May 17, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಧರ್ಮಸ್ಥಳದಲ್ಲಿ ವ್ಯಸನಮುಕ್ತರ ಸಮ್ಮಿಲನ ಮತ್ತು ಶತದಿನೋತ್ಸವ ಸಮಾರಂಭ

ಮನುಷ್ಯರು ವ್ಯಸನಗಳ ದಾಸರಾಗಬಾರದು. ಚಟಗಳಿಂದಾಗಿ ಹಣ, ಆರೋಗ್ಯ, ಮರ್ಯಾದೆ, ಪ್ರೀತಿ-ವಿಶ್ವಾಸ ಎಲ್ಲವನ್ನೂ ಮದ್ಯವ್ಯಸನಿಗಳು ಕಳೆದುಕೊಳ್ಳುತ್ತಾರೆ. ವ್ಯಸನಮುಕ್ತರು ನರಕವನ್ನು ದಾಟಿ ಬಂದ ನಾಯಕರು ಎಂದು ಶಿರಹಟ್ಟಿ ಭಾವೈಕ್ಯತಾ ಪೀಠದ ಪೂಜ್ಯ ಮಹಾರಾಜ ನಿರಂಜನ ಜಗದ್ಗುರು ಫಕೀರ ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು. ಅವರು ಧರ್ಮಸ್ಥಳದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಆಶ್ರಯದಲ್ಲಿ ಆಯೋಜಿಸಿದ 2900 ಮಂದಿ ವ್ಯಸನಮುಕ್ತರ ಸಮ್ಮಿಲನ ಮತ್ತು ಶತದಿನೋತ್ಸವ ಸಮಾರಂಭದಲ್ಲಿ ಆಶೀರ್ವಚನ ನೀಡಿ ಮಾತನಾಡಿದರು.

ಸರ್ಕಾರ ಮದ್ಯ ಕುಡಿಸಬೇಕು ಎಂದು ಹೇಳಿದರೆ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮದ್ಯಪಾನ ಬಿಡಿಸಬೇಕು ಎಂದು ಪ್ರಯತ್ನಿಸುತ್ತಿದ್ದಾರೆ. ಸರ್ಕಾರ ಮದ್ಯದಂಗಡಿಗಳನ್ನು ಹೆಚ್ಚಿಸುವುದಲ್ಲದೆ ಮದ್ಯಪಾನ ನಿಯಂತ್ರಣ ಮಂಡಳಿಗೂ ಕೋಟಿಗಟ್ಟಲೆ ಹಣ ವೆಚ್ಚ ಮಾಡುತ್ತಿದೆ. ಆರೋಗ್ಯ ಪೂರ್ಣ ಸಭ್ಯ, ಸುಸಂಸ್ಕೃತ ಸಮಾಜ ರೂಪಿಸಲು ಹೆಗ್ಗಡೆಯವರು ಮಾಡುತ್ತಿರುವ ಸೇವೆ-ಸಾಧನೆಗಳ ಬಗ್ಗೆ ಶಾಲಾ-ಕಾಲೇಜುಗಳ ಪಠ್ಯದಲ್ಲಿ ಮಾಹಿತಿ ನೀಡಬೇಕು. ವಿಶ್ವವಿದ್ಯಾಲಯಗಳಲ್ಲಿ ಕೂಡಾ ಈ ಬಗ್ಗೆ ಸಂಶೋಧನಾತ್ಮಕ ಅಧ್ಯಯನ ನಡೆಸಬೇಕು ಎಂದು ಸ್ವಾಮೀಜಿ ಸಲಹೆ ನೀಡಿದರು.

ಮದ್ಯಪಾನ ನಿಷೇಧ ಮಾಡುವ ಸರ್ಕಾರ ಬಂದರೆ ಮಾತ್ರ ರಾಜ್ಯದ ಸರ್ವತೋಮುಖ ಪ್ರಗತಿ ಸಾಧ್ಯವಾಗುತ್ತದೆ. ವ್ಯಸನಗಳ ಚಟದಿಂದಾಗಿ ಇಂದು ಪುರುಷರ ಬಂಜೆತನವೂ ಹೆಚ್ಚಾಗುತ್ತಿರುವುದು ಖೇದಕರವಾಗಿದೆ ಎಂದು ಅವರು ತಿಳಿಸಿದರು. ವ್ಯಸನಮುಕ್ತರು ಮುಂದೆ ದೃಢಸಂಕಲ್ಪದೊAದಿಗೆ ಸಾರ್ಥಕ ಜೀವನ ನಡೆಸಿ ಪರಿಸರದವರಿಗೂ ವ್ಯಸನಮುಕ್ತರಾಗುವ ಪ್ರೇರಣೆ ನೀಡಬೇಕು ಎಂದು ಸ್ವಾಮೀಜಿ ಸಲಹೆ ನೀಡಿದರು. ಬೆಂಗಳೂರಿನ ಕ್ಷೇಮವನದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರದ್ಧಾ ಅಮಿತ್ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಶುಭ ಹಾರೈಸಿದರು. ಹೇಮಾವತಿ ವಿ. ಹೆಗ್ಗಡೆಯವರು ಮಾತನಾಡಿ ಮದ್ಯವ್ಯಸನಿಗಳು ಅನ್ಯಾಯ, ಅತ್ಯಾಚಾರ ಮಾಡುತ್ತಾ ಸಂಸ್ಕಾರಕ್ಕೂ ಸಮಾಜಕ್ಕೂ ಹೊರೆಯಾಗುತ್ತಾರೆ. ವ್ಯಸನಮುಕ್ತರಾಗಿ ಹೊಸ ಬದುಕನ್ನು ಆರಂಭಿಸಿದವರು. ಪಂಚೇಂದ್ರಿಯಗಳ ನಿಗ್ರಹದೊಂದಿಗೆ ಮಾನಸಿಕ ಮಾಲಿನ್ಯ ರಹಿತರಾಗಿ ಆದರ್ಶ ಜೀವನ ನಡೆಸಬೇಕು ಎಂದು ಕಿವಿಮಾತು ಹೇಳಿದರು.

ಅಧ್ಯಕ್ಷತೆ ವಹಿಸಿದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ ವ್ಯಸನಮುಕ್ತರು ಕುಟುಂಬದ ಸದಸ್ಯರೊಂದಿಗೆ ಪ್ರೀತಿ-ವಿಶ್ವಾಸದಿಂದ ಮುಕ್ತವಾಗಿ ಬೆರೆಯಬೇಕು. ಮತ್ತೆ ಯಾವುದೇ ಕಾರಣಕ್ಕೂ ದುಶ್ಚಟಗಳಿಗೆ ಬಲಿಯಾಗಬಾರದು. ವ್ಯಸನಮುಕ್ತರು ಪರಿಶುದ್ಧ ದೇಹ ಮತ್ತು ಮನಸ್ಸಿನಿಂದ ಇಂದು ದೇವರ ದರ್ಶನ ಮಾಡಿರುವುದರಿಂದ ವಿಶೇಷ ಅನುಗ್ರಹಕ್ಕೆ ಪಾತ್ರರಾಗಿರುವಿರಿ ಎಂದು ಹೇಳಿ ಶುಭ ಹಾರೈಸಿದರು. ವ್ಯಸನಮುಕ್ತರ ಪರವಾಗಿ ರಾಮದುರ್ಗದ ಶಂಕರಪ್ಪ ಮತ್ತು ಉಡುಪಿಯ ಶಶಿಕಲರಾಜು ಅನಿಸಿಕೆ ವ್ಯಕ್ತ ಪಡಿಸಿದರು. ಮೂಡಬಿದಿರೆ ಡಾ. ವಿನಯ್ ಆಳ್ವ ‘ಜಾಗೃತಿ ಅಣ್ಣ’ ಮತ್ತು ‘ಜಾಗೃತಿ ಮಿತ್ರ’ ಪ್ರಶಸ್ತಿ ಪ್ರದಾನ ಮಾಡಿದರು. ಡಾ. ಪಿ. ವಿ. ಭಂಡಾರಿ, ಡಾ. ಶ್ರೀನಿವಾಸ ಭಟ್, ವಿ.ರಾಮಸ್ವಾಮಿ, ಪದ್ಮನಾಭ ಶೆಟ್ಟಿ ಮತ್ತು ಕಾಸಿಂ ಉಪಸ್ಥಿತರಿದ್ದರು. ಅನಿಲ್ ಕುಮಾರ್ ಆಶಯ ನುಡಿಗಳನ್ನು ಆಡಿ ಶುಭ ಹಾರೈಸಿದರು. ವಿವೇಕ್ ವಿ. ಪಾಯ್ಸ್ ಸ್ವಾಗತಿಸಿದರು. ನಟರಾಜ್ ಬಾದಾಮಿ ಧನ್ಯವಾದವಿತ್ತರು. ಯೋಜನಾಧಿಕಾರಿಗಳಾದ ನಾಗರಾಜ್ ಮತ್ತು ರಾಜೇಶ್ ಕಾರ್ಯಕ್ರಮ ನಿರ್ವಹಿಸಿದರು.

You may also like

News

ಮೇ 20 ರಂದು ದೇಶಾದ್ಯಂತ ಮೆಡಿಕಲ್ ಶಾಪ್ ಬಂದ್ – ಇ-ಫಾರ್ಮಸಿ ವಿರೋಧಿಸಿ ದಕ್ಷಿಣ ಕನ್ನಡದಲ್ಲೂ ಔಷಧ ಅಂಗಡಿಗಳು ಸ್ಥಗಿತ!

ಆನ್‌ಲೈನ್ ಮೂಲಕ ನಿಯಮಬಾಹಿರವಾಗಿ ಔಷಧಿಗಳನ್ನು ಮಾರಾಟ ಮಾಡುತ್ತಿರುವುದನ್ನು ವಿರೋಧಿಸಿ ಅಖಿಲ ಭಾರತ ಔಷಧ ವ್ಯಾಪಾರಸ್ಥರ ಸಂಘವು ಮೇ 20 ರಂದು ದೇಶಾದ್ಯಂತ ಔಷಧ ವ್ಯಾಪಾರ ಬಂದ್‌ಗೆ ಕರೆ
News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ

You cannot copy content of this page