ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ವೆಬ್ಸೈಟ್ ಅನಾವರಣ
“ಕಷ್ಟದಲ್ಲಿರುವವರಿಗೆ ನೆರವಾದ ತೃಪ್ತಿ ನನ್ನದು” – ಹರಿಕೃಷ್ಣ ಪುನರೂರು

ಸಮಾಜದಲ್ಲಿ ಕಷ್ಟದಲ್ಲಿರುವವರಿಗೆ ತಮ್ಮಿಂದಾದ ನೆರವು ನೀಡಿದ ಸಂತೃಪ್ತಿ ಇದೆ. “ಕೊಟ್ಟದ್ದು ತನಗೆ, ಬಚ್ಚಿಟ್ಟದ್ದು ಪರರಿಗೆ” ಎಂಬ ಮಾತಿನಂತೆ ಬದುಕಿನಲ್ಲಿ ನಡೆದುಕೊಂಡು ಬಂದಿದ್ದೇನೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಪೂರ್ವಾಧ್ಯಕ್ಷ ಹರಿಕೃಷ್ಣ ಪುನರೂರು ಹೇಳಿದರು. ನಗರದ ಪತ್ರಿಕಾ ಭವನದಲ್ಲಿ ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ವೆಬ್ಸೈಟ್ dkwju.com ಅನಾವರಣಗೊಳಿಸಿ ಅವರು ಮಾತನಾಡಿದರು.


ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಕನ್ನಡದ ಸೇವೆಯೊಂದಿಗೆ ಸಮಾಜಮುಖಿ ಕಾರ್ಯಗಳಲ್ಲೂ ತೊಡಗಿಸಿಕೊಂಡಿರುವುದಾಗಿ ತಿಳಿಸಿದ ಅವರು, ಸೂರಿಲ್ಲದವರಿಗೆ ಸರ್ಕಾರದ ನೆರವಿನೊಂದಿಗೆ ಮನೆ ನಿರ್ಮಿಸಲು ಸಹಕರಿಸಿದ್ದು, 101 ಮನೆಗಳನ್ನು ಉಚಿತವಾಗಿ ನಿರ್ಮಿಸಿಕೊಟ್ಟಿದ್ದೇನೆ ಎಂದರು.


ಖ್ಯಾತ ನೇತ್ರ ತಜ್ಞ ಡಾ. ಮೋದಿ ಅವರ ಸಹಕಾರದೊಂದಿಗೆ ಉಚಿತ ಕಣ್ಣಿನ ತಪಾಸಣಾ ಶಿಬಿರಗಳನ್ನು ನಡೆಸಿ 10 ಸಾವಿರಕ್ಕೂ ಅಧಿಕ ಮಂದಿಗೆ ಕಣ್ಣಿನ ಶಸ್ತ್ರಚಿಕಿತ್ಸೆ ಮಾಡಿಸಲಾಗಿದೆ. ಸಮಾಜ ಸೇವಾ ಕಾರ್ಯಗಳಿಗೆ ಪತ್ನಿಯ ಸಹಕಾರವೂ ದೊರೆತಿದ್ದು, ಆರೋಗ್ಯ ಉತ್ತಮವಾಗಿರುವವರೆಗೆ ಇಂತಹ ಸೇವಾ ಚಟುವಟಿಕೆಗಳನ್ನು ಮುಂದುವರಿಸುವ ಆಶಯವಿದೆ ಎಂದು ಹೇಳಿದರು. ಪತ್ರಕರ್ತರ ಗೃಹ ನಿರ್ಮಾಣ ಸಹಕಾರಿ ಸಂಘಕ್ಕೆ ಈ ಹಿಂದೆ ನೀಡಿದ ಭರವಸೆಯಂತೆ ಮುಂದೆಯೂ ಸಹಕಾರ ನೀಡುವುದಾಗಿ ಹರಿಕೃಷ್ಣ ಪುನರೂರು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್. ವಹಿಸಿದ್ದರು. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ, ದಕ್ಷಿಣ ಕನ್ನಡ ಪತ್ರಕರ್ತರ ಗೃಹ ನಿರ್ಮಾಣ ಸಹಕಾರಿ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಉಪಸ್ಥಿತರಿದ್ದರು.
ಪತ್ರಕರ್ತರ ಸಂಘದ ಕೋಶಾಧಿಕಾರಿ ವಿಜಯ ಕೋಟ್ಯಾನ್ ಪಡು ಹಾಗೂ ಗೃಹ ನಿರ್ಮಾಣ ಸಹಕಾರಿ ಸಂಘದ ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ ಕಾರ್ಯಕ್ರಮ ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿ ರಾಜೇಶ್ ಪೂಜಾರಿ ಕೆ. ವಂದಿಸಿದರು.



