August 29, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕ್ರಿಸ್‌ಮಸ್‌ – ಸತ್ಯದ ಬೆಳಕು, ಪಾರದರ್ಶಕತೆಯ ದಾರಿ ಮತ್ತು ನೈತಿಕ ಬದುಕಿನ ಕರೆ

ಬಿಷಪ್ ಡಾ| ಪೀಟರ್ ಪಾವ್ಲ್ ಸಲ್ಡಾನ್ಹಾ ಅವರ ಜ್ಯೂಬಿಲಿ ವರ್ಷದ ಕ್ರಿಸ್‌ಮಸ್ ಸಂದೇಶ

2025ನೇ ಜ್ಯೂಬಿಲಿ ವರ್ಷದ ಕ್ರಿಸ್‌ಮಸ್ ಹಬ್ಬದ ಸಂದರ್ಭದಲ್ಲಿ, ಮಂಗಳೂರು ಕಥೊಲಿಕ್ ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ| ಪೀಟರ್ ಪಾವ್ಲ್ ಸಲ್ದಾನ್ಹಾ ಅವರು ಸಮಾಜಕ್ಕೆ ಸತ್ಯ, ಪಾರದರ್ಶಕತೆ ಮತ್ತು ನೈತಿಕ ಜೀವನದ ಮಹತ್ವವನ್ನು ಸಾರುವ ಪ್ರೇರಣಾದಾಯಕ ಸಂದೇಶ ನೀಡಿದರು. ಮಂಗಳೂರಿನ ಕೊಡಿಯಾಲ್ ಬೈಲ್‌ನ ಬಿಷಪ್ ಹೌಸ್‌ನಲ್ಲಿ ಇಂದು ಡಿಸೆಂಬರ್ 23ರಂದು ಮಂಗಳವಾರ ಆಯೋಜಿಸಲಾದ ಪತ್ರಕರ್ತರು ಹಾಗೂ ಮಾಧ್ಯಮ ಪ್ರತಿನಿಧಿಗಳ ಸ್ನೇಹಕೂಟದಲ್ಲಿ ಅವರು ತಮ್ಮ ಕ್ರಿಸ್‌ಮಸ್ ಸಂದೇಶವನ್ನು ಹಂಚಿಕೊಂಡರು.

ಯೇಸು ಕ್ರಿಸ್ತರು ಲೋಕಕ್ಕೆ ತಂದ ಪ್ರೀತಿ, ಶಾಂತಿ ಮತ್ತು ಮಾನವೀಯತೆಯ ಸಂದೇಶವನ್ನು ಸ್ಮರಿಸಿದ ಧರ್ಮಾಧ್ಯಕ್ಷರು, ಇಂದಿನ ಸಮಾಜದಲ್ಲಿ ಸತ್ಯ ಮತ್ತು ನ್ಯಾಯದ ಮೌಲ್ಯಗಳನ್ನು ಮರುಸ್ಥಾಪಿಸುವುದು ಅತ್ಯಾವಶ್ಯಕ ಎಂದು ಅಭಿಪ್ರಾಯಪಟ್ಟರು. ಹಿಂಸೆ, ವಂಚನೆ, ತಪ್ಪು ಮಾಹಿತಿ ಮತ್ತು ಪರಸ್ಪರ ಅವಿಶ್ವಾಸ ದಿನೇ ದಿನೇ ಹೆಚ್ಚುತ್ತಿರುವ ಕುರಿತು ಅವರು ಗಂಭೀರ ಕಳವಳ ವ್ಯಕ್ತಪಡಿಸಿದರು.

ಸಂದೇಶದ ಪ್ರಮುಖ ಅಂಶಗಳನ್ನು ವಿವರಿಸಿದ ಅವರು, ಸತ್ಯ, ಪಾರದರ್ಶಕತೆ ಮತ್ತು ನೈತಿಕತೆಯನ್ನು ರಕ್ಷಿಸುವುದು ಕೇವಲ ಕಾನೂನುಬದ್ಧ ಕರ್ತವ್ಯವಲ್ಲ, ಅದು ಸಮಾಜದ ಭವಿಷ್ಯದ ಅಡಿಗಲ್ಲು ಎಂದು ಹೇಳಿದರು. ವ್ಯಕ್ತಿಯ ಖಾಸಗಿತನ, ಗೌರವಯುತ ಜೀವನ ಮತ್ತು ಧಾರ್ಮಿಕ ಸ್ವಾತಂತ್ರ್ಯದಂತಹ ಮೂಲಭೂತ ಹಕ್ಕುಗಳು ಅಪಾಯದ ಅಂಚಿನಲ್ಲಿರುವುದನ್ನು ಸೂಚಿಸಿ, ಜನಪ್ರತಿನಿಧಿಗಳು, ಸರ್ಕಾರಗಳು ಮತ್ತು ಆಡಳಿತ ಸಂಸ್ಥೆಗಳು ಸತ್ಯನಿಷ್ಠ ಹಾಗೂ ಪಾರದರ್ಶಕ ಆಡಳಿತವನ್ನು ಬೆಳೆಸಿಕೊಳ್ಳಬೇಕೆಂದು ಕರೆ ನೀಡಿದರು.

ಅಸತ್ಯ, ಭ್ರಷ್ಟಾಚಾರ ಮತ್ತು ಹಿಂಸೆಗೆ ಬದಲಾಗಿ ಸಂವಾದ, ಸಹಬಾಳ್ವೆ ಮತ್ತು ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳುವಂತೆ ಮನವಿ ಮಾಡಿದ ಧರ್ಮಾಧ್ಯಕ್ಷರು, ಜಾತಿ–ಧರ್ಮ–ಕುಲದ ಆಧಾರದ ಮೇಲೆ ಸಮಾಜವನ್ನು ವಿಭಜಿಸುವ ಪ್ರವೃತ್ತಿ ನಿಲ್ಲಬೇಕು ಹಾಗೂ ಮುಗ್ಧ ಜನರನ್ನು ವಂಚಕರಿಂದ ರಕ್ಷಿಸಬೇಕು ಎಂದು ಒತ್ತಿ ಹೇಳಿದರು.

ಈ ಸಂದರ್ಭದಲ್ಲಿ ಮಂಗಳೂರು ಧರ್ಮಕ್ಷೇತ್ರದ ಶ್ರೇಷ್ಠ ಗುರು ವಂದನೀಯ ಮ್ಯಾಕ್ಸಿಮ್ ಎಲ್. ನೊರೊನ್ಹಾ, ಸಾರ್ವಜನಿಕ ಸಂಪರ್ಕ ಅಧಿಕಾರಿಗಳಾದ ವಂದನೀಯ ಡಾ. ಜೆ.ಬಿ. ಸಲ್ದಾನ್ಹಾ ಹಾಗೂ ರೋಯ್ ಕ್ಯಾಸ್ಟೆಲಿನೋ, ಧರ್ಮಕ್ಷೇತ್ರದ ಪಾಲನಾ ಪರಿಷತ್ ಕಾರ್ಯದರ್ಶಿ ಡಾ| ಜಾನ್ ಡಿಸಿಲ್ವಾ, ಮಾಧ್ಯಮ ಪ್ರತಿನಿಧಿ ಎಲಿಯಾಸ್ ಫೆರ್ನಾಂಡಿಸ್, ಕೆನರಾ ಕಮ್ಯುನಿಕೇಶನ್ ಸೆಂಟರ್ ಇದರ ನಿರ್ದೇಶಕರಾದ ವಂದನೀಯ ಫಾದರ್ ಅನಿಲ್ ಐವನ್ ಫೆರ್ನಾಂಡಿಸ್, ಧರ್ಮಕ್ಷೇತ್ರದ ವಾರಪತ್ರಿಕೆ ರಾಕ್ಣೊ ಇದರ ಸಂಪಾದಕರಾದ ವಂದನೀಯ ಫಾದರ್ ರೂಪೇಶ್ ಮಾಡ್ತ, ಎಸ್ಟೇಟ್ ಮ್ಯಾನೆಜರ್ ವಂದನೀಯ ಫಾದರ್ ಮ್ಯಾಕ್ಸಿಮ್ ರೊಸಾರಿಯೊ, ಧರ್ಮಾಧ್ಯಕ್ಷರ ಕಾರ್ಯದರ್ಶಿ ವಂದನೀಯ ಫಾದರ್ ಐವನ್ ಡಿಸೋಜಾ ಹಾಗೂ ಪ್ರೊಕ್ಯುರೇಟರ್ ವಂದನೀಯ ಫಾದರ್ ಜಗದೀಶ್ ಪಿಂಟೊ ಉಪಸ್ಥಿತರಿದ್ದರು.

ಬಿಷಪ್ ರವರ ಪವಿತ್ರ ಕ್ರಿಸ್‌ಮಸ್‌ ಪೂಜಾ ವಿಧಿವಿಧಾನಗಳು:

  • ಕ್ರಿಸ್‌ಮಸ್‌ ಹಬ್ಬದ ಜಾಗರಣೆ ಬಲಿಪೂಜೆ: 2025 ಡಿಸೆಂಬರ್ 24, ಬುಧವಾರ ಸಂಜೆ 7:15 ಕ್ಕೆ ಮಂಗಳೂರಿನ ರೊಸಾರಿಯೋ ಕೆಥೆಡ್ರಲ್‌ನಲ್ಲಿ ಧರ್ಮಾಧ್ಯಕ್ಷರಾದ ಡಾ| ಪೀಟರ್ ಪಾವ್ ಸಲ್ದಾನ್ಹಾ ಅವರ ನೇತೃತ್ವದಲ್ಲಿ ನಡೆಯಲಿದೆ.
  • ಹಬ್ಬದ ದಿನದ ಬಲಿಪೂಜೆ: 2025 ಡಿಸೆಂಬರ್ 25 ರಂದು ಬೆಳಿಗ್ಗೆ 6:00 ಗಂಟೆಗೆ ಜೆಪ್ಪುವಿನ ಸೈಂಟ್ ಅಂತೋನಿ ಆಶ್ರಮದಲ್ಲಿ ಜರುಗಲಿದೆ.

ಕೊನೆಯಲ್ಲಿ, ಸತ್ಯ ಮತ್ತು ಶಾಂತಿಯ ಬೆಳಕು ಕೇವಲ ನಮ್ಮ ಮನೆಗಳಲ್ಲಿ ಮಾತ್ರವಲ್ಲದೆ, ರಾಷ್ಟ್ರದ ನಿರ್ಧಾರಗಳಲ್ಲಿಯೂ ಪ್ರತಿಫಲಿಸಲಿ ಎಂದು ಆಶಿಸಿ, ನಾಡಿನ ಸಮಸ್ತರಿಗೂ ಹಬ್ಬದ ಶುಭಾಶಯಗಳನ್ನು ಕೋರಿದರು.

You may also like

News

ಓಣಂ ಸಂಭ್ರಮದ ನಡುವೆ ದುರಂತ – ತೆರೆದ ಬಾವಿಗೆ ಬಿದ್ದು 10ನೇ ತರಗತಿ ವಿದ್ಯಾರ್ಥಿ ಸಾವು

ಓಣಂ ಆಚರಣೆಯ ಸಂಭ್ರಮದ ನಡುವೆ ಸಂಭವಿಸಿದ ದಾರುಣ ಘಟನೆಯೊಂದರಲ್ಲಿ ಶಾಲಾ ವಿದ್ಯಾರ್ಥಿಯೊಬ್ಬ ತೆರೆದ ಬಾವಿಗೆ ಆಕಸ್ಮಿಕವಾಗಿ ಬಿದ್ದು ಮೃತಪಟ್ಟ ಘಟನೆ ಕನ್ಹಂಗಾಡ್ ಸಮೀಪದ ಚೀಮೇನಿಯಲ್ಲಿ ನಡೆದಿದೆ. ಮೃತ
News

National Library Day Celebrated at Father Muller Charitable Institutions Mangaluru

The National Library Day was celebrated at Father Muller Charitable Institutions Central Library on 29th August 2026 at 3.00p.m. in

You cannot copy content of this page