ಕಲ್ಲುಗುಂಡಿ ದರೋಡೆ ಪ್ರಕರಣದಲ್ಲಿ ಶ್ರೀನಿವಾಸ ದೋಷಮುಕ್ತ
ಆರೋಪಿ ಪರ ಪ್ರಖ್ಯಾತ ವಕೀಲರಾದ ಪುತ್ತೂರು ಮಹೇಶ್ ಕಜೆ ಯಶಸ್ವಿ ವಾದ

ಪುತ್ತೂರು: ಸುಮಾರು 13 ವರ್ಷಗಳ ಹಿಂದೆ ಸುಳ್ಯ ತಾಲೂಕು ಸಂಪಾಜೆ ಗ್ರಾಮದ ಕಲ್ಲುಗುಂಡಿ ಎಂಬಲ್ಲಿ ನಡೆದ ದರೋಡೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಶ್ರೀನಿವಾಸ್ ಯಾನೆ ಶೀನಾ ಎಂಬಾತನನ್ನು ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ನಿರ್ದೋಷಿ ಎಂದು ತೀರ್ಪು ನೀಡಿ ಬಿಡುಗಡೆಗೊಳಿಸಿದೆ.

2013ರ ಜನವರಿ 27ರಂದು ನಾಗರಾಜ್ ಅವರು ಬಾಡಿಗೆ ಟಾಟಾ ಇಂಡಿಕಾ ಕಾರಿನಲ್ಲಿ ರಾಜ್ಯ ಹೆದ್ದಾರಿ 88ರಲ್ಲಿ ಮೈಸೂರು ಕಡೆಗೆ ಪ್ರಯಾಣಿಸುತ್ತಿದ್ದ ವೇಳೆ ಕಲ್ಲುಗುಂಡಿ ಸಮೀಪ ವಾಹನವನ್ನು ತಡೆದು ಚಿನ್ನಾಭರಣ, ಮೊಬೈಲ್, ನಗದು, ವಾಹನದ ದಾಖಲೆಗಳು ಸೇರಿದಂತೆ ವಿವಿಧ ವಸ್ತುಗಳನ್ನು ದರೋಡೆ ಮಾಡಲಾಗಿದೆ ಎಂಬ ಆರೋಪದಡಿ ಶ್ರೀನಿವಾಸ್ ಸೇರಿದಂತೆ ನಾಲ್ವರ ವಿರುದ್ಧ ಸುಳ್ಯ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ಸಂದರ್ಭದಲ್ಲಿ ಶ್ರೀನಿವಾಸ್ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದರಿಂದ ಆತನ ಬಂಧನಕ್ಕೆ ವಾರಂಟ್ ಹೊರಡಿಸಲಾಗಿತ್ತು. ಇತರ ಆರೋಪಿಗಳ ವಿರುದ್ಧದ ಪ್ರಕರಣದ ವಿಚಾರಣೆ ಪೂರ್ಣಗೊಂಡು ಅವರು ನಿರ್ದೋಷಿಗಳಾಗಿ ಬಿಡುಗಡೆಗೊಂಡಿದ್ದರು.

ಬಳಿಕ ವಾರಂಟ್ ಆಧಾರದ ಮೇಲೆ ಶ್ರೀನಿವಾಸ್ನನ್ನು ಸುಳ್ಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನಂತರ ಆತನಿಗೆ ಜಾಮೀನು ಮಂಜೂರಾಗಿತ್ತು. ಪ್ರಕರಣದ ಮರು ವಿಚಾರಣೆ ನಡೆಸಿದ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಸದಾನಂದ ನಾಗಪ್ಪ ನಾಯಕ್ ಅವರು, ಆರೋಪಿಯ ವಿರುದ್ಧದ ಆರೋಪಗಳು ಸಾಬೀತಾಗದ ಹಿನ್ನೆಲೆಯಲ್ಲಿ ಶ್ರೀನಿವಾಸ್ ಯಾನೆ ಶೀನನನ್ನು ನಿರ್ದೋಷಿ ಎಂದು ತೀರ್ಪು ನೀಡಿದ್ದಾರೆ.
ಆರೋಪಿ ಶ್ರೀನಿವಾಸ್ ಪರವಾಗಿ ಪುತ್ತೂರು ಬೊಳ್ವಾರಿನ ಕಜೆ ಲಾ ಚೇಂಬರ್ಸ್ ಇದರ ಪ್ರಖ್ಯಾತ ವಕೀಲರಾದ ಮಹೇಶ್ ಕಜೆ ಅವರು ವಾದ ಮಂಡಿಸಿದ್ದರು.



