September 4, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ರಾಜೇಶ್ ನಾಯಕ್ ಕರೋಪಾಡಿ ಗಡಿಪಾರು ಆದೇಶ ಖಂಡನೀಯ – ಹಿಂದೂ ಕಾರ್ಯಕರ್ತರನ್ನು ಗುರಿಯಾಗಿಸುವ ಪ್ರಯತ್ನ ಎಂದ ಬಂಟ್ವಾಳ ಬಿಜೆಪಿ

ಹಿಂದೂ ಸಂಘಟನೆಯ ಮುಖಂಡ ಹಾಗೂ ಸಾಮಾಜಿಕ ಕಾರ್ಯಕರ್ತ ರಾಜೇಶ್ ನಾಯಕ್ ಕರೋಪಾಡಿ ಅವರ ವಿರುದ್ಧ ಪೊಲೀಸ್ ಇಲಾಖೆ ಕೈಗೊಂಡಿರುವ ಗಡಿಪಾರು ಆದೇಶವನ್ನು ಬಂಟ್ವಾಳ ಬಿಜೆಪಿ ಮಂಡಲ ತೀವ್ರವಾಗಿ ಖಂಡಿಸಿದೆ. ಈ ಕ್ರಮ ಏಕಪಕ್ಷೀಯವಾಗಿದ್ದು, ಹಿಂದೂ ಕಾರ್ಯಕರ್ತರ ಮಾನಸಿಕ ಸ್ಥೈರ್ಯವನ್ನು ಕುಗ್ಗಿಸುವ ಪ್ರಯತ್ನವಾಗಿದೆ ಎಂದು ಬಿಜೆಪಿ ಮಂಡಲ ಆರೋಪಿಸಿದೆ. ರಾಜೇಶ್ ನಾಯಕ್ ಕರೋಪಾಡಿ ಅವರು ಕರೋಪಾಡಿ ಗಡಿಭಾಗದಲ್ಲಿ ಹಲವು ವರ್ಷಗಳಿಂದ ಸಂಘಟನಾತ್ಮಕ ಹಾಗೂ ಧಾರ್ಮಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ಬಡವರು ಹಾಗೂ ದೀನದಲಿತರ ಪರವಾಗಿ ವಿವಿಧ ಸಾಮಾಜಿಕ ಸೇವಾ ಕಾರ್ಯಗಳನ್ನು ನಡೆಸಿಕೊಂಡು ಬಂದಿದ್ದಾರೆ ಎಂದು ಬಿಜೆಪಿ ಮಂಡಲ ತಿಳಿಸಿದೆ. ಇಂತಹ ವ್ಯಕ್ತಿಯ ವಿರುದ್ಧ ಉದ್ದೇಶಪೂರ್ವಕವಾಗಿ ಗಡಿಪಾರು ಕ್ರಮ ಕೈಗೊಳ್ಳಲಾಗಿದೆ ಎಂಬ ಆರೋಪ ವ್ಯಕ್ತವಾಗಿದ್ದು, ಇದರ ಹಿಂದೆ ಹಿಂದೂ ಸಂಘಟನೆಗಳ ಕಾರ್ಯಕರ್ತರನ್ನು ಗುರಿಯಾಗಿಸುವ ಪ್ರಯತ್ನ ನಡೆಯುತ್ತಿದೆ ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.

ಪೊಲೀಸ್ ಇಲಾಖೆಯ ಬಳಕೆಯ ಬಗ್ಗೆ ಅನುಮಾನ:

ರಾಜ್ಯ ಕಾಂಗ್ರೆಸ್ ಸರ್ಕಾರವು ಪೊಲೀಸ್ ಇಲಾಖೆಯನ್ನು ಬಳಸಿಕೊಂಡು ಹಿಂದೂ ಸಂಘಟನೆಗಳ ಕಾರ್ಯಕರ್ತರ ಮೇಲೆ ಅನಗತ್ಯ ಒತ್ತಡ ಹೇರುತ್ತಿದೆಯೇ ಎಂಬ ಅನುಮಾನ ಸಾರ್ವಜನಿಕರಲ್ಲಿ ಮೂಡುವಂತಾಗಿದೆ ಎಂದು ಬಂಟ್ವಾಳ ಬಿಜೆಪಿ ಮಂಡಲ ಆರೋಪಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ಹೆಸರಿನಲ್ಲಿ ನಿರ್ದಿಷ್ಟ ವ್ಯಕ್ತಿಗಳು ಅಥವಾ ಸಂಘಟನೆಗಳ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ಕ್ರಮ ಕೈಗೊಳ್ಳುವುದು ಸರಿಯಲ್ಲ ಎಂದು ಬಿಜೆಪಿ ಅಭಿಪ್ರಾಯಪಟ್ಟಿದೆ.

“ಲೆಕ್ಕಾಚಾರ ತಲೆಕೆಳಗಾಗಬಹುದು”:

ಹಿಂದೂ ಕಾರ್ಯಕರ್ತರನ್ನು ಕಾನೂನಿನ ನೆಪದಲ್ಲಿ ಅನಗತ್ಯವಾಗಿ ನಿರ್ಬಂಧಿಸುವ ಮೂಲಕ ಅವರ ಸಾಮಾಜಿಕ ಹಾಗೂ ಧಾರ್ಮಿಕ ಚಟುವಟಿಕೆಗಳನ್ನು ನಿಯಂತ್ರಿಸಲು ಪ್ರಯತ್ನಿಸಿದರೆ, ಅದು ಸರ್ಕಾರ ಹಾಗೂ ಪೊಲೀಸ್ ಇಲಾಖೆಯ ಲೆಕ್ಕಾಚಾರವನ್ನೇ ತಲೆಕೆಳಗಾಗಿಸಬಹುದು ಎಂದು ಬಿಜೆಪಿ ಎಚ್ಚರಿಸಿದೆ.

ಇಂತಹ ಕ್ರಮಗಳು ಕಾರ್ಯಕರ್ತರಲ್ಲಿ ಅಸಮಾಧಾನ ಮೂಡಿಸುವುದರ ಜತೆಗೆ ಜಿಲ್ಲೆಯಲ್ಲಿ ಶಾಂತಿ ಮತ್ತು ಸೌಹಾರ್ದತೆಗೆ ಧಕ್ಕೆಯಾಗುವ ಪರಿಸ್ಥಿತಿಗೂ ಕಾರಣವಾಗಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕಾನೂನುಬದ್ಧ ಮತ್ತು ನಿಷ್ಪಕ್ಷಪಾತ ಕ್ರಮಕ್ಕೆ ಆಗ್ರಹ:

ಕಾನೂನು ಸುವ್ಯವಸ್ಥೆ ಕಾಪಾಡುವುದು ಪೊಲೀಸ್ ಇಲಾಖೆಯ ಕರ್ತವ್ಯವಾಗಿದ್ದು, ಯಾವುದೇ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವ ಸಂದರ್ಭದಲ್ಲಿ ಕಾನೂನುಬದ್ಧ ಪ್ರಕ್ರಿಯೆ, ಸಾಕ್ಷ್ಯಾಧಾರ ಹಾಗೂ ನಿಷ್ಪಕ್ಷಪಾತತೆಯನ್ನು ಪರಿಗಣಿಸಬೇಕು ಎಂದು ಬಿಜೆಪಿ ಮಂಡಲ ಒತ್ತಾಯಿಸಿದೆ.

ರಾಜಕೀಯ ಪ್ರೇರಿತ ಅಥವಾ ಏಕಪಕ್ಷೀಯ ಕ್ರಮಗಳಿಗೆ ಪೊಲೀಸ್ ಇಲಾಖೆಯನ್ನು ಬಳಸಿಕೊಳ್ಳಬಾರದು ಎಂದೂ ಬಿಜೆಪಿ ಆಗ್ರಹಿಸಿದೆ.

ಹಿಂದೂ ಕಾರ್ಯಕರ್ತರು ಹಾಗೂ ಧಾರ್ಮಿಕ ಕಾರ್ಯಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವವರನ್ನು ಕಾನೂನಿನ ನೆಪದಲ್ಲಿ ಅನಗತ್ಯವಾಗಿ ನಿರ್ಬಂಧಿಸುವ ಪ್ರಯತ್ನ ಮುಂದುವರಿದರೆ, ಜಿಲ್ಲೆಯಲ್ಲಿ ಉಂಟಾಗಬಹುದಾದ ಪ್ರತಿಕೂಲ ಪರಿಸ್ಥಿತಿಗೆ ಪೊಲೀಸ್ ಇಲಾಖೆಯೇ ಹೊಣೆಗಾರವಾಗಬೇಕಾಗಬಹುದು ಎಂದು ಬಿಜೆಪಿ ಮಂಡಲ ಪ್ರಕಟಣೆಯಲ್ಲಿ ಎಚ್ಚರಿಸಿದೆ.

ರಾಜೇಶ್ ನಾಯಕ್ ಕರೋಪಾಡಿ ಅವರ ಗಡಿಪಾರು ಆದೇಶವನ್ನು ಪೊಲೀಸ್ ಇಲಾಖೆ ಮರುಪರಿಶೀಲಿಸಿ, ಕಾನೂನುಬದ್ಧ ಹಾಗೂ ನ್ಯಾಯಸಮ್ಮತ ನಿರ್ಧಾರ ಕೈಗೊಳ್ಳಬೇಕು ಎಂದು ಬಂಟ್ವಾಳ ಬಿಜೆಪಿ ಮಂಡಲ ಒತ್ತಾಯಿಸಿದೆ.

You may also like

News

ಕ್ರೈಸ್ತ ಸಮುದಾಯದ ಕಲ್ಯಾಣಕ್ಕೆ ₹250 ಕೋಟಿ ಬಜೆಟ್ ಅನುದಾನ ಸಂಪೂರ್ಣ ಬಿಡುಗಡೆಗೆ ಆಗ್ರಹ

ಮುಖ್ಯಮಂತ್ರಿ ಅವರಿಗೆ MLC ಐವನ್ ಡಿಸೋಜ ಮುಖಾಂತರ ಸ್ಟ್ಯಾನಿ ಪಿಂಟೋ ಬೆಂಗಳೂರು ಮನವಿ ಬೆಂಗಳೂರು: ರಾಜ್ಯ ಸರ್ಕಾರವು ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಕ್ರೈಸ್ತ ಸಮುದಾಯದ ಕಲ್ಯಾಣ ಮತ್ತು
News

National Nutrition Week 2026 Celebrated with a Focus on Healthy Choices and Better Health

“Nourishing Lives Through Healthy Choices” National Nutrition Week 2026 was observed with the theme “Nourishing Lives Through Healthy Choices” through

You cannot copy content of this page