ಪೊಂಪೈ ಕಾಲೇಜು ಐಕಳದಲ್ಲಿ ಮಾದಕ ವಸ್ತು, ಮಾನವ ಕಳ್ಳಸಾಗಣೆ ವಿರುದ್ಧ ಜಾಗೃತಿ
ಯುವಜನತೆ ಜಾಗೃತರಾದರೆ ಸಮಾಜ ಸುಧಾರಣೆ ಸಾಧ್ಯ – ಗಣೇಶ್ ಕುಮಾರ್

ಪೊಂಪೈ ಕಾಲೇಜು ಐಕಳದ ಆಂತರಿಕ ಗುಣಮಟ್ಟ ಭರವಸೆ ಕೋಶ, ಮಾನವ ಕಳ್ಳಸಾಗಣೆ ವಿರೋಧಿ ಸಂಘ, ಮಾದಕ ದ್ರವ್ಯ ವಿರೋಧಿ ಮತ್ತು ನಿಯಂತ್ರಣ ಕೋಶ ಹಾಗೂ ಮಹಿಳಾ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಮಾದಕ ದ್ರವ್ಯ ಹಾಗೂ ಮಾನವ ಕಳ್ಳಸಾಗಣೆ ಸೇರಿದಂತೆ ಸಮಾಜ ವಿರೋಧಿ ಚಟುವಟಿಕೆಗಳ ವಿರುದ್ಧ ಜಾಗೃತಿ ಕಾರ್ಯಕ್ರಮ ಕಾಲೇಜಿನ ಪ್ರೊವಿಡೆನ್ಸ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಕಿನ್ನಿಗೋಳಿಯ ಯುಗಪುರುಷ ಸಂಸ್ಥೆಯ ಭುವನಾಭಿರಾಮ ಉಡುಪ ಭಾಗವಹಿಸಿ ಪ್ರೋತ್ಸಾಹದಾಯಕ ನುಡಿಗಳನ್ನಾಡಿದರು.

ಮೂಲ್ಕಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಯಶವಂತ್ ಕುಮಾರ್ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ, ಮಾದಕ ವಸ್ತುಗಳ ದುಷ್ಪರಿಣಾಮಗಳು, ಮಾದಕ ವ್ಯಸನದಿಂದ ಉಂಟಾಗುವ ಆರೋಗ್ಯ ಹಾಗೂ ಸಾಮಾಜಿಕ ಸಮಸ್ಯೆಗಳು, ಅಪರಾಧ ಚಟುವಟಿಕೆಗಳು ಮತ್ತು ಸಮಾಜ ವಿರೋಧಿ ಕೃತ್ಯಗಳಿಂದ ದೂರವಿರುವ ಅಗತ್ಯತೆಯ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಇದೇ ವೇಳೆ ಮಾನವ ಕಳ್ಳಸಾಗಣೆ ಹಾಗೂ ಮಹಿಳೆಯರ ಸುರಕ್ಷತೆ ಕುರಿತು ಜಾಗೃತಿ ಮೂಡಿಸಿದರು.


ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ಗಣೇಶ್ ಕುಮಾರ್ ಮಾತನಾಡಿ, ಮನುಷ್ಯನ ಮೂಲಭೂತ ಅಗತ್ಯಗಳಷ್ಟೇ ಆರೋಗ್ಯವೂ ಮಹತ್ವದ್ದಾಗಿದೆ. ವಿದ್ಯಾರ್ಥಿಗಳು ಜಾಗೃತರಾಗುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ಕೊಡುಗೆ ನೀಡಬಹುದು ಎಂದು ಹೇಳಿದರು.
ಯೋಜನೆಯ ಮೇಲ್ವಿಚಾರಕಿ ಗೀತಾ ಅವರು ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯ ಸೇವನೆಯಿಂದ ದೂರವಿದ್ದು, ಸಮಾಜದಲ್ಲಿ ಜಾಗೃತಿ ಮೂಡಿಸುವ ಕುರಿತು ಪ್ರತಿಜ್ಞೆ ಬೋಧಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ. ಡಾ. ಪುರುಷೋತ್ತಮ ಕೆ.ವಿ. ವಹಿಸಿದ್ದರು. ಗಿರೀಶ್, ನಾರಾಯಣ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.


ಮಾದಕ ದ್ರವ್ಯ ವಿರೋಧಿ ಘಟಕದ ಸಂಯೋಜಕ ಪೃಥ್ವಿರಾಜ್ ಬಿ., ಮಾನವ ಕಳ್ಳಸಾಗಣೆ ವಿರೋಧಿ ಘಟಕದ ಸಂಯೋಜಕಿ ಆಶಿತಾ ಜೆ., ಮಹಿಳಾ ಘಟಕದ ಸಂಯೋಜಕಿ ರೇಷ್ಮಾ ಮರ್ಸಿನ್ ಡಿಸೋಜ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೇವಾ ಪ್ರತಿನಿಧಿ ಲೀಲಾ ಉಪಸ್ಥಿತರಿದ್ದರು. ಸತ್ಯ ಕಾರ್ಯಕ್ರಮ ನಿರೂಪಿಸಿದರು. ಝುಲ್ಫಿಯ ಸ್ವಾಗತಿಸಿದರು.



