ಸಾಣೂರು ಜಂಕ್ಷನ್ನಲ್ಲಿ ಮಾಜಿ ಸಚಿವ ರಮಾನಾಥ ರೈ ಕಾರಿಗೆ ಬಸ್ ಡಿಕ್ಕಿ – ಹಲವರಿಗೆ ಗಾಯ
ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಇಂದು ಸೆಪ್ಟೆಂಬರ್ 20ರಂದು ಭಾನುವಾರ ಕಾರ್ಕಳ–ಮೂಡುಬಿದಿರೆ ಹೆದ್ದಾರಿಯ ಸಾಣೂರು ಜಂಕ್ಷನ್ನಲ್ಲಿ ನಡೆದಿದೆ.

ಕಾರ್ಕಳದಿಂದ ಮೂಡುಬಿದಿರೆ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್, ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.

ಅಪಘಾತದಲ್ಲಿ ರಮಾನಾಥ ರೈ ಅವರು ಅಪಾಯದಿಂದ ಪಾರಾಗಿದ್ದು, ಕಾರು ಚಾಲಕ ಹಾಗೂ ಆಪ್ತ ಸಹಾಯಕ ಸೇರಿದಂತೆ ಕೆಲವರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಬಸ್ನಲ್ಲಿದ್ದ ಕೆಲವರಿಗೂ ಗಾಯಗಳಾಗಿರುವ ಮಾಹಿತಿ ಲಭ್ಯವಾಗಿದೆ.

ಅಪಘಾತದ ಬಳಿಕ ಸ್ಥಳೀಯರು ತಕ್ಷಣ ನೆರವಿಗೆ ಧಾವಿಸಿ ಕಾರು ಹಾಗೂ ಬಸ್ನಲ್ಲಿದ್ದ ಗಾಯಾಳುಗಳನ್ನು ಹೊರತೆಗೆದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳ ನಿಖರ ಸಂಖ್ಯೆ ಹಾಗೂ ಅಪಘಾತಕ್ಕೆ ಕಾರಣವೇನು ಎಂಬುದು ಪೊಲೀಸ್ ತನಿಖೆಯಿಂದ ತಿಳಿದುಬರಬೇಕಿದೆ.




