August 27, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ವಿಟ್ಲ ಬಸ್ ನಿಲ್ದಾಣ ಬಳಿ ಭೀಕರ ಅಪಘಾತ

ಬೈಕ್ ಢಿಕ್ಕಿಯಾಗಿ ಮಹಿಳೆ ಸಾವು – ಸವಾರನ ಸ್ಥಿತಿ ಗಂಭೀರ

ವಿಟ್ಲ: ಇಲ್ಲಿನ ಬಸ್ ನಿಲ್ದಾಣದ ಸಮೀಪ ಇಂದು ಫೆಬ್ರವರಿ 8ರಂದು ಭಾನುವಾರ ಬೆಳಿಗ್ಗೆ ಸಂಭವಿಸಿದ ದಾರುಣ ರಸ್ತೆ ಅಪಘಾತದಲ್ಲಿ ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರು ಮೃತಪಟ್ಟು, ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ವಿಟ್ಲ ಮುಡ್ನೂರು ಗ್ರಾಮದ ಮರುವಾಳ ನಿವಾಸಿ 68 ವರ್ಷ ಪ್ರಾಯದ ಸೀತಾ ಶೆಟ್ಟಿ ಎಂದು ಗುರುತಿಸಲಾಗಿದೆ. ಅಪಘಾತದ ತೀವ್ರತೆಗೆ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಯ ವಿವರ:

ಪುತ್ತೂರು ಕಡೆಯಿಂದ ಅತೀ ವೇಗವಾಗಿ ಬಂದ ಬೈಕ್, ಬಸ್ ನಿಲ್ದಾಣದ ಬಳಿ ರಸ್ತೆ ದಾಟುತ್ತಿದ್ದ ಸೀತಾ ಶೆಟ್ಟಿ ಅವರಿಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಬೈಕ್ ನಿಯಂತ್ರಣ ತಪ್ಪಿ ಸುಮಾರು 50 ಮೀಟರ್‌ಗಳಷ್ಟು ದೂರ ರಸ್ತೆಯಲ್ಲಿ ಎಳೆಯಲ್ಪಟ್ಟಿದೆ. ಘಟನೆಯಲ್ಲಿ ಸವಾರನಿಗೆ ತಲೆಯ ಭಾಗಕ್ಕೆ ತೀವ್ರ ಪೆಟ್ಟಾಗಿದ್ದು, ಆತನ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ. ಬೈಕ್ ಸವಾರ ಪುತ್ತೂರು ಮೂಲದವನೆಂದು ಗುರುತಿಸಲಾಗಿದೆ.

ಮಾನವೀಯತೆ ಮೆರೆದ ಪ್ರತಾಪ್:

ಅಪಘಾತದ ನಂತರ ರಸ್ತೆಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಸವಾರನನ್ನು ಕಂಡು ಜನಸ್ತೋಮ ಜಮಾಯಿಸಿದ್ದರೂ, ಯಾರೂ ಸಹಾಯಕ್ಕೆ ಬಂದಿರಲಿಲ್ಲ. ಈ ಸಂದರ್ಭದಲ್ಲಿ ಕಾಶಿಮಠ ನಿವಾಸಿ ಪ್ರತಾಪ್ ಎಂಬುವವರು ತಕ್ಷಣ ಕಾರ್ಯಪ್ರವೃತ್ತರಾಗಿ, ಗಾಯಾಳುವನ್ನು ತಮ್ಮದೇ ದ್ವಿಚಕ್ರ ವಾಹನದಲ್ಲಿ ಕೂರಿಸಿಕೊಂಡು ಖಾಸಗಿ ಆಸ್ಪತ್ರೆಗೆ ದಾಖಲಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಅವರ ಈ ಸಮಯೋಚಿತ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.

ಸ್ಥಳಕ್ಕೆ ಭೇಟಿ :

ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ ವಿಟ್ಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ.

You may also like

News

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ DAPC ಬಿಷಪ್‌ಗಳು – ಕ್ರೈಸ್ತ ಸಮುದಾಯದ ಬೇಡಿಕೆಗಳ ಕುರಿತು ಮನವಿ

ಡಯಾಸಿಸ್ ಆಫ್ ಆಲ್ ಪ್ರೊಟೆಸ್ಟಂಟ್ ಚರ್ಚಸ್ (DAPC) ನಿಯೋಗವು ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ, ರಾಜ್ಯದ ಪ್ರೊಟೆಸ್ಟಂಟ್, ಪೆಂಟೆಕೋಸ್ಟಲ್ ಹಾಗೂ ಸ್ವತಂತ್ರ ಕ್ರೈಸ್ತ
News

ಮೊಬೈಲ್‌ಗಾಗಿ ಜಗಳ ತಂಗಿಯ ಕೊಲೆ – ಸಹೋದರ ಸ್ಯಾಮ್ಸನ್ ಫ್ರಾನ್ಸಿಸ್ ಕುಟಿನ್ಹಾನಿಗೆ 5 ವರ್ಷ ಜೈಲು!

ಮೊಬೈಲ್ ವಿಚಾರವಾಗಿ ನಡೆದ ಜಗಳದ ವೇಳೆ ಸ್ವಂತ ತಂಗಿಯ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿ ಆಕೆಯ ಸಾವಿಗೆ ಕಾರಣವಾದ ಪ್ರಕರಣದಲ್ಲಿ ಆರೋಪಿಗೆ ಮಂಗಳೂರು ನ್ಯಾಯಾಲಯ ಶಿಕ್ಷೆ ವಿಧಿಸಿದೆ.

You cannot copy content of this page