ಓಣಂ ಸಂಭ್ರಮದ ನಡುವೆ ದುರಂತ – ತೆರೆದ ಬಾವಿಗೆ ಬಿದ್ದು 10ನೇ ತರಗತಿ ವಿದ್ಯಾರ್ಥಿ ಸಾವು
ಓಣಂ ಆಚರಣೆಯ ಸಂಭ್ರಮದ ನಡುವೆ ಸಂಭವಿಸಿದ ದಾರುಣ ಘಟನೆಯೊಂದರಲ್ಲಿ ಶಾಲಾ ವಿದ್ಯಾರ್ಥಿಯೊಬ್ಬ ತೆರೆದ ಬಾವಿಗೆ ಆಕಸ್ಮಿಕವಾಗಿ ಬಿದ್ದು ಮೃತಪಟ್ಟ ಘಟನೆ ಕನ್ಹಂಗಾಡ್ ಸಮೀಪದ ಚೀಮೇನಿಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಚೀಮೇನಿ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡಕ್ಕಾಡ್ ಅನಾಕಡಿ ನಿವಾಸಿ ಧನೇಶ್ ಅವರ ಪುತ್ರ 15 ವರ್ಷ ಪ್ರಾಯದ ಸನೂಪ್ ಎಂದು ಗುರುತಿಸಲಾಗಿದೆ. ಸನೂಪ್ ತಿಮಿರಿ ಕುಟ್ಟಮ್ಮತ್ತು ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯ 10ನೇ ತರಗತಿಯ ವಿದ್ಯಾರ್ಥಿಯಾಗಿದ್ದ ಎಂದು ತಿಳಿದುಬಂದಿದೆ.

ಗುರುವಾರ ರಾತ್ರಿ ನಡೆದ ಓಣಂ ಆಚರಣೆ ಕಾರ್ಯಕ್ರಮದಲ್ಲಿ ಸನೂಪ್ ಭಾಗವಹಿಸಿದ್ದ. ಕಾರ್ಯಕ್ರಮದ ವೇಳೆ ತನ್ನ ಸಹಪಾಠಿಗಳೊಂದಿಗೆ ಹೊರಗೆ ಬಂದಿದ್ದಾಗ, ಸಮೀಪದಲ್ಲಿದ್ದ ಮುಚ್ಚಳವಿಲ್ಲದ ತೆರೆದ ಬಾವಿಗೆ ಆಕಸ್ಮಿಕವಾಗಿ ಕಾಲುಜಾರಿ ಬಿದ್ದಿದ್ದಾನೆ ಎನ್ನಲಾಗಿದೆ. ಘಟನೆಯ ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಹಾಗೂ ಅಗ್ನಿಶಾಮಕ ಮತ್ತು ತುರ್ತು ರಕ್ಷಣಾ ಪಡೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿ ವಿದ್ಯಾರ್ಥಿಯನ್ನು ಬಾವಿಯಿಂದ ಮೇಲಕ್ಕೆತ್ತಿದ್ದಾರೆ ಎಂದು ತಿಳಿದುಬಂದಿದೆ.


ಗಂಭೀರವಾಗಿ ಗಾಯಗೊಂಡಿದ್ದ ಸನೂಪ್ನನ್ನು ತಕ್ಷಣವೇ ಕಣ್ಣೂರಿನ ಮಿಮ್ಸ್ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಗಸ್ಟ್ 28ರಂದು ಶುಕ್ರವಾರ ಸಂಜೆ ಸನೂಪ್ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಓಣಂ ಆಚರಣೆಯ ಸಂಭ್ರಮದಲ್ಲಿದ್ದ ಕುಟುಂಬ ಮತ್ತು ಸ್ನೇಹಿತರಿಗೆ ಈ ದುರ್ಘಟನೆ ತೀವ್ರ ಆಘಾತ ಉಂಟುಮಾಡಿದೆ.



