‘ವಂದೇ ಮಾತರಂ’ ರಾಜಕೀಯಗೊಳಿಸುವ ಬಿಜೆಪಿ ನಡೆ ಖಂಡನೀಯ – ಕೆ. ಹರೀಶ್ ಕುಮಾರ್
ಬಂಕಿಮಚಂದ್ರ ಚಟರ್ಜಿ ರಚಿಸಿದ ‘ವಂದೇ ಮಾತರಂ’ ಗೀತೆಯನ್ನು ಕಾಂಗ್ರೆಸ್ ಪಕ್ಷವು ಸ್ವಾತಂತ್ರ್ಯ ಹೋರಾಟದ ಕಾಲದಿಂದಲೂ ಗೌರವದಿಂದ ಹಾಡುತ್ತಾ ಬಂದಿದೆ. ಕಾಂಗ್ರೆಸ್ ಅಧಿವೇಶನಗಳು, ವಿವಿಧ ಕಾರ್ಯಕ್ರಮಗಳು ಹಾಗೂ ಪಕ್ಷದ ಕಚೇರಿಗಳಲ್ಲಿಯೂ ವಂದೇ ಮಾತರಂ ಗೀತೆಗೆ ಗೌರವ ನೀಡಲಾಗುತ್ತಿದೆ. ಆದರೆ, ಇದೀಗ ಬಿಜೆಪಿ ಈ ರಾಷ್ಟ್ರಭಕ್ತಿ ಗೀತೆಯನ್ನು ರಾಜಕೀಯಗೊಳಿಸಲು ಮುಂದಾಗಿರುವುದು ಖಂಡನೀಯ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ. ಹರೀಶ್ ಕುಮಾರ್ ಹೇಳಿದ್ದಾರೆ.


ವಂದೇ ಮಾತರಂ ಕುರಿತು ಕಾಂಗ್ರೆಸ್ಗೆ ಬುದ್ಧಿ ಹೇಳುವ ಮೊದಲು ಆರೆಸ್ಸೆಸ್ ಹಾಗೂ ಬಿಜೆಪಿ ತಮ್ಮ ನಿಲುವನ್ನು ಸ್ಪಷ್ಟಪಡಿಸಬೇಕು. ಆರೆಸ್ಸೆಸ್ ಕಚೇರಿಗಳಲ್ಲಿ ವಂದೇ ಮಾತರಂ ಹಾಡಲಾಗುತ್ತದೆಯೇ ಎಂಬುದನ್ನು ಬಿಜೆಪಿ ಸ್ಪಷ್ಟಪಡಿಸಲಿ. ದೇಶದ ತ್ರಿವರ್ಣ ಧ್ವಜದ ಬಗ್ಗೆ ನಿಜವಾದ ಗೌರವವಿದ್ದರೆ, ಆರೆಸ್ಸೆಸ್ನ ಕೇಂದ್ರ ಕಚೇರಿಯಲ್ಲಿ ನಿಯಮಿತವಾಗಿ ತ್ರಿವರ್ಣ ಧ್ವಜ ಹಾರಿಸಲು ಆರಂಭಿಸಿದ ದಿನಾಂಕವನ್ನೂ ದೇಶದ ಜನತೆಗೆ ತಿಳಿಸಲಿ ಎಂದು ಅವರು ಆಗ್ರಹಿಸಿದ್ದಾರೆ.


ಸಂಘ ಗೀತೆಗೆ ಮಾತ್ರ ಸೀಮಿತವಾಗದೆ ರಾಷ್ಟ್ರಗೀತೆ ಹಾಗೂ ರಾಷ್ಟ್ರೀಯ ಗೀತೆಗಳಿಗೆ ಗೌರವ ನೀಡುವ ಸಂಸ್ಕೃತಿಯನ್ನು ಬೆಳೆಸಿಕೊಂಡ ಬಳಿಕ ಕಾಂಗ್ರೆಸ್ಗೆ ದೇಶಭಕ್ತಿಯ ಪಾಠ ಹೇಳಲು ಬಿಜೆಪಿ ಮುಂದಾಗಲಿ. ಸ್ವಾತಂತ್ರ್ಯ ಹೋರಾಟದಲ್ಲಿ ಆರೆಸ್ಸೆಸ್ ಅಥವಾ ಜನಸಂಘದವರು ವಹಿಸಿದ ಪಾತ್ರವೇನು ಎಂಬುದನ್ನು ಬಿಜೆಪಿ ಮೊದಲು ದೇಶದ ಮುಂದೆ ಸ್ಪಷ್ಟಪಡಿಸಬೇಕು. ಸ್ವಾತಂತ್ರ್ಯಕ್ಕಾಗಿ ಆರೆಸ್ಸೆಸ್ ಅಥವಾ ಜನಸಂಘದ ಯಾರಾದರೂ ಪ್ರಾಣತ್ಯಾಗ ಮಾಡಿರುವ ದಾಖಲೆಗಳಿದ್ದರೆ ಅವುಗಳನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡಲಿ ಎಂದು ಹರೀಶ್ ಕುಮಾರ್ ಸವಾಲು ಹಾಕಿದ್ದಾರೆ.

ಶಿಕ್ಷಣ ಕ್ಷೇತ್ರವನ್ನು ಕೇಸರೀಕರಣಗೊಳಿಸಿದವರು, ದೇಶದ ಪ್ರಧಾನಿಗಳು ದಶಕಗಳ ಕಾಲ ನಿರ್ಮಿಸಿದ ಸಾರ್ವಜನಿಕ ಆಸ್ತಿಗಳನ್ನು ಮಾರಾಟ ಮಾಡಿದವರು ಹಾಗೂ ಇತಿಹಾಸವನ್ನು ತಿರುಚಲು ಪ್ರಯತ್ನಿಸುತ್ತಿರುವವರು ಕಾಂಗ್ರೆಸ್ ಪಕ್ಷಕ್ಕೆ ದೇಶಭಕ್ತಿ ಮತ್ತು ಇತಿಹಾಸದ ಪಾಠ ಹೇಳುವ ಅಗತ್ಯವಿಲ್ಲ ಎಂದು ಅವರು ಟೀಕಿಸಿದ್ದಾರೆ. ಕಾಂಗ್ರೆಸ್ ಪಕ್ಷವು ಸ್ವಾತಂತ್ರ್ಯ ಹೋರಾಟದ ಪರಂಪರೆ ಹಾಗೂ ಸಂವಿಧಾನದ ಮೌಲ್ಯಗಳನ್ನು ಗೌರವಿಸಿಕೊಂಡು ಮುನ್ನಡೆಯುತ್ತಿದೆ. ದೇಶದ ಏಕತೆ, ಸಾರ್ವಭೌಮತೆ ಮತ್ತು ಜಾತ್ಯತೀತ ಆಶಯಗಳನ್ನು ಕಾಪಾಡುವುದು ಕಾಂಗ್ರೆಸ್ನ ಬದ್ಧತೆಯಾಗಿದೆ ಎಂದು ಕೆ. ಹರೀಶ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



