ದಕ್ಷಿಣ ಕನ್ನಡಕ್ಕೆ ಬಜೆಟ್ ಕೊಡುಗೆ – ಮಾಣಿಯಲ್ಲಿ ನೂತನ ಪೊಲೀಸ್ ಠಾಣೆ ಸ್ಥಾಪನೆಗೆ ಅಧಿಕೃತ ಮುದ್ರೆ
ಬಹುಕಾಲದ ಬೇಡಿಕೆಗೆ ಸ್ಪಂದನೆ ಮಾಡಿದ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್

ರಾಜ್ಯ ಸರ್ಕಾರವು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಜನತೆಯ ಬಹುಕಾಲದ ಬೇಡಿಕೆಯಾಗಿದ್ದ ಬಂಟ್ವಾಳ ತಾಲೂಕಿನ ಮಾಣಿ (Mani) ಗ್ರಾಮದಲ್ಲಿ ನೂತನ ಪೊಲೀಸ್ ಠಾಣೆಯನ್ನು ಸ್ಥಾಪಿಸಲು ಅಧಿಕೃತವಾಗಿ ಅನುಮೋದನೆ ನೀಡಲಾಗಿದೆ.


ಬಜೆಟ್ ಪ್ರತಿಯ ಅನುಬಂಧ-8ರ ಕಂಡಿಕೆ 464ರ ಅನ್ವಯ, ರಾಜ್ಯದಲ್ಲಿ ಹೊಸದಾಗಿ ಪ್ರಾರಂಭವಾಗಲಿರುವ ಪೊಲೀಸ್ ಠಾಣೆಗಳ ಪಟ್ಟಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮಾಣಿ ಪೊಲೀಸ್ ಠಾಣೆಗೆ ಮೊದಲ ಆದ್ಯತೆ ನೀಡಲಾಗಿದೆ. ಗೃಹ ಇಲಾಖೆಯ (ಒಳಾಡಳಿತ) ಅಡಿಯಲ್ಲಿ ಈ ಠಾಣೆಯು ಕಾರ್ಯನಿರ್ವಹಿಸಲಿದ್ದು, ಈ ಭಾಗದ ಕಾನೂನು ಸುವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಇದು ಪ್ರಮುಖ ಹೆಜ್ಜೆಯಾಗಿದೆ.

ಹೆಚ್ಚಿದ ಭದ್ರತೆ:
ಮಾಣಿ ಭಾಗವು ರಾಷ್ಟ್ರೀಯ ಹೆದ್ದಾರಿಯ ಪ್ರಮುಖ ಜಂಕ್ಷನ್ ಆಗಿರುವುದರಿಂದ ಮತ್ತು ದಿನೇ ದಿನೇ ಬೆಳೆಯುತ್ತಿರುವ ಜನಸಂಖ್ಯೆಯ ಹಿನ್ನೆಲೆಯಲ್ಲಿ ಇಲ್ಲಿ ಪ್ರತ್ಯೇಕ ಪೊಲೀಸ್ ಠಾಣೆಯ ಅಗತ್ಯವಿತ್ತು. ಸರ್ಕಾರದ ಈ ನಿರ್ಧಾರದಿಂದ ಸ್ಥಳೀಯ ನಿವಾಸಿಗಳಿಗೆ ಹಾಗೂ ಪ್ರಯಾಣಿಕರಿಗೆ ಹೆಚ್ಚಿನ ಸುರಕ್ಷತೆ ದೊರೆಯಲಿದ್ದು, ಅಪರಾಧ ತಡೆಗಟ್ಟುವಿಕೆಗೆ ಸಹಕಾರಿಯಾಗಲಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾಣಿ ಮಾತ್ರವಲ್ಲದೆ, ‘ಸಜೀಪನಡು’ವಿನಲ್ಲೂ ನೂತನ ಪೊಲೀಸ್ ಠಾಣೆ ಸ್ಥಾಪನೆಗೆ ಬಜೆಟ್ನಲ್ಲಿ ಅವಕಾಶ ಕಲ್ಪಿಸಲಾಗಿದೆ. ಸರ್ಕಾರದ ಈ ಘೋಷಣೆಗೆ ಸ್ಥಳೀಯ ಸಾರ್ವಜನಿಕ ವಲಯದಿಂದ ವ್ಯಾಪಕ ಶ್ಲಾಘನೆ ವ್ಯಕ್ತವಾಗಿದೆ.




