ಮಾಣಿ–ಸಂಪಾಜೆ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಶೀಘ್ರ ಪ್ರಾರಂಭಕ್ಕೆ ಶಾಸಕ ಅಶೋಕ್ ರೈ ಮನವಿ
ಮಾಣಿ–ಸಂಪಾಜೆ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ (NH 275) ಕಾಮಗಾರಿ ಶೀಘ್ರ ಪ್ರಾರಂಭವಾಗುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾದೇಶಿಕ ಅಧಿಕಾರಿ ನರೇಂದ್ರ ಶರ್ಮರವರಿಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ ಸಲ್ಲಿಸಿದ್ದಾರೆ.




ಸೆಪ್ಟೆಂಬರ್ 17ರಂದು ಬುಧವಾರ ಬೆಂಗಳೂರಿನ ರಾಷ್ಟ್ರೀಯ ಹೆದ್ದಾರಿ ಪ್ರಾದೇಶಿಕ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಶಾಸಕರು, “ಮಾಣಿಯಿಂದ ಸಂಪಾಜೆ ತನಕ ಚತುಷ್ಪಥ ಹೆದ್ದಾರಿ ಕಾಮಗಾರಿ ಪ್ರಾರಂಭವಾದರೆ ಈ ಭಾಗದ ಅಭಿವೃದ್ಧಿಗೆ ದೊಡ್ಡ ಮುನ್ನಡೆಯಾಗುತ್ತದೆ. ಈ ಹಿಂದೆಲೇ ಕಾಮಗಾರಿ ಆರಂಭವಾಗಬೇಕಿತ್ತು. ಈಗ ರಾಜ್ಯ ಸರ್ಕಾರವು 3.10 ಕೋಟಿ ರೂಪಾಯಿ ಅನುದಾನವನ್ನು ಬಿಡುಗಡೆಮಾಡಿ ಡಿಪಿಆರ್ ಸಿದ್ಧಪಡಿಸಿದೆ. ಆದ್ದರಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ವಾರ್ಷಿಕ ಯೋಜನೆಗೆ ಸೇರ್ಪಡೆ ಮಾಡಿ ಶೀಘ್ರ ಕಾಮಗಾರಿ ಆರಂಭಿಸಬೇಕು” ಎಂದು ಹೇಳಿದರು.
“ಕಾಮಗಾರಿ ವಿಳಂಬವಾಗಬಾರದು. ಆದಷ್ಟು ಬೇಗ ಕಾಮಗಾರಿ ಆರಂಭವಾಗಿ ಈ ಭಾಗದ ಜನರ ಬಹುಕಾಲದ ಕನಸು ನನಸಾಗಲಿ”ಎಂದು ಪುತ್ತೂರು ಶಾಸಕ ಅಶೋಕ್ ರೈ ಆಶಾಭಾವನೆ ವ್ಯಕ್ತಪಡಿಸಿದರು.




