ಪುತ್ತೂರಿನಲ್ಲಿ ಲಂಚ ಸ್ವೀಕರಿಸುತ್ತಿದ್ದ ಎಫ್.ಡಿ.ಎ. ಲೋಕಾಯುಕ್ತ ಬಲೆಗೆ – ತಹಶೀಲ್ದಾರ್ ಪರಾರಿ
ಪುತ್ತೂರು ತಾಲೂಕಿನ ಆಡಳಿತ ಸೌಧದಲ್ಲಿರುವ ತಹಶೀಲ್ದಾರ್ ಕಚೇರಿಯ ಭೂ ಸುಧಾರಣಾ ಶಾಖೆಯ ಎಫ್.ಡಿ.ಎ. ಸುನೀಲ್ ದೂರುದಾರರಿಂದ 12 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಮಂಗಳೂರು ಲೋಕಾಯುಕ್ತ ಪೊಲೀಸರ ಬಲೆಗೆ ಸಿಕ್ಕಿಬಿದ್ದಿದ್ದಾರೆ. ಇಂದು ಆಗಸ್ಟ್ 28ರಂದು ಗುರುವಾರ ನಡೆದ ಈ ದಾಳಿ ವೇಳೆ ಸುನೀಲ್ ರವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಈ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿ ಪುತ್ತೂರು ತಹಶೀಲ್ದಾರ್ ಕುಡಲಗಿ ಪರಾರಿಯಾಗಿದ್ದು, ಆತನಿಗಾಗಿ ಬಲೆ ಬೀಸಲಾಗಿದೆ.

ಪ್ರಕರಣದ ಹಿನ್ನೆಲೆ
ದೂರುದಾರರ ಚಿಕ್ಕಪ್ಪನವರಿಗೆ ಸೇರಿದ 65 ಸೆಂಟ್ಸ್ ಜಮೀನು ಅಕ್ರಮ ಸಕ್ರಮದನ್ವಯ ಮಂಜೂರಾಗಿದ್ದು, ನಂತರ ಅವರು ನೀಲುನಾಮ ಮೂಲಕ ದೂರುದಾರರಿಗೆ ಹಕ್ಕು ಬರೆಸಿಕೊಟ್ಟಿದ್ದರು. ಜಾಗವನ್ನು ಪರಭಾರೆ ಮಾಡಲು ತಹಶೀಲ್ದಾರ್ ನಿರಾಕ್ಷೇಪಣಾ ಪತ್ರ ಅವಶ್ಯಕವಾಗಿದ್ದರಿಂದ 2024ರ ಡಿಸೆಂಬನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಅರ್ಜಿ ಬಾಕಿ ಇರುವುದರಿಂದ ವಿಚಾರಿಸಿದಾಗ, ಕೇಸ್ ವರ್ಕರ್ (ಎಫ್.ಡಿ.ಎ.) ಸುನೀಲ್ ತಹಶೀಲ್ದಾರರ ಸಹಿಗೆ ಲಂಚ ಅವಶ್ಯಕ ಎಂದು ಹೇಳಿ ಹಣ ಬೇಡಿಕೆ ಇಟ್ಟಿದ್ದರು.

ಲೋಕಾಯುಕ್ತ ಬಳ
ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ಸೂಚನೆಯಂತೆ ದಾಳಿ ನಡೆಸಿ ಸುನೀಲ್ ಲಂಚ ಸ್ವೀಕರಿಸುವ ವೇಳೆ ಬಲೆಗೆ ಬಿದ್ದರು. ತಹಶೀಲ್ದಾರ್ ಕುಡಲಗಿ ವಿರುದ್ಧವೂ ಪ್ರಕರಣ ದಾಖಲಾಗಿದ್ದು, ಅವರ ಪಾತ್ರದ ಕುರಿತು ತನಿಖೆ ನಡೆಯಲಿದೆ.
ಕಾರ್ಯಾಚರಣೆಯ ತಂಡದಲ್ಲಿ ಲೋಕಾಯುಕ್ತ ಎಸ್ಪಿ (ಪ್ರಭಾರ) ಕುಮಾರ್ ಚಂದ್ರರವರ ನೇತೃತ್ವದಲ್ಲಿ, ಡಿವೈಎಸ್ಪಿ ಡಾ. ಗಾನ ಪಿ. ಕುಮಾರ್, ಇನ್ಸ್ಪೆಕ್ಟರ್ಗಳು ಭಾರತಿ, ಚಂದ್ರಶೇಖರ್ ಕೆ.ಎನ್., ರವಿ ಪವರ್ ಹಾಗೂ ಸಿಬ್ಬಂದಿ ಮಹೇಶ್, ರಾಜಪ್ಪ, ರಾಧಾಕೃಷ್ಣ, ಅದರ್ಶ, ವಿವೇಕ್, ವಿನಾಯಕ, ಪ್ರವೀಣ್, ಗಂಗಣ್ಣ, ನಾಗಪ್ಪ, ಮಾಹದೇವ, ಪವಿತ್ರ, ದುಂಡಪ್ಪ, ರುದ್ರಗೌಡ, ರಾಜಶೇಖರ್ ಸೇರಿ ದಾಳಿ ನಡೆಸಿದ್ದಾರೆ.




