದ ನಿಯೋಗದಿಂದ ಭೇಟಿ

ಕಥೊಲಿಕ್ ಕ್ರೈಸ್ತ ಸಮುದಾಯದಲ್ಲಿ ಪ್ರತೀ ವರ್ಷ ಸೆಪ್ಟೆಂಬರ್ 8ರಂದು ಆಚರಿಸುವ ಕನ್ಯಾ ಮರಿಯಮ್ಮನವರ ಜನ್ಮದಿನದ ಪ್ರಯುಕ್ತ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಿಸಬೇಕೆಂದು ಆಗ್ರಹಿಸಿ ಸಚಿವರಾದ ಸನ್ಮಾನ್ಯ ಯು. ಟಿ. ಖಾದರ್ ಫರೀದ್ ಅವರಿಗೆ ಕ್ರೈಸ್ತ ಸಂಘಟನೆಗಳ ಮುಖಂಡರು ಮನವಿ ಸಲ್ಲಿಸಿದ್ದಾರೆ.


ಕರ್ನಾಟಕ ಕ್ರೈಸ್ತ ಸಂಘಟನೆಯ ಸಂಸ್ಥಾಪಕ ಹಾಗೂ ರಾಜ್ಯಾಧ್ಯಕ್ಷ ಸ್ಟ್ಯಾನಿ ಪಿಂಟೋ ಬೆಂಗಳೂರು ಮತ್ತು ಅಖಿಲ ಭಾರತ ಕ್ರೈಸ್ತ ಒಕ್ಕೂಟದ (AICU) ರಾಜ್ಯಾಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ಅವರ ನೇತೃತ್ವದ ನಿಯೋಗವು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಮತ್ತು ಆರೋಗ್ಯ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವರಾದ ಸನ್ಮಾನ್ಯ ಯು. ಟಿ. ಖಾದರ್ ಅವರನ್ನು ಭೇಟಿಯಾಗಿ ಈ ಕುರಿತು ವಿಸ್ತೃತ ಚರ್ಚೆ ನಡೆಸಿತು.


ಕರಾವಳಿ ಭಾಗದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕಥೊಲಿಕ್ ಸಮುದಾಯದ ಜನರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಎಂಟು ದಿನಗಳ ನೊವೆನಾ ಪ್ರಾರ್ಥನೆಯ ನಂತರ ಸೆಪ್ಟೆಂಬರ್ 8ರಂದು ಮಾತೆ ಮರಿಯಮ್ಮನವರ ಜನ್ಮದಿನವನ್ನು ‘ಮೊಂತಿ ಫೆಸ್ತ್’ ಹೆಸರಿನಲ್ಲಿ ಕೌಟುಂಬಿಕ ಸೌಹಾರ್ದತೆಯೊಂದಿಗೆ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ ಕುಟುಂಬದವರೆಲ್ಲರೂ ಒಂದೆಡೆ ಸೇರಿ ಹೊಸ ತೆನೆ ಪೂಜಿಸಿ, ಭೋಜನ ಸವಿಯುವ ಸುಂದರ ಸಂಪ್ರದಾಯವಿದೆ.


ಇತರ ಸಮುದಾಯಗಳ ಪ್ರಮುಖ ಹಬ್ಬಗಳಿಗೆ ರಜೆ ಇರುವಂತೆ, ಕರಾವಳಿ ಭಾಗದಲ್ಲಿ ಅತ್ಯಂತ ಪವಿತ್ರವಾಗಿ ಆಚರಿಸಲಾಗುವ ಈ ಹಬ್ಬಕ್ಕೂ ಸರ್ಕಾರಿ ರಜೆ ನೀಡುವುದು ಸೂಕ್ತ. ಆದ್ದರಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸಾರ್ವಜನಿಕ ರಜೆ ಘೋಷಿಸಬೇಕು ಎಂಬುದು ಸಮುದಾಯದ ಹಲವು ವರ್ಷಗಳ ಬೇಡಿಕೆಯಾಗಿದೆ ಎಂದು ನಿಯೋಗವು ಸಚಿವರಿಗೆ ವಿವರಿಸಿತು.
ಈ ಸಂದರ್ಭದಲ್ಲಿ ಕ್ರೈಸ್ತ ಸಂಘಟನೆಯ ಪ್ರಮುಖ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.



