ಮುದರಂಗಡಿ ಉದ್ಯಮಿ ಡೇವಿಡ್ ಡಿಸೋಜ ಹತ್ಯೆ – ಕೆಲವೇ ಗಂಟೆಗಳಲ್ಲಿ ಉಡುಪಿ ಪೊಲೀಸರಿಂದ ಆರೋಪಿ ರಾಜು ಬಂಧನ
ಮುದರಂಗಡಿ ಪೇಟೆಯಲ್ಲಿ ಹಾಡಹಗಲೇ ಉದ್ಯಮಿ ಡೇವಿಡ್ ಡಿಸೋಜ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿ ಪರಾರಿಯಾಗಿದ್ದ ಆರೋಪಿಗಳ ಪೈಕಿ ಒಬ್ಬನನ್ನು ಪೊಲೀಸರು ಕೆಲವೇ ಗಂಟೆಗಳಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧನದ ವೇಳೆ ಆರೋಪಿ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಈ ವೇಳೆ ಕಾಪು ಪಿಎಸ್ಐ ತೇಜಸ್ವಿ ಅವರು ಆರೋಪಿಯ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ಕಾಪು ತಾಲೂಕಿನ ಮುದರಂಗಡಿ ಪೇಟೆಯಲ್ಲಿ ನಿನ್ನೆ ಆಗಸ್ಟ್ 7ರಂದು ಶುಕ್ರವಾರ ಅಪರಾಹ್ನ ನಡೆದ ಗುಂಡಿನ ದಾಳಿಯಲ್ಲಿ ಪ್ರಿನ್ಸ್ ಪಾಯಿಂಟ್ ಉದ್ಯಮ ಸಂಸ್ಥೆಯ ಮಾಲೀಕರಾಗಿದ್ದ 55 ವರ್ಷ ಪ್ರಾಯದ ಡೇವಿಡ್ ಡಿಸೋಜ ಮೃತಪಟ್ಟಿದ್ದರು. ಚರ್ಚ್ ಎದುರು ಮಧ್ಯಾಹ್ನ ಸುಮಾರು 3.50ರ ವೇಳೆಗೆ ಈ ಘಟನೆ ನಡೆದಿತ್ತು.

ಮಾಹಿತಿಯ ಪ್ರಕಾರ, ಬೈಕ್ನಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳು ಮುದರಂಗಡಿ ಪೇಟೆಯಲ್ಲಿ ಹೊಂಚು ಹಾಕಿ ಡೇವಿಡ್ ಅವರಿಗಾಗಿ ಕಾಯುತ್ತಿದ್ದರು. ಅವರು ತಮ್ಮ ವಾಹನ ಏರಲು ಮುಂದಾಗುತ್ತಿದ್ದಂತೆ ಹಿಂದಿನಿಂದ ಬಂದ ದುಷ್ಕರ್ಮಿಯೊಬ್ಬ ಅತೀ ಸಮೀಪದಿಂದ ಅವರ ತಲೆಗೆ ಗುಂಡು ಹಾರಿಸಿದ್ದಾನೆ. ಗುಂಡೇಟಿನಿಂದ ಡೇವಿಡ್ ನೆಲಕ್ಕುರುಳಿದ ಬಳಿಕವೂ ಅವರ ಎದೆ ಭಾಗಕ್ಕೆ ಮತ್ತೆರಡು ಗುಂಡುಗಳನ್ನು ಹಾರಿಸಲಾಗಿದೆ ಎನ್ನಲಾಗಿದೆ. ತೀವ್ರವಾಗಿ ಗಾಯಗೊಂಡು ರಕ್ತಸ್ರಾವಕ್ಕೊಳಗಾದ ಡೇವಿಡ್ ಅವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಮಾರ್ಗಮಧ್ಯೆಯೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಗುಂಡಿನ ದಾಳಿಯ ಬಳಿಕ ಇಬ್ಬರು ಆರೋಪಿಗಳು ಬೈಕ್ನಲ್ಲಿ ಪರಾರಿಯಾಗಿದ್ದರು.

ಘಟನೆಯ ಬಳಿಕ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ರಾಜು ಎಂಬಾತನನ್ನು ಬಂಧಿಸಿದ್ದಾರೆ. ಕಾಪು ಪಿಎಸ್ಐ ತೇಜಸ್ವಿ ಹಾಗೂ ಕಾರ್ಕಳ ಗ್ರಾಮಾಂತರ ಪಿಎಸ್ಐ ಪ್ರಸನ್ನ ಅವರ ತಂಡ ಆರೋಪಿಯನ್ನು ಬಂಧಿಸಿ ಕರೆತರುತ್ತಿದ್ದ ವೇಳೆ ಬೈಂದೂರು ಸಮೀಪದ ಒತ್ತಿನೆಣೆ ಬಳಿ ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ರಾಜು ಯತ್ನಿಸಿದ್ದಾನೆ ಎನ್ನಲಾಗಿದೆ.
ಈ ಸಂದರ್ಭದಲ್ಲಿ ಕಾಪು ಪಿಎಸ್ಐ ತೇಜಸ್ವಿ ಅವರು ತಮ್ಮ ಸರ್ವೀಸ್ ಪಿಸ್ತೂಲ್ನಿಂದ ರಾಜುವಿನ ಕಾಲಿಗೆ ಗುಂಡು ಹಾರಿಸಿ ಆತನನ್ನು ವಶಕ್ಕೆ ಪಡೆದಿದ್ದಾರೆ. ಘಟನೆಯಲ್ಲಿ ಪಿಎಸ್ಐ ತೇಜಸ್ವಿ ಅವರಿಗೂ ಗಾಯವಾಗಿದ್ದು, ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಾದ ಹರಿರಾಮ್ ಶಂಕರ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದ್ದಾರೆ.


ಇದೇ ವೇಳೆ, ಗುಂಡಿನ ದಾಳಿ ನಡೆಸಿದ ದುಷ್ಕರ್ಮಿಯ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಗಡ್ಡಧಾರಿಯಾಗಿದ್ದ ಆರೋಪಿ ಕೈಯಲ್ಲಿ ಪಿಸ್ತೂಲ್ ಹಿಡಿದು ಬೈಕ್ ಏರುತ್ತಿರುವ ದೃಶ್ಯ ಪೊಲೀಸರಿಗೆ ತನಿಖೆಯಲ್ಲಿ ಪ್ರಮುಖ ಸುಳಿವು ನೀಡಿದೆ. ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಒಬ್ಬ ಆರೋಪಿಯನ್ನು ಬಂಧಿಸಿರುವ ಪೊಲೀಸರ ಕ್ಷಿಪ್ರ ಕಾರ್ಯಾಚರಣೆಗೆ ಸಾರ್ವಜನಿಕರಿಂದ ಶ್ಲಾಘನೆ ವ್ಯಕ್ತವಾಗಿದೆ. ಪ್ರಕರಣದಲ್ಲಿ ಭಾಗಿಯಾಗಿರುವ ಮತ್ತೊಬ್ಬ ಆರೋಪಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಹತ್ಯೆಗೆ ನಿಖರ ಕಾರಣವೇನು ಎಂಬುದನ್ನು ಪತ್ತೆಹಚ್ಚಲು ತನಿಖೆ ನಡೆಯುತ್ತಿದೆ.



