ಆರೋಗ್ಯದತ್ತ ಕಾಳಜಿಯ ಹೆಜ್ಜೆ – ಇಂದು ಸೆಪ್ಟೆಂಬರ್ 20ರಂದು ಉಚಿತ ವೈದ್ಯಕೀಯ ಶಿಬಿರ
ಕಿವಿ–ಮೂಗು–ಗಂಟಲು, ಕಣ್ಣು ಹಾಗೂ ಸಾಮಾನ್ಯ ಆರೋಗ್ಯ ತಪಾಸಣೆ; ರಕ್ತದಾನಕ್ಕೂ ಅವಕಾಶ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಶಾಲಾ ಮಕ್ಕಳ ವಾಹನ ಚಾಲಕರ ಸಂಘದ ವತಿಯಿಂದ ಇಂಡಿಯನ್ ರೆಡ್ಕ್ರಾಸ್ ಸೊಸೈಟಿಯ ದಕ್ಷಿಣ ಕನ್ನಡ ಜಿಲ್ಲಾ ಘಟಕ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (ಅಂಧತ್ವ ವಿಭಾಗ) ಹಾಗೂ ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್, ಉಡುಪಿ ಇವರ ಸಹಯೋಗದಲ್ಲಿ ಇಂದು ಸೆಪ್ಟೆಂಬರ್ 20ರಂದು ಭಾನುವಾರ ಉಚಿತ ವೈದ್ಯಕೀಯ ಹಾಗೂ ರಕ್ತದಾನ ಶಿಬಿರ ಆಯೋಜಿಸಲಾಗಿದೆ.
ಮಣ್ಣಗುಡ್ಡೆ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 1ರವರೆಗೆ ನಡೆಯಲಿರುವ ಶಿಬಿರದಲ್ಲಿ ಸಾರ್ವಜನಿಕರಿಗೆ ವಿವಿಧ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಸೌಲಭ್ಯಗಳು ಉಚಿತವಾಗಿ ಲಭ್ಯವಾಗಲಿವೆ.

ಕೆಎಂಸಿ ಆಸ್ಪತ್ರೆ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಹಾಗೂ ಶ್ರೀನಿವಾಸ್ ಆಸ್ಪತ್ರೆ, ಮುಕ್ಕ ಇಲ್ಲಿನ ತಜ್ಞ ವೈದ್ಯರು ಶಿಬಿರದಲ್ಲಿ ಭಾಗವಹಿಸಲಿದ್ದು, ಕಿವಿ, ಮೂಗು ಮತ್ತು ಗಂಟಲು ತಪಾಸಣೆ, ಸಾಮಾನ್ಯ ವೈದ್ಯಕೀಯ ತಪಾಸಣೆ, ಕಣ್ಣಿನ ತಪಾಸಣೆ ಹಾಗೂ ಅಗತ್ಯ ಚಿಕಿತ್ಸೆ ನೀಡಲಿದ್ದಾರೆ. ಅಗತ್ಯವಿರುವವರಿಗೆ ಕನ್ನಡಕ ವಿತರಣೆಯೂ ನಡೆಯಲಿದೆ.
ಇದೇ ಸಂದರ್ಭದಲ್ಲಿ ರಕ್ತದಾನ ಶಿಬಿರ ಕೂಡ ನಡೆಯಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಆರೋಗ್ಯ ತಪಾಸಣೆಯ ಪ್ರಯೋಜನ ಪಡೆಯುವುದರೊಂದಿಗೆ ರಕ್ತದಾನ ಮಾಡುವ ಮೂಲಕ ಮಾನವೀಯ ಸೇವೆಗೆ ಕೈಜೋಡಿಸುವಂತೆ ಸಂಘಟಕರು ಮನವಿ ಮಾಡಿದ್ದಾರೆ.
ಇಂಡಿಯನ್ ರೆಡ್ಕ್ರಾಸ್ ಸೊಸೈಟಿಯ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ಸಿಎ ಶಾಂತಾರಾಮ ಶೆಟ್ಟಿ ಶಿಬಿರವನ್ನು ಉದ್ಘಾಟಿಸಲಿದ್ದು, ವಕೀಲ ರಾಮ್ಪ್ರಸಾದ್ ಅಧ್ಯಕ್ಷತೆ ವಹಿಸಲಿದ್ದಾರೆ. ರೆಡ್ಕ್ರಾಸ್ ಸೊಸೈಟಿ ನಿರ್ದೇಶಕ ರಾಘವೇಂದ್ರ ರಾವ್ ರಕ್ತದಾನಕ್ಕೆ ಚಾಲನೆ ನೀಡಲಿದ್ದಾರೆ.

ಮುಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಮಣ್ಣಗುಡ್ಡೆ ಶಾಲೆಯ ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುರೇಶ್ಚಂದ್ರ ಶೆಟ್ಟಿ, ದಕ್ಷಿಣ ಕನ್ನಡ ಜಿಲ್ಲಾ ಶಾಲಾ ಮಕ್ಕಳ ವಾಹನ ಚಾಲಕರ ಸಂಘದ ಅಧ್ಯಕ್ಷ ಸತೀಶ್ ಪೂಜಾರಿ ಅಶೋಕನಗರ, ಗೌರವಾಧ್ಯಕ್ಷ ಸುನೀಲ್ಕುಮಾರ್ ಬಜಾಲ್, ಕೆಎಂಸಿ ಆಸ್ಪತ್ರೆಯ ಡಾ. ಕಿಶನ್ ಪ್ರೇಮ್ ಹಾಗೂ ಡಾ. ನಿಖಿಲ್ ಗೋವಿಂದ್ ಶೆಣೈ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಆರೋಗ್ಯದ ಬಗ್ಗೆ ಕಾಳಜಿ ಇರುವ ಪ್ರತಿಯೊಬ್ಬರೂ ಈ ಉಚಿತ ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ಸಂಘಟಕರು ಮನವಿ ಮಾಡಿದ್ದಾರೆ.



