ಪುತ್ತೂರಿನಲ್ಲಿ ಪೊಲೀಸ್ ಪಥಸಂಚಲನ; ಶಾಂತಿ-ಸುವ್ಯವಸ್ಥೆಗೆ ಬಿಗಿ ಭದ್ರತೆ
ಗಲಾಟೆ ಪ್ರಕರಣದ ಕುರಿತು ಪೊಲೀಸರೊಂದಿಗೆ ಮುಕ್ತ ಚರ್ಚೆಗೆ ಅವಕಾಶ

ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಹಾಗೂ ಭದ್ರತೆಯ ಭಾವನೆ ಹೆಚ್ಚಿಸುವ ಉದ್ದೇಶದಿಂದ ಪುತ್ತೂರು ನಗರ ಠಾಣಾ ವ್ಯಾಪ್ತಿಯಲ್ಲಿ ಇಂದು ಆಗಸ್ಟ್ 24ರಂದು ಸೋಮವಾರ ಪೊಲೀಸ್ ಪಥಸಂಚಲನ ನಡೆಸಲಾಯಿತು. ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಸಹಜವಾಗಿ ಬಹುತೇಕ ಅಂಗಡಿ-ಮುಂಗಟ್ಟುಗಳು ಮುಚ್ಚಿರುತ್ತವೆ. ಆದರೆ ಇದರ ಹೊರತಾಗಿ ಯಾವುದೇ ಅಂಗಡಿ ಅಥವಾ ವಾಣಿಜ್ಯ ಸಂಸ್ಥೆಗಳನ್ನು ಬಲವಂತವಾಗಿ ಬಂದ್ ಮಾಡಿಸುವುದಕ್ಕೆ ಅವಕಾಶ ನೀಡದಂತೆ ಅಗತ್ಯ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ಇತ್ತೀಚೆಗೆ ಪುತ್ತೂರಿನಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡು, ಸಂಬಂಧಪಟ್ಟವರಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಪೊಲೀಸರು ಪ್ರಕರಣವನ್ನು ಲಘುವಾಗಿ ಪರಿಗಣಿಸುತ್ತಿದ್ದಾರೆ ಎಂಬ ವದಂತಿಗಳು ಹರಡುತ್ತಿರುವುದು ಸತ್ಯಕ್ಕೆ ದೂರವಾಗಿದೆ ಎಂದು ಪೊಲೀಸ್ ಇಲಾಖೆ ಸ್ಪಷ್ಟಪಡಿಸಿದೆ.

ಈ ಹಿಂದೆಯೂ ಹಲವು ಪ್ರಕರಣಗಳಲ್ಲಿ ಜಾತಿ, ಧರ್ಮ ಅಥವಾ ರಾಜಕೀಯ ಪ್ರಭಾವವನ್ನು ಪರಿಗಣಿಸದೆ ಕಾನೂನು ಪ್ರಕಾರ ನೋಟಿಸ್ ಸೇರಿದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣದ ಕುರಿತು ಯಾರಿಗಾದರೂ ಯಾವುದೇ ಅನುಮಾನ ಅಥವಾ ಪ್ರಶ್ನೆಗಳಿದ್ದಲ್ಲಿ ಪೊಲೀಸ್ ಇಲಾಖೆಯೊಂದಿಗೆ ಮುಕ್ತವಾಗಿ ಚರ್ಚಿಸಬಹುದು. ಸಾರ್ವಜನಿಕರು ಯಾವುದೇ ವದಂತಿಗಳಿಗೆ ಕಿವಿಗೊಡದೆ ಶಾಂತಿ, ಸೌಹಾರ್ದತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡಲು ಸಹಕರಿಸುವಂತೆ ಪೊಲೀಸ್ ಇಲಾಖೆ ಮನವಿ ಮಾಡಿದೆ.



