ಪುತ್ತೂರಿನಲ್ಲಿ ಅಕ್ರಮ ಜಾನುವಾರು ಸಾಗಾಟ ಪತ್ತೆ – ಮೂರು ಜಾನುವಾರುಗಳ ರಕ್ಷಣೆ, ವಾಹನ ಸಹಿತ ಆರೋಪಿ ವಶಕ್ಕೆ
ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಪಿಕ್ಅಪ್ ವಾಹನವನ್ನು ಪುತ್ತೂರು ನಗರ ಠಾಣೆ ಪೊಲೀಸರು ತಡೆದು ಪರಿಶೀಲಿಸಿ, ವಾಹನದಲ್ಲಿದ್ದ ಮೂರು ಜಾನುವಾರುಗಳನ್ನು ರಕ್ಷಿಸಿರುವ ಘಟನೆ ಪುತ್ತೂರು ಚಿಕ್ಕಮುಡ್ನೂರು ಗ್ರಾಮದ ಜಿಡೆಕಲ್ಲು ಎಂಬಲ್ಲಿ ನಡೆದಿದೆ. ಆನಡ್ಕ ಕಡೆಯಿಂದ ಪಡೀಲ್ ಕಡೆಗೆ ವಾಹನವೊಂದರಲ್ಲಿ ಅಕ್ರಮವಾಗಿ ಜಾನುವಾರು ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಪುತ್ತೂರು ನಗರ ಠಾಣೆಯ ಪೊಲೀಸ್ ಉಪನಿರೀಕ್ಷಕ ಸುರೇಶ್ ಸಿ.ಟಿ. ಅವರಿಗೆ ದೊರೆತಿತ್ತು. ಮಾಹಿತಿ ಆಧರಿಸಿ ಅವರು ಸಿಬ್ಬಂದಿಯೊಂದಿಗೆ ಜಿಡೆಕಲ್ಲು ಬಳಿ ಕಾರ್ಯಾಚರಣೆ ನಡೆಸಿ, KA 19 D 0948 ನೋಂದಣಿಯ ಪಿಕ್ಅಪ್ ವಾಹನವನ್ನು ತಡೆದು ಪರಿಶೀಲಿಸಿದ್ದಾರೆ.


ಈ ವೇಳೆ ವಾಹನದಲ್ಲಿ ಮೂರು ಜಾನುವಾರುಗಳನ್ನು ಹಿಂಸಾತ್ಮಕವಾಗಿ ಕಟ್ಟಿ ಹಾಕಿರುವುದು ಪೊಲೀಸರ ಗಮನಕ್ಕೆ ಬಂದಿದೆ. ವಾಹನ ಚಾಲಕ ಮಹಮ್ಮದ್ ಜಬ್ಬಾರ್ ಅವರನ್ನು ವಿಚಾರಿಸಿದಾಗ, ಶಾಂತಿಗೋಡು ಗ್ರಾಮದ ನಿವಾಸಿ ಅಶೋಕ್ ಎಂಬವರಿಂದ ಜಾನುವಾರುಗಳನ್ನು ಖರೀದಿಸಿ, ಯಾವುದೇ ಪರವಾನಗಿ ಇಲ್ಲದೆ ವಧೆ ಮಾಡುವ ಉದ್ದೇಶದಿಂದ ಸಾಗಿಸುತ್ತಿರುವುದಾಗಿ ತಿಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.


ಜಾನುವಾರುಗಳನ್ನು ಹಾಗೂ ಪಿಕ್ಅಪ್ ವಾಹನವನ್ನು ವಶಕ್ಕೆ ಪಡೆದ ಪೊಲೀಸರು, ಆರೋಪಿಯನ್ನು ಕೂಡ ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಈ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 101/2026, ಪ್ರಾಣಿ ಹಿಂಸಾ ಕಾಯ್ದೆಯ ಕಲಂ 11(D) ಹಾಗೂ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ–2020ರ ಕಲಂ 4, 5, 12, ಜೊತೆಗೆ IMV Act ಕಲಂ 66 R/w 192(A) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.



