ಸಿಬ್ಬಂದಿ ಕೊರತೆ ನೀಗಿಸಲು ಮೆಸ್ಕಾಂಗೆ 395 ಪವರ್ಮ್ಯಾನ್ಗಳು – ಅಧ್ಯಕ್ಷ ಕೆ. ಹರೀಶ್ ಕುಮಾರ್
ಮಂಗಳೂರು: ವಿದ್ಯುತ್ ಸರಬರಾಜು ಮತ್ತು ನಿರ್ವಹಣಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಮೆಸ್ಕಾಂ ವ್ಯಾಪ್ತಿಗೆ 395 ಹೊಸ ಪವರ್ಮ್ಯಾನ್ಗಳನ್ನು ನೇಮಕ ಮಾಡಲಾಗಿದೆ ಎಂದು ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್ ಅವರು ತಿಳಿಸಿದ್ದಾರೆ. ಒಟ್ಟು 430 ಪವರ್ಮ್ಯಾನ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದ್ದು, ಈಗಾಗಲೇ ನಿನ್ನೆ ಹಾಗೂ ಇಂದು ಸೇರಿ 395 ಮಂದಿಗೆ ನೇಮಕಾತಿ ಆದೇಶ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ. ಮೆಸ್ಕಾಂ ವ್ಯಾಪ್ತಿಯಲ್ಲಿ ಪ್ರಸ್ತುತ ಸುಮಾರು 28.10 ಲಕ್ಷ ವಿದ್ಯುತ್ ಸಂಪರ್ಕಗಳಿದ್ದು, ಮನೆಗಳು, ವಾಣಿಜ್ಯ ಸಂಸ್ಥೆಗಳು, ಕೈಗಾರಿಕೆಗಳು ಹಾಗೂ ನೀರಾವರಿ ಪಂಪ್ಸೆಟ್ಗಳು ಇದರ ವ್ಯಾಪ್ತಿಗೆ ಬರುತ್ತವೆ.

ಸಿಬ್ಬಂದಿ ಕೊರತೆ ನೀಗಿಸಲು ಹೊಸ ನೇಮಕಾತಿ:
ಮೆಸ್ಕಾಂ ವ್ಯಾಪ್ತಿಯ ಸುಮಾರು 97 ಸಾವಿರ ಕಿ.ಮೀ. ಕಡಿಮೆ ಒತ್ತಡದ ವಿದ್ಯುತ್ ಮಾರ್ಗಗಳು ಹಾಗೂ 59 ಸಾವಿರ ಕಿ.ಮೀ. 11 ಕೆವಿ ಉನ್ನತ ಒತ್ತಡದ ವಿದ್ಯುತ್ ಮಾರ್ಗಗಳ ನಿರ್ವಹಣೆಗೆ ಹೆಚ್ಚಿನ ಸಿಬ್ಬಂದಿಯ ಅಗತ್ಯವಿದೆ.
ಹೊಸ ಪವರ್ಮ್ಯಾನ್ಗಳ ನೇಮಕಾತಿಯಿಂದ ಸಿಬ್ಬಂದಿ ಕೊರತೆಯನ್ನು ಗಣನೀಯವಾಗಿ ಕಡಿಮೆ ಮಾಡಲು ಸಾಧ್ಯವಾಗಲಿದೆ. ಇನ್ನೂ ಸುಮಾರು 35 ಪವರ್ಮ್ಯಾನ್ಗಳ ಕೊರತೆಯಿದ್ದು, ಹೆಚ್ಚುವರಿ ನೇಮಕಾತಿಗೆ ಸರ್ಕಾರ ಅನುಮತಿ ನೀಡಿದೆ ಎಂದು ಕೆ. ಹರೀಶ್ ಕುಮಾರ್ ಅವರು ತಿಳಿಸಿದ್ದಾರೆ.

ಭೂಗತ ಕೇಬಲ್ ಮತ್ತು ಲಿಂಕ್ಲೈನ್ಗೆ ಆದ್ಯತೆ:
ಮಂಗಳೂರು ನಗರದಲ್ಲಿ ವಿದ್ಯುತ್ ಸರಬರಾಜನ್ನು ಹೆಚ್ಚು ಸುರಕ್ಷಿತ ಹಾಗೂ ನಿರಂತರವಾಗಿಸುವ ಉದ್ದೇಶದಿಂದ ಭೂಗತ ವಿದ್ಯುತ್ ಕೇಬಲ್ ವ್ಯವಸ್ಥೆ ಮತ್ತು ಲಿಂಕ್ಲೈನ್ ನಿರ್ಮಾಣಕ್ಕೆ ವಿಶೇಷ ಒತ್ತು ನೀಡಲಾಗುತ್ತಿದೆ.
ಭೂಗತ ಕೇಬಲ್ ವ್ಯವಸ್ಥೆಯಿಂದ ವಿದ್ಯುತ್ ಅಪಘಾತಗಳ ಸಾಧ್ಯತೆ ಹಾಗೂ ಪ್ರಸರಣ ನಷ್ಟವನ್ನು ಕಡಿಮೆ ಮಾಡಲು ಸಾಧ್ಯವಾಗಲಿದೆ. ಒಂದು ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ ಉಂಟಾದರೂ, ಪರ್ಯಾಯ ಮಾರ್ಗದ ಮೂಲಕ ವಿದ್ಯುತ್ ಸರಬರಾಜು ಮುಂದುವರಿಸಲು ಲಿಂಕ್ಲೈನ್ ವ್ಯವಸ್ಥೆ ಸಹಕಾರಿಯಾಗಲಿದೆ ಎಂದು ತಿಳಿಸಿದರು.

5,270 ದ್ವಿಮುಖ ಕಟ್ಔಟ್ ಅಳವಡಿಕೆಗೆ ಕ್ರಮ:
ವಿದ್ಯುತ್ ಸುರಕ್ಷತೆಯನ್ನು ಮತ್ತಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಸುಮಾರು 5,270 ದ್ವಿಮುಖ ಕಟ್ಔಟ್ಗಳನ್ನು ಅಳವಡಿಸುವ ಕಾರ್ಯವೂ ಜಾರಿಯಲ್ಲಿದೆ. ಇದರಿಂದ ಫ್ಯೂಸ್ ಸಮಸ್ಯೆಗಳಿಂದ ಮನೆಗಳಲ್ಲಿನ ವಿದ್ಯುತ್ ಉಪಕರಣಗಳಿಗೆ ಉಂಟಾಗಬಹುದಾದ ಹಾನಿಯನ್ನು ತಡೆಯಲು ಸಾಧ್ಯವಾಗಲಿದೆ ಎಂದು ಅವರು ಹೇಳಿದರು.

ಹೊಸ ಸಂಪರ್ಕಗಳಿಗೆ ಸ್ಮಾರ್ಟ್ ಮೀಟರ್ ಕಡ್ಡಾಯ:
ಹೊಸ ವಿದ್ಯುತ್ ಸಂಪರ್ಕಗಳಿಗೆ ಸ್ಮಾರ್ಟ್ ಮೀಟರ್ ಅಳವಡಿಕೆಯನ್ನು ಕಡ್ಡಾಯಗೊಳಿಸಲಾಗುತ್ತಿದೆ. ಗ್ರಾಹಕರು ಮೊಬೈಲ್ ಆ್ಯಪ್ ಮೂಲಕ ತಮ್ಮ ವಿದ್ಯುತ್ ಬಳಕೆ, ದೈನಂದಿನ ಬಳಕೆಯ ಪ್ರಮಾಣ ಹಾಗೂ ಬಿಲ್ ವಿವರಗಳನ್ನು ಸುಲಭವಾಗಿ ಪರಿಶೀಲಿಸಬಹುದಾಗಿದೆ.
ಬಿಲ್ ಉತ್ಪತ್ತಿಯಾಗದಿದ್ದರೂ ಮೊಬೈಲ್ ಆ್ಯಪ್ ಮೂಲಕ ಬಿಲ್ ಮಾಹಿತಿಯನ್ನು ಪಡೆದು ಪಾವತಿಸುವ ಸೌಲಭ್ಯವೂ ಲಭ್ಯವಿದೆ. ಸ್ಮಾರ್ಟ್ ಮೀಟರ್ಗಳ ಗುಣಮಟ್ಟ ಪರಿಶೀಲನೆಗಾಗಿ ನಾಲ್ಕು ಪರೀಕ್ಷಾ ಘಟಕಗಳನ್ನು ಸ್ಥಾಪಿಸಲಾಗಿದೆ.


ಸ್ಮಾರ್ಟ್ ಮೀಟರ್ ವ್ಯವಸ್ಥೆಯಿಂದ ವಿದ್ಯುತ್ ಬಳಕೆಯ ನಿಖರ ಮಾಹಿತಿ ದೊರೆಯುವುದರ ಜೊತೆಗೆ ವಿದ್ಯುತ್ ಸರಬರಾಜು ಮತ್ತು ನಿರ್ವಹಣಾ ವ್ಯವಸ್ಥೆಯೂ ಮತ್ತಷ್ಟು ಸುಧಾರಿಸಲಿದೆ ಎಂದು ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್ ಅವರು ತಿಳಿಸಿದ್ದಾರೆ.



