ಮಂಗಳೂರು ನಗರದಲ್ಲಿ ಶಾಶ್ವತ ಹೆಲಿಪ್ಯಾಡ್ ನಿರ್ಮಾಣಕ್ಕೆ ಚಿಂತನೆ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ.
ಮಂಗಳೂರು ನಗರದಲ್ಲಿ ಶಾಶ್ವತ ಹೆಲಿಪ್ಯಾಡ್ ನಿರ್ಮಿಸುವ ಅಗತ್ಯವಿದ್ದು, ಈ ಸಂಬಂಧ ಸೂಕ್ತ ಜಾಗ ಗುರುತಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ತಿಳಿಸಿದ್ದಾರೆ.

ಫೆಬ್ರವರಿ 5ರಂದು ಗುರುವಾರ ಮಂಗಳೂರು ಪ್ರೆಸ್ ಕ್ಲಬ್ನಲ್ಲಿ ಪತ್ರಕರ್ತರೊಂದಿಗೆ ನಡೆದ ಸಂವಾದದಲ್ಲಿ ಮಾತನಾಡಿದ ಅವರು, ಮಂಗಳೂರಿನಲ್ಲಿ ಅನೇಕ ಪ್ರಮುಖ ಆಸ್ಪತ್ರೆಗಳು ಇರುವುದರಿಂದ ವೈದ್ಯಕೀಯ ತುರ್ತು ಸೇವೆಗಳಿಗೆ, ವಿಐಪಿ ಭೇಟಿ ಹಾಗೂ ಹೆಲಿ-ಟೂರಿಸಂ ದೃಷ್ಟಿಯಿಂದ ಶಾಶ್ವತ ಹೆಲಿಪ್ಯಾಡ್ ಅವಶ್ಯಕವಾಗಿದೆ ಎಂದರು. ಪ್ರಸ್ತುತ ನಗರದಲ್ಲಿ ಪ್ರತ್ಯೇಕ ಹೆಲಿಪ್ಯಾಡ್ ಇಲ್ಲದ ಕಾರಣ ವಿಐಪಿಗಳ ಆಗಮನದ ವೇಳೆ ಪ್ರತಿಬಾರಿಯೂ ಸಮಸ್ಯೆ ಎದುರಾಗುತ್ತಿದೆ. ಈ ಹಿನ್ನೆಲೆಯಲ್ಲಿ ಶಾಶ್ವತ ಹೆಲಿಪ್ಯಾಡ್ ನಿರ್ಮಾಣದ ಕುರಿತು ಚಿಂತನೆ ನಡೆಸಲಾಗುತ್ತಿದೆ ಎಂದು ಹೇಳಿದರು. ಹೆಲಿ-ಟೂರಿಸಂ ಅಭಿವೃದ್ಧಿಗೂ ಶಾಶ್ವತ ಹೆಲಿಪ್ಯಾಡ್ ಹೆಚ್ಚು ಅನುಕೂಲಕರವಾಗಲಿದೆ ಎಂದರು.


ರಾಷ್ಟ್ರೀಯ ಹೆದ್ದಾರಿಯ ನಂತೂರಿನಲ್ಲಿ ಫ್ಲೈಓವರ್ ನಿರ್ಮಾಣಕ್ಕೆ ಸಂಬಂಧಿಸಿದ ಸಮಗ್ರ ಯೋಜನಾ ವರದಿ (ಡಿಪಿಆರ್) ತಯಾರಿಕೆ ಅಂತಿಮ ಹಂತದಲ್ಲಿದ್ದು, ಫೆಬ್ರವರಿ ಅಂತ್ಯದೊಳಗೆ ಡಿಪಿಆರ್ ಪೂರ್ಣಗೊಳ್ಳಲಿದೆ. ಬೈಕಂಪಾಡಿ–ಕೆಐಒಸಿಎಲ್ ಹಾಗೂ ನಂತೂರು–ಕೆಪಿಟಿ ಎರಡೂ ಕಡೆ ಫ್ಲೈಓವರ್ ನಿರ್ಮಾಣ ಖಚಿತವಾಗಿದೆ. ಕೆಪಿಟಿ ಬಳಿ ಪ್ರಸ್ತಾಪಿತ ಫ್ಲೈಓವರ್ ರದ್ದಾಗಿಲ್ಲ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ ಎಂದು ಜಿಲ್ಲಾಧಿಕಾರಿ ವಿವರಿಸಿದರು.


ಕನ್ನಡ ಕಡ್ಡಾಯ ಎಂದು ಹೇಳುವುದರಿಂದ ಇತರ ಭಾಷೆಗಳ ಬಳಕೆಗೆ ನಿರ್ಬಂಧವಿದೆ ಎಂದರ್ಥವಲ್ಲ. ಕನ್ನಡ ಭಾಷೆಯ ಬಳಕೆಯನ್ನು ಹೆಚ್ಚಿಸುವುದು ಸರ್ಕಾರದ ಉದ್ದೇಶವಾಗಿದೆ. ಅಂಗಡಿಗಳ ನಾಮಫಲಕಗಳಲ್ಲಿ ಕನ್ನಡ ಬಳಸದಿದ್ದರೆ ವ್ಯಾಪಾರ ಪರವಾನಗಿ ರದ್ದುಪಡಿಸುವ ಆದೇಶ ನೀಡಿಲ್ಲ ಹಾಗೂ ಅಂತಹ ಆದೇಶ ನೀಡಲು ಸಾಧ್ಯವಿಲ್ಲ. ಕರ್ನಾಟಕದಲ್ಲಿ ನಾಮಫಲಕಗಳು ಕನ್ನಡದಲ್ಲಿರಬೇಕು. ಕನ್ನಡದ ಜೊತೆಗೆ ಇತರ ಭಾಷೆಗಳ ಬಳಕೆಗೆ ಯಾವುದೇ ನಿರ್ಬಂಧ ಇಲ್ಲ. ಯಾವುದೇ ಭಾಷೆಯಲ್ಲಿ ಬೋರ್ಡ್ ಇರಬಹುದು, ಆದರೆ ಕನ್ನಡದಲ್ಲೂ ಇರಬೇಕು ಎಂಬುದು ಕಡ್ಡಾಯ ಎಂದು ಅವರು ಸ್ಪಷ್ಟಪಡಿಸಿದರು.


ಪ್ರೆಸ್ ಕ್ಲಬ್ಗೆ ಪ್ರಥಮ ಬಾರಿಗೆ ಆಗಮಿಸಿದ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರನ್ನು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ವಾರ್ತಾಧಿಕಾರಿ ಖಾದರ್ ಶಾ, ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ, ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ, ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್., ಪ್ರಧಾನ ಕಾರ್ಯದರ್ಶಿ ರಾಜೇಶ್ ಕೆ. ಪೂಜಾರಿ, ರಾಜ್ಯ ಸಮಿತಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ, ಪ್ರೆಸ್ ಕ್ಲಬ್ ಉಪಾಧ್ಯಕ್ಷ ಮಹಮ್ಮದ್ ಆರಿಫ್ ಪಡುಬಿದ್ರಿ ಉಪಸ್ಥಿತರಿದ್ದರು.




